
ಬೆಂಗಳೂರು (ಫೆ.01): ಮಹದಾಯಿ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವ ಬಗ್ಗೆ ಬಿಜೆಪಿಯವರು ಫೆ.3 ರೊಳಗೆ ಭರವಸೆ ನೀಡದಿದ್ದರೆ ಫೆ. 4 ರಂದು ಬೆಂಗಳೂರು ಬಂದ್ ನಡೆಸಲಾಗುವುದು ಎಂದು ಕನ್ನಡ ಒಕ್ಕೂಟ ಸ್ಪಷ್ಟಪಡಿಸಿದೆ.
ಮಹದಾಯಿ ಹೋರಾಟಗಾರರ ವಿಚಾರವನ್ನು ಪ್ರಧಾನಿಗೆ ಮುಟ್ಟಿಸಲೇಬೇಕು. ಇಲ್ಲವಾದಲ್ಲಿ ಕಳೆದ 3 ವರ್ಷಗಳ ನಿರಂತರ ಹೋರಾಟಕ್ಕೆ ಬೆಲೆ ಇಲ್ಲದಂತಾ ಗುತ್ತದೆ. ಫೆ.4 ರಂದು ಪರಿವರ್ತನಾ ಯಾತ್ರೆ ಸಮಾರೋಪದ ವೇಳೆ ಪ್ರಧಾನಿ ಈ ಬಗ್ಗೆ ಮಾತನಾಡಲಿದ್ದಾರೆ ಎಂಬ ಭರವಸೆ ನೀಡಿದರೆ ಮಾತ್ರ ಹೋರಾಟದಿಂದ ಹಿಂದೆ ಸರಿಯಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
ಉತ್ತರ ಕರ್ನಾಟಕದ ಜನರ ಹಿತದೃಷ್ಟಿಯಿಂದ ನಡೆಸಿರುವ ಹೋರಾಟಕ್ಕೆ ಬೆಲೆ ಸಿಗಬೇಕಾದರೆ, ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಬೇಕು. ಜ.25 ರ ಬಂದ್ ಯಶಸ್ವಿಯಾಗಿದ್ದು, ಫೆ.೪ರಂದೂ ಬಂದ್ ನಡೆಯಲಿದೆ. ರಾಜ್ಯದ ಹಿತಕ್ಕಾಗಿ ನಿರಂತರವಾಗಿ ಹೋರಾಟ ನಡೆಯಲಿದೆ ಎಂದರು.
ಭಾನುವಾರ ಬಂದ್ ಆಚರಣೆಗೆ ಸರ್ಕಾರ ಅನುಮತಿ ನೀಡಿಲ್ಲ. ಹೋರಾಟಗಾರರು ಬೇಕಿದ್ದರೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡುವಂತೆ ಸೂಚಿಸಿದ್ದೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ಬಂದ್ ಕರೆಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆದರೂ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ. ನರೇಂದ್ರ ಮೋದಿ ಬಿಜೆಪಿಯವರಿಗೆ ಮಾತ್ರ ಪ್ರಧಾನಿ ಅಲ್ಲ. ನಮಗೂ ಪ್ರಧಾನಿಗಳೇ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.