
ಬೆಂಗಳೂರು : ನಾಡಿನ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜನತಾದರ್ಶನವು ಇನ್ನು ಮುಂದೆ ವಾರಕ್ಕೊಮ್ಮೆ ನಡೆಯುವ ಬದಲು ತಿಂಗಳಿಗೊಮ್ಮೆ ನಡೆಯಲಿದೆ.
ಮುಖ್ಯಮಂತ್ರಿಗಳ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿರುವುದರಿಂದ ವೈದ್ಯರ ಸಲಹೆ ಮೇರೆಗೆ ತಿಂಗಳಿಗೊಮ್ಮೆ ನಡೆಸಲು ನಿರ್ಧರಿಸಲಾಗಿದೆ. ಒಂದು ತಿಂಗಳು ಬೆಂಗಳೂರಲ್ಲಿ ಮತ್ತು ಒಂದು ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ನಡೆಸಲು ತೀರ್ಮಾನಿಸಲಾಗಿದೆ. ದಿನಾಂಕ ಮತ್ತು ಸ್ಥಳವನ್ನು ಮುಂಚಿತವಾಗಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ಬೆಳಗಾವಿಯಲ್ಲಿ ಜನತಾದರ್ಶನ ನಡೆಸಿದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯಕ್ಕೊಳಗಾಗಿದ್ದರು. ಹೀಗಾಗಿ ಕಲಬುರಗಿಯಲ್ಲಿನ ಜನತಾದರ್ಶನವನ್ನು ರದ್ದುಪಡಿಸಲಾಯಿತು. ಅನಾರೋಗ್ಯಕ್ಕೊಳಗಾದ ಕುಮಾರಸ್ವಾಮಿ ಅವರನ್ನು ವೈದ್ಯರು ತಪಾಸಣೆಗೊಳಪಡಿಸಿದ ವೇಳೆ ವಿಶ್ರಾಂತಿಯ ಅಗತ್ಯ ಇದೆ ಎಂಬ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ವಾರಕ್ಕೊಮ್ಮೆ ನಡೆಸುವ ಜನತಾದರ್ಶನವನ್ನು ತಿಂಗಳಿಗೊಮ್ಮೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆ.1ರಿಂದ ಅಧಿಕೃತವಾಗಿ ಜನತಾದರ್ಶನಕ್ಕೆ ಚಾಲನೆ ನೀಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಅಹವಾಲನ್ನು ತೋಡಿಕೊಂಡಿದ್ದರು. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ಮಾಡಲಾಗಿದ್ದು, ನೂರಾರು ಜನರಿಗೆ ಪರಿಹಾರ ಲಭ್ಯವಾಗಿದೆ. ಮುಖ್ಯಮಂತ್ರಿಯಾಗುವ ಮುನ್ನ ಕುಮಾರಸ್ವಾಮಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಬಳಿಕ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.