
ಶ್ರೀನಗರ: ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇತ್ತೀಚೆಗೆ ‘ವಿಷಕಂಠನಂತೆ ನಾನು ವಿಷ ನುಂಗಿ ಸರ್ಕಾರ ನಡೆಸುತ್ತಿದ್ದೇನೆ’ ಎಂದು ಹೇಳಿ ದೇಶಾದ್ಯಂತ ಸುದ್ದಿ ಮಾಡಿದ್ದರು. ಇದರ ಬೆನ್ನಲ್ಲೇ, ‘ವಿಷ’ದ ಹೇಳಿಕೆ ನೀಡುವ ಸರದಿ ಜಮ್ಮು-ಕಾಶ್ಮೀರದ ನಿರ್ಗಮಿತ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರದು. ‘ಬಿಜೆಪಿ ಜತೆಗೆ ನಾವು ಮಾಡಿಕೊಂಡಿದ್ದ ಮೈತ್ರಿ ಒಂದು ಲೋಟ ವಿಷ ಕುಡಿದಂತೆ ಇತ್ತು’ ಎಂದು ಕಳೆದ ತಿಂಗಳಷ್ಟೇ ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿಕೊಂಡಿದ್ದಾರೆ.
1999 ರಲ್ಲಿ ಸ್ಥಾಪನೆಯಾದ ಪೀಪಲ್ಸ್ ಡೆಮೊಕ್ರಟಿಕ್ ಪಾರ್ಟಿ (ಪಿಡಿಪಿ)ಯ ಸಂಸ್ಥಾಪನಾ ದಿನಾಚರಣೆಯಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಜತೆ ಮೈತ್ರಿಗೆ ಆರಂಭದಿಂದಲೂ ನನ್ನ ವಿರೋಧವಿತ್ತು. ಈ ವಿಷಯವನ್ನು ನನ್ನ ತಂದೆ ಮುಫ್ತಿ ಮೊಹಮ್ಮದ್ ಸಯೀದ್ ಅವರಿಗೂ ತಿಳಿಸಿದ್ದೆ. ಆದರೆ ಅವರು ನನ್ನ ಅಭಿಪ್ರಾಯವನ್ನು ತಿರಸ್ಕರಿಸಿದರು. ನಾವೇನು ಕಾಶ್ಮೀರ ದಲ್ಲಿ ಮೂಲಸೌಕರ್ಯ ನಿರ್ಮಾಣ ಮಾಡಲು ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಕಾಶ್ಮೀರಿಗಳು ಅನುಭವಿಸುತ್ತಿರುವ ಸಮಸ್ಯೆಗೆ ಮುಕ್ತಿ ಕೊಡಿಸಲು ದೋಸ್ತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು ಎಂದು ಸ್ಮರಿಸಿದರು.
ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ಹೊರತಾಗಿಯೂ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ನೇ ಪರಿಚ್ಛೇದಕ್ಕೆ ಬಿಜೆಪಿ ಕೈ ಹಾಕದಂತೆ ತಡೆಯುವಲ್ಲಿ ಸಫಲವಾಗಿದ್ದೇವೆ ಎಂದು ಹೇಳಿದರು. ಎರಡೂ ದೇಶಗಳನ್ನೂ ಹತ್ತಿರಕ್ಕೆ ತರಲು ಪಾಕಿಸ್ತಾನದ ಭಾವಿ ಪ್ರಧಾನಿ ಇಮ್ರಾನ್ ಖಾನ್ ಅವರು ಧನಾತ್ಮಕ ಸಂದೇಶ ರವಾನಿಸಿದ್ದಾರೆ. ಪ್ರಧಾನಿ ನರೇಂದ್ರ
ಮೋದಿ ಅವರ ಕೂಡ ಪೂರಕ ಸಂದೇಶಗಳನ್ನು ರವಾನಿಸಬೇಕು ಎಂದು ಮನವಿ ಮಾಡಿದರು. ಅಧಿಕಾರ ಕಳೆದುಕೊಂಡ ಬಳಿಕ ಮೆಹಬೂಬಾ ಅವರು ಪಾಲ್ಗೊಂಡ ಮೊದಲ ಸಾರ್ವಜನಿಕ ಸಭೆ ಇದಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.