
ನವದೆಹಲಿ (ಡಿ.04): ಭಾರತ ಮತ್ತು ಪಾಕಿಸ್ತಾನ ನಡುವೆ ನಿರ್ಮಾಣವಾಗಿರುವ ವೈಮನಸ್ಸಿಗೆ ಅಂತ್ಯ ಹಾಡುವ ಯತ್ನಗಳು ನಡೆಯುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಪಾಕಿಸ್ತಾನ ಪ್ರಧಾನಮಂತ್ರಿ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತದ ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಸರ್ತಾಜ್ ಅಜೀಜ್ ಅವರು ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದು, ಅಜಿತ್ ದೋವಲ್ ಜೊತೆಗೆ ಮಾತುಕತೆ ನಡೆಸುವುದಕ್ಕಾಗಿ 16 ಗಂಟೆಗಳ ಮುಂಚಿತವಾಗಿ ಸರ್ತಾಜ್ ಅಜೀಜ್ ಅವರು ಭಾರತಕ್ಕೆ ಆಗಮಿಸಿದ್ದರು. ಭಾರತಕ್ಕೆ ಆಗಮಿಸಿದ ಬಳಿಕ ದೋವಲ್ ಅವರೊಂದಿಗೆ ಸರ್ತಾಜ್ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆಂದು ಎಂದು ಹೇಳಲಾಗುತ್ತಿದೆ.
ದೋವಲ್ ಜೊತೆಗೆ ಮಾತುಕತೆ ನಡೆಸಿದ ಬಳಿಕ ಸರ್ತಾಜ್ ಅವರು ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ ಗೂ ಭೇಟಿ ನೀಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ದೋವಲ್ ಹಾಗೂ ಅಜೀಜ್ ಭೇಟಿ ಕುರಿತಂತೆ ಅಧಿಕೃತ ಮಾಹಿತಿಗಳು ತಿಳಿದುಬಂದಿಲ್ಲ. ಭೇಟಿ ತೀರ್ಮಾನವನ್ನು ಪಾಕಿಸ್ತಾನ ತೆಗೆದುಕೊಂಡಿತ್ತೋ ಅಥವಾ ಭಾರತದ ವತಿಯಿಂದಲೇ ಮಾತುಕತೆ ನಡೆಸಲಾಗಿತ್ತೋ ಎಂಬ ಸ್ಪಷ್ಟ ಮಾಹಿತಿ ಈವರೆಗೂ ತಿಳಿದುಬಂದಿಲ್ಲ.
ಉರಿ ಉಗ್ರ ದಾಳಿ ಬಳಿಕ ಉಭಯ ರಾಷ್ಟ್ರಗಳ ಉನ್ನತಾಧಿಕಾರಿಗಳು ಮುಖಾಮುಖಿ ಭೇಟಿಯಾಗಿ ಮಾತುಕತೆ ನಡೆಸುತ್ತಿರುವುದು ಇದೇ ಮೊದಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾಕಷ್ಟು ಅಚ್ಚರಿಗಳು ಹಾಗೂ ಕುತೂಹಲಗಳು ಮೂಡತೊಡಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.