
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಮಂಗಳವಾರದಿಂದ ಆರಂಭವಾಗಲಿದ್ದು, ‘ಚಳಿ’ಗಿಂತ ಬಿಸಿಯೇರುವಿಕೆಯೇ ಹೆಚ್ಚಾಗುವ ಲಕ್ಷಣಗಳು ಇವೆ. ಅಧಿವೇಶನದಲ್ಲಿ ನನೆಗುದಿಗೆ ಬಿದ್ದಿರುವ ತ್ರಿವಳಿ ತಲಾಖ್ ಸೇರಿದಂತೆ ಮಹತ್ವದ ವಿಧೇಯಕಗಳನ್ನು ಅಂಗೀಕರಿಸಿಕೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.
ಆದರೆ, ರಿಸವ್ರ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ರಾಜೀನಾಮೆ, ರಫೇಲ್ ಯುದ್ಧ ವಿಮಾನ ಖರೀದಿ ಹಗರಣ, ಸಿಬಿಐ ಉನ್ನತ ಅಧಿಕಾರಿಗಳ ಕಚ್ಚಾಟ, ಕೇಂದ್ರದ ಮಾಜಿ ಸಚಿವ ಎಂ.ಜೆ. ಅಕ್ಬರ್ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ. ಇನ್ನು ವಿಜಯ್ ಮಲ್ಯ ಹಾಗೂ ಕ್ರಿಸ್ಟಿಯನ್ ಮಿಶೆಲ್ ಗಡೀಪಾರು ವಿಷಯಗಳನ್ನು ‘ನಗದೀಕರಣ’ ಮಾಡಿಕೊಂಡು ತಿರುಗೇಟು ನೀಡಲು ಸರ್ಕಾರ ಸಜ್ಜಾಗಿದೆ.
ಡಿಸೆಂಬರ್ 11ರಿಂದ ಜ.8ರವರೆಗೆ ಅಧಿವೇಶನ ನಡೆಯಲಿದೆ. ಚಳಿಗಾಲದ ಮೊದಲ ದಿನವಾದ ಮಂಗಳವಾರ ಕಲಾಪದಲ್ಲಿ ಇತ್ತೀಚೆಗಷ್ಟೇ ಅಗಲಿದ ಬಿಜೆಪಿ ನಾಯಕರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಅಲ್ಲದೆ, ಅದೇ ದಿನವೇ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಹೇಳಲಾಗಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಕಲಾಪದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಈ ಕಲಾಪದಲ್ಲಿ ತ್ರಿವಳಿ ತಲಾಖ್ ಆಚರಣೆ ಮುಂದುವರಿಸಿದರೆ ಶಿಕ್ಷೆ ವಿಧಿಸುವ ಮಸೂದೆ, ಕಂಪನಿಗಳ ಕಾಯ್ದೆ ತಿದ್ದುಪಡಿ ಮಸೂದೆ, ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿದೆ. ಸಾರ್ವಜನಿಕರ ಹಿತಾಸಕ್ತಿಗಾಗಿ ನಾವೆಲ್ಲ ಪರಸ್ಪರ ಸಹಕಾರದಿಂದ ಕಲಾಪ ನಡೆಯಲು ಅವಕಾಶ ನೀಡೋಣ.
- ನರೇಂದ್ರ ಮೋದಿ, ಪ್ರಧಾನಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.