
ಶ್ರೀನಗರ(ಏ. 02): ಪ್ರತ್ಯೇಕತಾವಾದಿಗಳ ತೀವ್ರ ಪ್ರತಿಭಟನೆ ನಡುವೆಯೂ ಕಾಶ್ಮೀರ ಕಣಿವೆಯಲ್ಲಿ ಪ್ರಧಾನಿ ಮೋದಿ ಇಂದು ದೇಶದ ಅತ್ಯಂತ ಉದ್ದದ ಸುರಂಗ ಮಾರ್ಗದ ಉದ್ಘಾಟನೆ ನೆರವೇರಿಸಿದರು. ಜಮ್ಮು-ಶ್ರೀನಗರ ಹೆದ್ದಾರಿಯ ಉಧಾಮ್'ಪುರ್ ಮತ್ತು ರಂಬನ್ ನಡುವಿರುವ ಚೆನಾನಿ-ನಾಶರಿ ಸುರಂಗವನ್ನು ಇಂದು ಮಧ್ಯಾಹ್ನ 3ಗಂಟೆಗೆ ಲೋಕಾರ್ಪಣೆಗೊಳಿಸಲಾಗಿದೆ. ಉದ್ಘಾಟನೆ ವೇಳೆ, ಪ್ರಧಾನಿ ಮೋದಿ ಜೊತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಉಪಸ್ಥಿತರಿದ್ದರು.
9.2 ಕಿಮೀ ಉದ್ದದ ಈ ಸುರಂಗ ಮಾರ್ಗವನ್ನು 2,500 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಐಎಲ್ ಅಂಡ್ ಎಫ್'ಎಸ್ ಎಂಬ ಸಂಸ್ಥೆ ಕೇವಲ ಐದೂವರೆ ವರ್ಷದಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಿದ್ದು ದಾಖಲೆಯಾಗಿದೆ.
ಈ ಪ್ರದೇಶದಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸುವ ಈ ಸುರಂಗ ಮಾರ್ಗದಿಂದ ಪ್ರಯಾಣದ ಅವಧಿ ಸಾಕಷ್ಟು ಕಡಿಮೆಯಾಗಲಿದೆ. ಜಮ್ಮು ಮತ್ತು ಶ್ರೀನಗರ ನಡುವಿನ ಪ್ರಯಾಣದ ಅವಧಿ 2ಗಂಟೆಯಷ್ಟು ಕಡಿಮೆಯಾಗಲಿದೆ. 30 ಕಿ.ಮೀ.ನಷ್ಟು ಅಂತರ ಕಡಿಮೆಯಾಗಲಿದೆ. ಇದರಿಂದ ರಾಜ್ಯಕ್ಕೆ ಪ್ರತೀ ದಿನ ಲಕ್ಷಾಂತರ ರೂಪಾಯಿ ಮಿಗಲಿದೆ. ವಿಶ್ವದ ಅತ್ಯುತ್ಕೃಷ್ಟ ತಂತ್ರಜ್ಞಾನದಿಂದ ರಚಿಸಲಾಗಿರುವ ಈ ಸುರಂಗದಿಂದ ಕಣಿವೆ ರಾಜ್ಯದ ಪ್ರವಾಸೋದ್ಯಮಕ್ಕೂ ಪುಷ್ಟಿ ಸಿಗುವ ನಿರೀಕ್ಷೆ ಇದೆ.
ಇದೇ ವೇಳೆ, ಸುರಂಗ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸುವುದನ್ನು ವಿರೋಧಿಸಿ ಕಾಶ್ಮೀರದ ಕೆಲವೆಡೆ ಪ್ರತ್ಯೇಕತಾವಾದಿಗಳು ತೀವ್ರ ಪ್ರತಿಭಟನೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.