
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸುವ ಸಂಬಂಧ ವರದಿ ಸಿದ್ಧಪಡಿಸಲು ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ನೇಮಕ ಮಾಡಿದ್ದ ಆರನೇ ರಾಜ್ಯ ವೇತನ ಆಯೋಗದ ಅವಧಿಯನ್ನು ಮತ್ತೆ 4 ತಿಂಗಳ ಕಾಲ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಪ್ರಸಕ್ತ ವರ್ಷವೇ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಾಗುವ ಸಾಧ್ಯತೆಗಳಿಲ್ಲ.
ಕಳೆದ ಜೂ.1ರಂದು ರಚನೆಯಾಗಿದ್ದ ವೇತನ ಆಯೋಗವು ವೇತನ ಪರಿಷ್ಕರಣೆ ಕುರಿತಂತೆ ಅಧ್ಯಯನ ನಡೆಸಿ ನಾಲ್ಕು ತಿಂಗಳ ಒಳಗಾಗಿ ಅಂದರೆ ಸೆಪ್ಟೆಂಬರ್ ಅಂತ್ಯದೊಳಗೆ ವರದಿ ನೀಡಬೇಕಿತ್ತು.
ಆದರೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ, ವಿವಿಧ ವೃಂದಗಳ ವೇತನ ರಚನೆಗೆ ಸಂಬಂಧಿಸಿದ ಅಂಶಗಳು ಮತ್ತು ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಕಷ್ಟು ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸುವಂತೆ ಆಯೋಗದ ಕಾರ್ಯದರ್ಶಿ ಮಂಜುನಾಥ್ ನಾಯ್ಕ್ ರಾಜ್ಯ ಸರ್ಕಾರವನ್ನು ಸೆ.6ರಂದು ಬರೆದಿದ್ದ ಪತ್ರದಲ್ಲಿ ಕೋರಿದ್ದರು.
ವಿವಿಧ ಇಲಾಖೆಗಳ ಕಾರ್ಯ ನಿರ್ವಹಣೆ ಉತ್ತಮಗೊಳಿಸುವ ಕುರಿತಂತೆಯೂ ಶಿಫಾರಸು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ 2014ರ ಜನವರಿ 31ರವರೆಗೆ ಆಯೋಗದ ಅವಧಿಯನ್ನು ವಿಸ್ತರಿಸಿ ಆರ್ಥಿಕ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಇದೇ ವೇಳೆ ಆಯೋಗಕ್ಕೆ ನೇಮಕ ಮಾಡಲಾಗಿರುವ 40 ಹುದ್ದೆಗಳ ಅವಧಿಯನ್ನೂ ಕೂಡ ವಿಸ್ತರಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.
ಜನವರಿ ಅಂತ್ಯದ ವೇಳೆಗೆ ವೇತನ ಆಯೋಗವು ಶಿಫಾರಸುಗಳುಳ್ಳ ವರದಿ ನೀಡಿದಲ್ಲಿ ರಾಜ್ಯ ಸರ್ಕಾರ ವರದಿ ಅಧ್ಯಯನ ನಡೆಸಲು ಕನಿಷ್ಠ ಒಂದೆರಡು ವಾರಗಳು ಬೇಕಾಗುತ್ತವೆ. ಹೀಗಾಗಿ ಮುಂದಿನ ವರ್ಷದ ಅಂದರೆ 2018-19ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ನಲ್ಲಿ ವೇತನ ಪರಿಷ್ಕರಣೆಯನ್ನು ಸರ್ಕಾರ ಘೋಷಿಸುವುದು ಶತಃಸಿದ್ಧ. 2018ರ ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ 2017ರ ಜೂನ್ನಿಂದ ಪೂರ್ವಾನ್ವಯ ಆಗುವಂತೆ 2018ರ ಏಪ್ರಿಲ್ 1ರಿಂದ ಆರನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅನುಷ್ಠಾನಗೊಳಿಸುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.