
ಬೆಂಗಳೂರು [ಆ.17]: ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜೀನಾಮೆ ಪರ್ವ ಮುಕ್ತಾಯಗೊಂಡಿದೆ ಎಂಬ ನಿರೀಕ್ಷೆಯು ಹುಸಿಯಾಗುವ ಸಾಧ್ಯತೆ ಇದ್ದು, ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಪ್ರಾರಂಭವಾಗುವ ಸಂಭವವಿದೆ. ತಮ್ಮ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್ನ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದ ಹಲವು ಶಾಸಕರು ಬಿಜೆಪಿಯತ್ತ ಒಲವು ತೋರಿದ್ದು, ಈ ಬಗ್ಗೆ ತೆರೆಮರೆಯಲ್ಲಿ ಬಿಡುವಿಲ್ಲದ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.
ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ರಾಜೀನಾಮೆಗೆ ಮುಂದಾಗಿದ್ದಾರೆ. ಜೆಡಿಎಸ್ ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು ರಾಜೀನಾಮೆ ನೀಡಿ ಪಕ್ಷಕ್ಕೆ ಬೆಂಬಲ ಸೂಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮೂರನೇ ಎರಡು ಭಾಗದಷ್ಟುಶಾಸಕರು ರಾಜೀನಾಮೆ ನೀಡಿದರೆ ಶಾಸಕ ಸ್ಥಾನಕ್ಕೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಜೆಡಿಎಸ್ನ ಸಂಖ್ಯಾಬಲದ ಆಧಾರದ ಮೇಲೆ ಆ ಪ್ರಮಾಣದಲ್ಲಿ ಜೆಡಿಎಸ್ ಶಾಸಕರು ಬಿಜೆಪಿಯತ್ತ ವಲಸೆ ಹೋಗುವ ನಿಟ್ಟಿನಲ್ಲಿಯೂ ಸಮಾಲೋಚನೆ ನಡೆಯುತ್ತಿದೆ. ಆದರೆ, ಎಷ್ಟುಸಂಖ್ಯೆಯಲ್ಲಿ ಶಾಸಕರು ಬಿಜೆಪಿಯತ್ತ ಆಕರ್ಷಿತರಾಗಿದ್ದಾರೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ.
ಜೆಡಿಎಸ್ನ ಪಕ್ಷದಲ್ಲಿ ವರಿಷ್ಠರು ಶಾಸಕರ ಅಭಿಪ್ರಾಯಗಳಿಗೆ ಮನ್ನಣೆ ನೀಡದಿರುವುದರಿಂದ ತೀವ್ರ ಬೇಸರಗೊಂಡಿದ್ದಾರೆ. ಕಾಂಗ್ರೆಸ್ನಲ್ಲಿಯೂ ಸಹ ಕೆಲವು ಶಾಸಕರು ಪಕ್ಷದ ವರಿಷ್ಠರ ನಡೆಯ ಬಗ್ಗೆ ಬೇಸರಗೊಂಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಬಿಜೆಪಿಗೆ ಬೆಂಬಲ ನೀಡಿದರೆ ತಮಗೂ ಪ್ರಯೋಜನವಾಗಲಿದೆ ಎಂಬುದನ್ನು ಅರಿತ ಶಾಸಕರು ಬಿಜೆಪಿಗೆ ಹೋಗಲು ಮುಂದಾಗಿದ್ದಾರೆ. ಕ್ಷೇತ್ರಕ್ಕೆ ಹೆಚ್ಚಿನ ಅನುದಾನವು ಲಭ್ಯವಾಗಲಿದೆ. ಈ ಎಲ್ಲಾ ಕಾರಣಗಳಿಂದಾಗಿ ಬಿಜೆಪಿಯತ್ತ ಹೆಚ್ಚಿನ ಒಲವು ತೋರಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.