
ನವದೆಹಲಿ(ಸೆ.26): ಬಹು ನಿರೀಕ್ಷಿತ ಆಧಾರ್ ಸಿಂಧುತ್ವದ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಇಂದು ಹೊರಬಿದ್ದಿದ್ದು, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ.
ಒಟ್ಟು 40 ಪುಟಗಳ ತೀರ್ಪಿನ ಸಾರಾಂಶವನ್ನು ನ್ಯಾಯಮೂರ್ತಿ ಎಕೆ ಸಿಕ್ರಿ ಅವರು ಓದಿದ್ದು, ಖಾಸಗೀತನದ ಹಕ್ಕು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ, ಆಧಾರ್ ಸಮಾಜ ಒಂದು ವರ್ಗಕ್ಕೆ ಘನತೆಯಿಂದ ಬದುಕುವ ಮಾರ್ಗವನ್ನು ನೀಡಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸರ್ಕಾರಿ ಯೋಜನೆಗಳಿಗೆ ಮಾತ್ರ ಆಧಾರ್ ಯೋಜನೆ ಅನ್ವಯವಾಗಲಿದ್ದು, ಬ್ಯಾಂಕ್, ಶಾಲೆ, ಖಾಸಗಿ ಸಂಸ್ಥೆಗಳಲ್ಲಿ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.
ಇನ್ನು ಮೊಬೈಲ್ ಕಂಪನಿಗಳೂ ಕೂಡ ಸಿಮ್ ಖರೀದಿ ವೇಳೆ ಆಧಾರ್ ಮಾಹಿತಿ ಕೇಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಇನ್ನು ಮುಂದೆ ಮೊಬೈಲ್ ಕಂಪನಿಗಳು ವ್ಯಕ್ತಿಯ ಆಧಾರ್ ಮಾಹಿತಿಯನ್ನು ಪಡೆಯುವಂತಿಲ್ಲ. ಅದರಂತೆ ಜಸ್ಟೀಸ್ ಚಂದ್ರಚೂಡ್ ಮೊಬೈಲ್ ಕಂಪನಿಗಳು ಈ ಹಿಂದೆ ಸಂಗ್ರಹಿಸಿರುವ ಗ್ರಾಹಕರ ಮಾಹಿತಿಯನ್ನು ಡಿಲಿಟ್ ಮಾಡಬೇಕು ಎಂದು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
ಅದರಂತೆ ಬ್ಯಾಂಕ್ ಅಕೌಂಟ್ ತೆರೆಯಲೂ ಆಧಾರ್ ಕಡ್ಡಾಯ ಎಂಬ ನಿಯಮವನ್ನು ತೆಗೆದು ಹಾಕಿರುವ ಸುಪ್ರೀಂ, ಬ್ಯಾಂಕ್ ಖಾತೆ ತೆರೆಯಲು ಆಧಾರ್ ಮಾಹಿತಿ ಕಡ್ಡಾಯವಲ್ಲ ಎಂದು ಹೇಳಿದೆ.
ಅಂತೆಯೇ ಆಧಾರ್ ಇಲ್ಲದ ಕಾರಣಕ್ಕೆ ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಸ್ಪಷ್ಟವಾಗಿ ತಿಳಿಸಿದೆ. ಮಾತ್ರವಲ್ಲದೆ ಆಧಾರ್ ಕಾಯ್ದೆಯ ಸೆಕ್ಷನ್ 57ನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಖಾಸಗಿ ಸಂಸ್ಥೆಗಳಿಗೆ ಅಥವಾ ಕಾರ್ಪೊರೇಟ್ ಸಂಸ್ಥೆಗಳಿಗೆ ಬಯೋಮೆಟ್ರಿಕ್ ಮಾಹಿತಿಯನ್ನು ನೀಡುವಂತಿಲ್ಲ. ಖಾಸಗಿ ಕಂಪನಿಗಳು ಆಧಾರ್ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.