
ಬೆಂಗಳೂರು : ಸೆಕ್ಸ್ ವರ್ಕರ್ಸ್ ಪದಕ್ಕೆ ಪರ್ಯಾಯವಾಗಿ ಇನ್ನು ಮುಂದೆ ದಮನಿತ ಮಹಿಳೆಯರು ಎಂದು ಕರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಚಿವರಾದ ನಂತರ ಪ್ರಥಮ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಮಹಿಳೆಯರ ಅಭ್ಯುದ ಯಕ್ಕೆ ಯಾವ ಯೋಜನೆಗಳು ಇದ್ದರೆ ಉತ್ತಮ ಎಂಬುದರ ಕುರಿತು ಶೀಘ್ರವೇ ಮಾಹಿತಿ ನೀಡಬೇಕು.
ಇಲಾಖೆಯಲ್ಲಿ ಶೋಷಿತ ಮಹಿಳೆಯರು, ಮಕ್ಕಳ ಕುರಿತು ನಿರ್ಲಕ್ಷ್ಯ ವಹಿಸಬಾರದು. ಅಗತ್ಯ ಸಂದರ್ಭದಲ್ಲಿ ಎಲ್ಲ ರೀತಿಯ ನೆರವು ನೀಡಲು ಅಧಿಕಾರಿಗಳು ಸಿದ್ಧರಿರಬೇಕು ಎಂದು ಸೂಚನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಲಾವಿದರ ಮಾಸಾಶನ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಿ ಶೀಘ್ರವೇ ಪ್ರಸ್ತಾವನೆ ಸಲ್ಲಿಸಬೇಕು.
ಜತೆಗೆ ಇಲಾಖೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ತಮ್ಮ ಗಮನಕ್ಕೆ ತರ ಬೇಕು. ಜನರ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಸ್ಪಂದಿಸಬೇಕು ಎಂದರು. ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ರೂಪಿಸಿರುವ ಕಾರ್ಯಕ್ರಮಗಳು ಆ ಸಮುದಾಯಕ್ಕೆ ಸರಿಯಾಗಿ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಆಯಾ ಫಲಾನುಭವಿಗಳಿಗೆ ಯೋಜನೆ ಫಲ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಅವರ ಕೋರಿಕೆಯಂತೆ ಅಲ್ಪ ಸಂಖ್ಯಾತ ಆಯೋಗ ರಚನೆಯ ಸಾಧಕ, ಬಾಧಕಗಳ ಕುರಿತು ಮಾಹಿತಿ ನೀಡುವಂತೆ ಸಭೆಯಲ್ಲಿ ಸಚಿವರು ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಚಕ್ರವರ್ತಿ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ದೀಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಸೇರಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.