
ತುಮಕೂರು: ಗೋಶಾಲೆಗಳಿಗೆ ಮೇವು ಖರೀದಿಸುವ ವ್ಯವಹಾರದಲ್ಲಿ ತುಮಕೂರು ಜಿಲ್ಲೆ ಒಂದರಲ್ಲೇ ಸುಮಾರು 22 ಕೋಟಿ ರೂಪಾಯಿ ದುರ್ಬಳಕೆ ಆಗಿರುವುದು ಬಹಿರಂಗವಾಗಿದೆ. ತುಮಕೂರು ಜಿಲ್ಲೆಯಲ್ಲಿ ಮೇವು ಖರೀದಿಯಲ್ಲಿ ನಡೆದಿದ್ದ ಹಗರಣವನ್ನು ಸುವರ್ಣ ನ್ಯೂಸ್ನ ಕವರ್ ಸ್ಟೋರಿ ತಂಡ ಬಯಲಿಗೆಳೆದಿತ್ತು. ಈ ಕುರಿತು ಉಪಲೋಕಾಯುಕ್ತರು ತನಿಖೆ ನಡೆಸಿದಾಗ ಹಗರಣ ದೃಢಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 127 ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.
139 ತಾಲ್ಲೂಕುಗಳಲ್ಲಿ ತೀವ್ರ ಬರಗಾಲ ಇದ್ದುದರಿಂದ ಮೇವು ಒದಗಿಸುವಂತೆ ಸರ್ಕಾರ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಡಿಸೆಂಬರ್ ಮತ್ತು ಫೆಬ್ರುವರಿಯಲ್ಲಿ ಗೋಶಾಲೆಗಳನ್ನು ನಿರ್ಮಿಸಲು ಮತ್ತು ಮೇವು ಖರೀದಿಸಿ ವಿತರಿಸಲು ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿತ್ತು.
ಆದರೆ, ತುಮಕೂರು ಜಿಲ್ಲೆಯಲ್ಲಿ ಮೇವು ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ದೂರುಗಳು ಬಂದಿದ್ದವು. ಈ ದೂರು ಬೆನ್ನತ್ತಿದ್ದ ಕವರ್ ಸ್ಟೋರಿ ತಂಡ, ಹಗರಣದ ಇಂಚಿಂಚನ್ನೂ ವರದಿ ಮಾಡಿತ್ತು.
ಮೇವು ಖರೀದಿಸಿರುವ ರಸೀದಿಗಳಿಗೂ, ದಾಸ್ತಾನು ನಿರ್ವಹಣೆ ಪುಸ್ತಕದಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡು ಬಂದಿದೆ. ಏಳು ತಾಲ್ಲೂಕುಗಳ ಗೋಶಾಲೆಗಳ ನಿರ್ವಹಣೆಗೆ ಬಿಡುಗಡೆ ಮಾಡಿದ್ದ 33.96 ಲಕ್ಷ ಅಕ್ರಮ ನಡೆದಿದೆ. ಅದೇ ರೀತಿ ಮೇವು ಖರೀದಿಯಲ್ಲೂ 21.98 ಕೋಟಿ ದುರ್ಬಳಕೆ ಆಗಿದೆ’ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾಗಿದೆ..
ಮೇವು ಖರೀದಿ ಮತ್ತು ಶಾಲೆಗಳ ನಿರ್ವಹಣೆಗೆ ಸರ್ಕಾರ ರಚಿಸಿದ ಮಾರ್ಗಸೂಚಿಗಳನ್ನು ಅಧಿಕಾರಿಗಳು ಪಾಲಿಸಿಲ್ಲ. ಗೋಶಾಲೆಗಳಲ್ಲಿ ವೈಜ್ಞಾನಿಕವಾಗಿ ತೂಕ ಮಾಡುವ ಯಂತ್ರಗಳನ್ನು ಅಳವಡಿಸಿಲ್ಲ. ಕೆಲವೆಡೆ ತೂಕ ಮಾಡದೆ ಮೇವು ವಿತರಿಸಲಾಗಿದೆ. ಗೋಶಾಲೆಗಳಲ್ಲಿ ಉಳಿಯುವ ರೈತರಿಗೆ ಶೌಚಾಲಯ ಸೇರಿ ಯಾವುದೇ ಸೌಲಭ್ಯ ಒದಗಿಸಿಲ್ಲ’ ಎಂದು ವರದಿಯಲ್ಲಿ ವಿವರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.