
ನವದೆಹಲಿ[ಅ.18]: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಭಾರತದ ವಿರುದ್ಧ ಕೊತಕೊತ ಕುದಿಯುತ್ತಿರುವ ಭಯೋತ್ಪಾದಕರು, ಹಿಂದುಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ದೀಪಾವಳಿ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನರಮೇಧ ನಡೆಸಲು ಯತ್ನಿಸುತ್ತಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.
ನೇಪಾಳ ಮೂಲಕ ಭಾರತಕ್ಕೆ ಆಗಮಿಸಿ, ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಐವರು ಉಗ್ರರು ಪ್ರಯತ್ನಿಸುತ್ತಿದ್ದಾರೆ. ಭಯೋತ್ಪಾದಕರ ನಡುವಣ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದಾಗ ಈ ದುಷ್ಟಸಂಚು ಬೆಳಕಿಗೆ ಬಂದಿದೆ. ಅನುಷ್ಠಾನಗೊಳಿಸಲು ಉದ್ದೇಶಿಸಿರುವ ತಮ್ಮ ಈ ಯೋಜನೆ ಬೃಹತ್ ಪ್ರಮಾಣದ್ದಾಗಿರಲಿದೆ ಎಂದು ಉಗ್ರರು ಮಾತನಾಡಿರುವುದನ್ನು ಗುಪ್ತಚರ ಸಂಸ್ಥೆಗಳು ಕೇಳಿಸಿಕೊಂಡಿವೆ. ದೆಹಲಿಗೆ ತಲುಪಿದ ಬಳಿಕ ಕಾಶ್ಮೀರದಿಂದ ಆಗಮಿಸುವ ಕೆಲವು ವ್ಯಕ್ತಿಗಳು ತಮ್ಮನ್ನು ಭೇಟಿಯಾಗಲಿದ್ದಾರೆ ಎಂಬ ಮಾಹಿತಿಯೂ ಈ ಸಂಭಾಷಣೆ ವೇಳೆ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.
ಉಗ್ರರು ದೂರವಾಣಿ ಸಂಭಾಷಣೆ ನಡೆಸಿರುವ ಸ್ಥಳ ಭಾರತ- ನೇಪಾಳ ಗಡಿಯ ಗೋರಖ್ಪುರಕ್ಕೆ ಸಮೀಪದಲ್ಲಿದೆ ಎನ್ನಲಾಗಿದೆ. ಈ ಮಾಹಿತಿ ತಿಳಿಯುತ್ತಿದ್ದಂತೆ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್:
ಈ ನಡುವೆ, ಭಯೋತ್ಪಾದಕರ ಗುಂಪೊಂದು ದಾಳಿಗೆ ಹೊಂಚು ಹಾಕುತ್ತಿದೆ ಎಂಬ ವರ್ತಮಾನ ಬಂದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್ನಲ್ಲಿರುವ ಹಲವು ರಕ್ಷಣಾ ಸಂಸ್ಥೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪಂಜಾಬ್ ಹಾಗೂ ಜಮ್ಮುವಿನಲ್ಲಿರುವ ಮತ್ತು ಅದರ ಸುತ್ತಲಿರುವ ರಕ್ಷಣಾ ಘಟಕಗಳಲ್ಲಿ ಹೈ ಅಲರ್ಟ್ ಸಾರಲಾಗಿದೆ. ಪಠಾಣ್ಕೋಟ್ ಸೇರಿದಂತೆ ವಾಯುಪಡೆ ನೆಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿವೆ.
370ನೇ ವಿಧಿಯನ್ನು ಕೇಂದ್ರ ಸರ್ಕಾರ ಆ.5ರಂದು ನಿಷ್ಕಿ್ರಯಗೊಳಿಸಿದಾಗಿನಿಂದಲೂ ದೇಶದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಉಗ್ರರು ಪ್ರಯತ್ನಿಸುತ್ತಲೇ ಬಂದಿದ್ದಾರೆ ಎಂಬುದನ್ನು ಕಾಲಕಾಲಕ್ಕೆ ಗುಪ್ತಚರ ಸಂಸ್ಥೆಗಳು ಎಚ್ಚರಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.