
ಚಿಕ್ಕಮಗಳೂರು (ಅ.13): ನೇರ ನೇಮಕಾತಿ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅ.19ರಂದು ಬೆಂಗಳೂರಿನಲ್ಲಿ ರಾಜ್ಯ ಶಾಲೆ ಮತ್ತು ವಸತಿ ನಿಲಯಗಳ ಬೋಧಕೇತರ ಸಿಬ್ಬಂದಿಗಳ ಒಕ್ಕೂಟದಿಂದ ಅಹೋರಾತ್ರಿ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷೆ ರಾಧಾ ಸುಂದರೇಶ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ 10- 15 ವರ್ಷದಿಂದ 50 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ಹಾಸ್ಟೆಲ್ ಉದ್ದಿಮೆಯಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳಬೇಕಾದರೆ ಯಾವುದೇ ವಿದ್ಯಾಭ್ಯಾಸವನ್ನು ಕಡ್ಡಾಯಗೊಳಿಸದೆ ಸರ್ಕಾರ ದುಡಿಸಿಕೊಳ್ಳುತ್ತಿದೆ. ಈಗ ನೇರ ನೇಮಕಾತಿ ಹೆಸರಿನಲ್ಲಿ ಶ್ರಮಿಕ ವರ್ಗವನ್ನು ಮನೆಗೆ ಕಳುಹಿಸುವ ಹುನ್ನಾರ ನಡೆಸುತ್ತಿದೆ ಎಂದು ದೂರಿದ್ದಾರೆ.
ಈ ರೀತಿ ನೇರ ನೇಮಕಾತಿ ಮಾಡುವುದರಿಂದ ಎಲ್ಲ ಕುಟುಂಬಗಳು ಬೀದಿಪಾಲಾಗುತ್ತವೆ ಎಂಬುದನ್ನು ಸರ್ಕಾರ ಅರಿಯಬೇಕು. ನೇರ ನೇಮಕಾತಿಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಹೊರತು, ಉಪಯೋಗವಾಗುವುದಿಲ್ಲ. ಈ ಕೆಲಸಗಳಿಗೆ ವಿದ್ಯಾಭ್ಯಾಸಕ್ಕಿಂತ ಅನುಭವ ಮುಖ್ಯ ಅದನ್ನು ಬಿಟ್ಟು ನೇರ ನೇಮಕಾತಿಗೆ ಮುಂದಾದರೆ ಅಕ್ರಮ ನಡೆಯುವ ಸಾಧ್ಯತೆಯೂ ಹೆಚ್ಚಿದೆ ಎಂದಿದ್ದಾರೆ.
2012ರ ಕಾಯ್ದೆಯಲ್ಲಿ ಈಗ ಕೆಲಸ ಮಾಡುತ್ತಿರುವವರನ್ನು ಕಾಯಂಗೊಳಿಸಬೇಕು, ರಾಜ್ಯ ಸರ್ಕಾರ ಪೌರಕಾರ್ಮಿಕರಿಗೂ ಆಯಾಯ ಇಲಾಖೆ ವತಿಯಿಂದ ಸಂಬಳ ಕೊಡುವ ರೀತಿಯ ನಿಯಮವನ್ನು ಜಾರಿಗೆ ತರಬೇಕು. ಈ ವಿಚಾರಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ ಎಚ್ಚೆತ್ತು ನೇರ ನೇಮಕಾತಿಯನ್ನು ಕೈಬಿಟ್ಟು ಗುತ್ತಿಗೆ ಪದ್ಧತಿ ರದ್ದುಪಡಿಸಬೇಕು. ರಾಜ್ಯದಲ್ಲಿ ಹಾಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ದಿನಗೂಲಿ ನೌಕರರನ್ನಾಗಿಸಬೇಕು. ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಚಳಿವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಧಾ ಸುಂದರೇಶ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.