ಗ್ರಾಮವಾಸ್ತವ್ಯದಲ್ಲಿ ಎಲ್ಲೆಡೆ ಜೆಡಿಎಸ್ ಬ್ಯಾನರ್, ಕಾಂಗ್ರೆಸ್ಸಿಗರ ಚಿತ್ರವೇ ಇಲ್ಲ!

Published : Jun 21, 2019, 09:41 AM IST
ಗ್ರಾಮವಾಸ್ತವ್ಯದಲ್ಲಿ ಎಲ್ಲೆಡೆ ಜೆಡಿಎಸ್ ಬ್ಯಾನರ್, ಕಾಂಗ್ರೆಸ್ಸಿಗರ ಚಿತ್ರವೇ ಇಲ್ಲ!

ಸಾರಾಂಶ

ಸಿಎಂ ಗ್ರಾಮವಾಸ್ತವ್ಯದಲ್ಲಿ  ಜೆಡಿಎಸ್‌ ಮುಖಂಡರ ಬ್ಯಾನರೇ ಎಲ್ಲ, ಕಾಂಗ್ರೆಸ್ಸಿಗರ ಮುಖ ಎಲ್ಲೂ ಕಾಣುತ್ತಿಲ್ಲ! ಯಾದಗಿರಿಯಿಂದ ಗುರುಮಠಕಲ್‌ ಮಾರ್ಗವಾಗಿ ಚಂಡರಕಿಗೆ ತೆರಳುವ ಮಾರ್ಗದಲ್ಲಿ ಬ್ಯಾನರ್ 

ಯಾದಗಿರಿ (ಜೂ. 21): ಜಿಲ್ಲೆಯ ಗುರುಮಠಕಲ್‌ ಮತಕ್ಷೇತ್ರದ ಚಂಡರಕಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ ‘ಗ್ರಾಮ ವಾಸ್ತವ್ಯ’ಕ್ಕೂ ಮೊದಲೇ ಬ್ಯಾನರ್‌, ಬಂಟಿಂಗ್ಸ್‌ ವಿಚಾರದಲ್ಲಿ ಜಿಲ್ಲೆಯಲ್ಲಿ ಮೈತ್ರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಒಳಗೊಳಗೆ ಅಸಮಾಧಾನ ಸೃಷ್ಟಿಸಿದೆ.

ಯಾದಗಿರಿಯಿಂದ ಗುರುಮಠಕಲ್‌ ಮಾರ್ಗವಾಗಿ ಚಂಡರಕಿಗೆ ತೆರಳುವ ಸುಮಾರು 56 ಕಿ.ಮೀ. ದೂರದ ರಸ್ತೆಯುದ್ದಕ್ಕೂ ಗ್ರಾಮ ವಾಸ್ತವ್ಯಕ್ಕೆ ಶುಭ ಕೋರುವ ಬಂಟಿಂಗ್ಸ್‌, ಬ್ಯಾನರ್‌ಗಳ ಹಾರಾಟ ಮುಗಿಲು ಮುಟ್ಟಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕ ನಾಗನಗೌಡ ಕಂದಕೂರು ಹಾಗೂ ಪುತ್ರ ಶರಣಗೌಡ ಕಂದಕೂರು ಅವರ ಆಳೆತ್ತರದ ಕಟೌಟುಗಳು ಎಲ್ಲೆಡೆ ರಾರಾಜಿಸುತ್ತಿವೆ.

ಆದರೆ, ಸಮ್ಮಿಶ್ರ ಸರ್ಕಾರದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌, ಜಿಲ್ಲಾ ಉಸ್ತುವಾರಿ ಸಚಿವ ಅಥವಾ ಈ ಭಾಗದ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆಯವರ ಭಾವಚಿತ್ರಗಳು ಮಾತ್ರ ಎಲ್ಲೂ ಕಾಣದಿರುವುದು ಕಾಂಗ್ರೆಸ್ಸಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಚಾರ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್‌ ಹುಮ್ನಾಬಾದ್‌ ಅವರ ಗಮನಕ್ಕೂ ಬಂದಿದ್ದು, ಅವರೂ ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರಿಗೂ ಈ ವಿಚಾರ ಕುರಿತು ಕೆಲವರು ದೂರಿದಾಗ ಮೈತ್ರಿ ಪಕ್ಷ, ಅನಿವಾರ‍್ಯವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ ಎಂದು ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ವೇಳೆ ಸ್ಥಳೀಯ ಕಾಂಗ್ರೆಸ್‌ ನಾಯಕರ ನಡೆ ಮಾತ್ರ ತೀವ್ರ ಕುತೂಹಲ ಮೂಡಿಸಿದೆ. ಆದರೆ, ಪಕ್ಷದ ಜಿಲ್ಲಾಧ್ಯಕ್ಷ ಮರಿಗೌಡ ಹುಲ್ಕಲ್‌ ಮಾತ್ರ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ಸಿಗರೆಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ ಹೇರೂರ(ಬಿ) ಗ್ರಾಮದಲ್ಲಿ ವಾಸ್ತವ್ಯ

ಕಲಬುರಗಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚಂಡರಕಿ ಬಳಿಕ ಕಲಬುರಗಿ ಜಿಲ್ಲೆಯ ಹೇರೂರ (ಬಿ) ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದು, ಗ್ರಾಮಸ್ಥರಲ್ಲಿ ಸಂಭ್ರಮ ಮನೆಮಾಡಿದೆ. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಕುಮಾರಸ್ವಾಮಿ ವಾಸ್ತವ್ಯ ಹೂಡಲಿರುವ ಪ್ರಾಥಮಿಕ ಶಾಲೆಗೆ ಸುಣ್ಣ ಬಣ್ಣ ಬಳಿದು ಸಿಂಗರಿಸಲಾಗಿದೆ.

ಮುರಿದ ಬಾಗಿಲು, ಕಿಟಕಿಗಳನ್ನು ಬದಲಾಯಿಸಲಾಗಿದೆ. ಶೌಚಾಲಯವನ್ನೂ ಶುಚಿಗೊಳಿಸಲಾಗಿದೆ. ಜತೆಗೆ, ಫರತಾಬಾದ್‌ನಿಂದ ಹೆರೂರ್‌(ಬಿ)ಗೆ ಮುಖ್ಯಮಂತ್ರಿ ರಸ್ತೆ ಮಾರ್ಗವಾಗಿಯೇ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದ ರಸ್ತೆಯ ದುರಸ್ತಿ ಕಾರ್ಯ ಭರದಿಂದ ಸಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ