
ಬೆಂಗಳೂರು : ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿರುವ ನಡುವೆಯೇ ಬಿಜೆಪಿಯವರು ಆಪರೇಷನ್ ಕಮಲಕ್ಕೆ ಮುಂದಾಗಿರುವ ಕುರಿತಂತೆ ಪುಕಾರು ಹಬ್ಬಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಏತನ್ಮಧ್ಯೆ, ತಮಗೆ ಬಿಜೆಪಿ ಮುಖಂಡರು ಕರೆ ಮಾಡಿ ಗಾಳ ಹಾಕುತ್ತಿದ್ದಾರೆ ಎಂದು ಹೈದರಾಬಾದ್ ಕರ್ನಾಟಕದ ಕಾಂಗ್ರೆಸ್ ಶಾಸಕರಿಬ್ಬರು ಹೇಳಿಕೊಂಡಿದ್ದಾರೆ.
ಬಿಜೆಪಿಯವರು ತಮ್ಮನ್ನು ಸಂಪರ್ಕಿಸಿದ್ದಾರೆಂದು ಚಿಂಚೋಳಿಯ ಶಾಸಕ ಡಾ.ಉಮೇಶ್ ಜಾಧವ ಹಾಗೂ ಅಫಜಲ್ಪುರ ಶಾಸಕ ಎಂ.ವೈ. ಪಾಟೀಲ್ ಹೇಳಿದ್ದಾರೆ. ಅಲ್ಲದೆ ತಮ್ಮನ್ನು ಸಂಪರ್ಕಿಸಿದವರಿಗೆ ತಾವು ತಕ್ಕ ಉತ್ತರ ನೀಡಿದ್ದಾಗಿ ಹೇಳುವ ಮೂಲಕ ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅಫಜಲ್ಪುರ ಶಾಸಕ ಎಂ.ವೈ.ಪಾಟೀಲ್, ತಮಗೂ ಬಿಜೆಪಿಯಿಂದ ಮೂರ್ನಾಲ್ಕು ಬಾರಿ ಕರೆಗಳು ಬಂದಿವೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಟಿಕೆಟ್ ಕೊಟ್ಟಿರಲಿಲ್ಲ. ಈಗ ಕಾಂಗ್ರೆಸ್ನಿಂದ ಗೆದ್ದ ಮೇಲೆ ಕರೆಯುತ್ತಿದ್ದಾರೆ. ನಾನಂತೂ ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗುವುದಿಲ್ಲ ಎಂದು ತಿಳಿಸಿದರು.
ಬಿಜಿಪಿಗೆ ಬೆಂಬಲ ಕೊಡಿ, ಹೊಸ ಸರ್ಕಾರ ರಚನೆಯಾಗುತ್ತದೆ. ನಮಗೆ ನಿಮ್ಮ ಸಹಾಯ ಬೇಕು ಎಂದು ಹೇಳಿ ಕರೆಗಳು ಬರುತ್ತಿವೆ. ಆದರೆ, ಯಡಿಯೂರಪ್ಪ ಈವರೆಗೆ ಕರೆ ಮಾಡಿಲ್ಲ, ಕರೆ ಮಾಡಿದವರು ಪಕ್ಷದ ವಿವಿಧ ಹಂತದಲ್ಲಿನ ಮುಖಂಡರು. ಅವರಿಗೆ ನಾವೂ ತಕ್ಕ ಉತ್ತರ ನೀಡಿದ್ದೇವೆ ಎಂದು ಪಾಟೀಲ್ ಹೇಳಿದರು.
ನಾವು ಜವಾಬ್ ಕೊಟ್ಟೀವ್ರಿ-ಜಾಧವ:
ನನ್ನನ್ನು ಬೇರೆ ಪಕ್ಷದವರು ಸಂಪರ್ಕಿಸಿದ್ದು ನಿಜ. ನಾವು ಅವರಿಗೆ ಅದೇನ್ ಜವಾಬ್ ಕೊಡಬೇಕೋ ಕೊಟ್ಟಿದ್ದೇವೆ. ಕಾಂಗ್ರೆಸ್ನಲ್ಲಿ ಹೈಕಮಾಂಡ್ಗೆ ಎಲ್ಲರನ್ನು ತೃಪ್ತಿಪಡಿಸೋದು ಏಕಕಾಲಕ್ಕೆ ಆಗುವುದಿಲ್ಲ ಎಂದ ಅವರು, ಕಾದು ನೋಡುವ ನೀತಿ ನಾವು ಇಲ್ಲಿ ಅನುಸರಿಸಲೇಬೇಕು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.