
ಚಿತ್ರದುರ್ಗ : ಮಾಜಿ ಸಿಎಂ ಏನು ಹೇಳಿದ್ದಾರೋ ನಂಗೆ ಗೊತ್ತಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷನಾಗಿ ನಾನು ಹೇಳ್ತೇನೆ, ಈ ಸರ್ಕಾರ ಐದು ವರ್ಷ ಪೂರೈಸುತ್ತದೆ. ಮೈತ್ರಿ ಸರ್ಕಾರ ರಚನೆ ವೇಳೆಯೇ ಒಪ್ಪಂದ ಆಗಿದೆ.
ಮುಂದಿನ ಲೋಕಸಭಾ ಚುನಾವಣೆವರೆಗೆ ಮಾತ್ರ ಸಮ್ಮಿಶ್ರ ಸರ್ಕಾರ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆನ್ನಲಾಗಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೀಗೆ ಪ್ರತಿಕ್ರಿಯಿಸಿದ್ದಾರೆ.
ಕೊಪ್ಪಳಕ್ಕೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನು ಆಗುತ್ತದೆ ಅಂತ ಹೇಳೋಕೆ ಆಗೋಲ್ಲ. ಆದರೆ, ಒಪ್ಪಂದದಂತೆ ನಾವು ಐದು ವರ್ಷ ಸರ್ಕಾರ ನಡೆಸುತ್ತೇವೆ. ಇದರ ಬಗ್ಗೆ ಯಾವುದೇ ಸಂದೇಹ ಬೇಡ. ಪದೇ ಪದೇ ನೀವು ಅದೇ ಪ್ರಶ್ನೆ ಕೇಳಿದರೆ ನಾನು ಇದೇ ಉತ್ತರ ಹೇಳೋದು ಎಂದು ಮಾಧ್ಯಮದವರ ಮೇಲೆ ಪರಮೇಶ್ವರ್ ಗರಂ ಆದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕಾರಣಕ್ಕೆ ಹಾಗೆ ಮಾತನಾಡಿದ್ದಾರೋ ನನಗಂತೂ ಗೊತ್ತಿಲ್ಲ. ಏಕೆ ಹೇಳಿದರು ಅಂತ ಅವರಿಂದಲೇ ಉತ್ತರ ಪಡೆಯಿರಿ. ನಮ್ಮ ಬಳಿ ಏಕೆ ಪ್ರಸ್ತಾಪಿಸುತ್ತೀರಿ ಎಂದು ಪರಮೇಶ್ವರ ಸಿಡಿಮಿಡಿಗೊಂಡರು.
ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಲೋಕಸಭಾ ಚುನಾವಣೆವರೆಗೆ ಮೈತ್ರಿ ಸರ್ಕಾರ ಇರುತ್ತದೆ. ಆ ಬಳಿಕ ಏನೆಲ್ಲ ಬೆಳವಣಿಗೆ ನಡೆಯುತ್ತದೋ ನೋಡೋಣ..!’ ಎಂದು ಹೇಳಿದ್ದಾರೆನ್ನುವ ವಿಡಿಯೋ ಈಗ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.