
ಚಿತ್ರದುರ್ಗ: ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡದಿದ್ದರೂ ಅದನ್ನು ಮನಃಪೂರ್ವಕವಾಗಿ ಸ್ವೀಕರಿಸಲು ಸಿದ್ಧನಿದ್ದೇನೆ ಎಂದು ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಹೇಳಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿಲ್ಲ.
ಆದ ಕಾರಣ ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಾಗಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಗೊಂದಲವುಂಟು ಮಾಡಿದರೆ ಜನ ಸಾಮಾನ್ಯರ ನಗೆಪಾಟಲಿಗೆ ಗುರಿಯಾಗಬೇಕಾಗುವುದು. ಎಲ್ಲ ಪಕ್ಷಗಳಿಗೂ ಹೈಕಮಾಂಡ್ ಇದ್ದೆ ಇರುತ್ತಾರೆ. ಅವರು ಹೇಳಿದ ಮಾತನ್ನು ಮೀರದ ಹಾಗೆ ಕೇಳಬೇಕು ಎಂದರು.
104 ಸ್ಥಾನ ಪಡೆದ ಬಿಜೆಪಿ ವಿರೋಧ ಪಕ್ಷದಲ್ಲಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣ ಒಡಕು ಕಾಣಿಸಿದರೂ ಅದನ್ನು ಆರೋಪ ಮಾಡುತ್ತಾರೆ. ಅಂತಹ ಆರೋಪಕ್ಕೆ ತಕ್ಕ ಉತ್ತರ ನೀಡಲು ಮಂತ್ರಿಯಾದವರಿಗೆ ಅರ್ಹತೆ, ಸಮರ್ಥತೆ ಇರಬೇಕು. ನಮ್ಮ ಅಭಿವ್ಯಕ್ತಿತ್ವವನ್ನು ಪ್ರತಿಪಕ್ಷಗಳು ಪ್ರತಿಕ್ಷಣವು ಗಮನಿಸುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳಿಗೆ ಸ್ವತಂತ್ರವಾದ ನಿರ್ಧಾರವನ್ನು ತೆಗೆದುಕೊಳ್ಳಲು ಸಹಕಾರ ನೀಡಿದಾಗ ಮಾತ್ರ ಉತ್ತಮ ಸರ್ಕಾರ ಇರುವುದು. ಇಲ್ಲವಾದರೆ ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ ಸಂದರ್ಭದಲ್ಲಿ ನಾನು ಶಿಕ್ಷಣ ಸಚಿವನಾಗಿದ್ದೆ. ಈ ಮೊದಲು ಯಾರೂ ಮಾಡದ ಕೆಲಸವನ್ನು ಮಾಡಿದ್ದೆ. 1039 ಸರ್ಕಾರಿ ಪ್ರೌಢಶಾಲೆ, 500 ಜೂನಿಯರ್ ಕಾಲೇಜು, 54 ಸಾವಿರ ಶಿಕ್ಷಕರ ನೇಮಕಾತಿ, ವರ್ಗಾವಣೆ ನೀತಿ, ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ವಿಸ್ತರಣೆ ಮಾಡಿದ್ದೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.