ಕೇವಲ 12 ಗಂಟೆಯಲ್ಲೇ ಕಿಡ್ನಾಪರ್'ಗಳನ್ನು ಬಂಧಿಸಿದ ಬೆಂಗಳೂರು ಪೊಲೀಸರು : ಬೆನ್ನಟ್ಟಿದ್ದು ಹೇಗೆ ಗೊತ್ತೆ ?

Published : Jan 26, 2017, 11:19 AM ISTUpdated : Apr 11, 2018, 12:36 PM IST
ಕೇವಲ 12 ಗಂಟೆಯಲ್ಲೇ ಕಿಡ್ನಾಪರ್'ಗಳನ್ನು ಬಂಧಿಸಿದ ಬೆಂಗಳೂರು ಪೊಲೀಸರು : ಬೆನ್ನಟ್ಟಿದ್ದು ಹೇಗೆ ಗೊತ್ತೆ ?

ಸಾರಾಂಶ

‘ಮುತ್ಯಾಲನಗರದಲ್ಲಿ ವಿಮಲಾ ಎಂಬ ವೃದ್ಧೆಯಿದ್ದು, ಅವರ ಪುತ್ರಿ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ಮಕ್ಕಳು ಒಳ್ಳೆಯ ಕೆಲಸದಲ್ಲಿದ್ದು, ಕೋಟ್ಯಂತರ ರುಪಾಯಿ ಸಂಪಾದನೆ ಮಾಡುತ್ತಾರೆ. ಇವರನ್ನು ಅಪಹರಿಸಿದರೆ ಕೋಟಿಗಟ್ಟಲೇ ಸಂಪಾದನೆ ಮಾಡಬಹುದು. ಅವರ ಮನೆಯ ಎಲ್ಲಾ ಸದಸ್ಯರ ಮಾಹಿತಿಯಿದೆ ಎಂದು ಕೃಷ್ಣ ತನ್ನ ಇಬ್ಬರು ಸಹಚರರಿಗೆ ತಿಳಿಸಿ, ವಿಮಲಾ ಅವರನ್ನು ಅಪಹರಿಸಿದ್ದಾನೆ.

ಬೆಂಗಳೂರು(ಜ.26): ಪೊಲೀಸರ ಸೋಗಿನಲ್ಲಿ ಬಂದು ವೃದ್ಧೆಯನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾದ 12 ಗಂಟೆಯೊಳಗೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಹರಣಕ್ಕೊಳಗಾಗಿದ್ದ ವೃದ್ಧೆ ವಿಮಲಾ (71) ಅವರನ್ನು ರಕ್ಷಿಸಿದ್ದಾರೆ.
ಮು​ತ್ಯಾ​ಲ ನ​ಗ​ರದ ಕೃಷ್ಣ (33), ಶ್ರೀ​ನಿ​ವಾಸ್‌ (35) ಹಾಗೂ ಹೊ​ಸ​ಕೋಟೆಯ ವಿ​ಜ​ಯ​ಕು​ಮಾರ್‌ (30) ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಕೃಷ್ಣ ವಿರುದ್ಧ ಎಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ಹಾಗೂ 2ನೇ ಆರೋಪಿ ವಿಜಯಕುಮಾರ್‌ ವಿರುದ್ಧ ನಂದಗುಡಿ ಠಾಣೆಯಲ್ಲಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. ಮತ್ತೊಬ್ಬ ಆರೋಪಿ ಶ್ರೀನಿವಾಸ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಕೃಷ್ಣ, ಮಾಲ್‌​ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಬಿಟ್ಟಿದ್ದ. ವಿಜಯಕುಮಾರ್‌ ಬಡ್ಡಿ ವ್ಯವಹಾರ ನಡೆಸುತ್ತಿದ್ದಾನೆ. ಇನ್ನು ಶ್ರೀನಿವಾಸ್‌ ಟೆಂಪೋ ಚಾಲಕನಾಗಿದ್ದಾನೆ.
ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿದ್ದ ಕೃಷ್ಣನಿಗೆ ವಿಜಯ್‌ಕುಮಾರ್‌ ಪರಿಚಯವಾಗಿದ್ದು, ಬಿಡುಗಡೆಯಾದ ಬಳಿಕ ಶ್ರೀನಿವಾಸ್‌ನನ್ನು ಭೇಟಿ ಮಾಡಿ ಕೋಟ್ಯಂತರ ರುಪಾಯಿ ಆಸ್ತಿ ಹೊಂದಿದ್ದ ವ್ಯಕ್ತಿಗಳ ಅಪಹರಣಕ್ಕೆ ಸಂಚು ರೂಪಿಸಿದ್ದಾರೆ.

 

‘ಮುತ್ಯಾಲನಗರದಲ್ಲಿ ವಿಮಲಾ ಎಂಬ ವೃದ್ಧೆಯಿದ್ದು, ಅವರ ಪುತ್ರಿ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ಮಕ್ಕಳು ಒಳ್ಳೆಯ ಕೆಲಸದಲ್ಲಿದ್ದು, ಕೋಟ್ಯಂತರ ರುಪಾಯಿ ಸಂಪಾದನೆ ಮಾಡುತ್ತಾರೆ. ಇವರನ್ನು ಅಪಹರಿಸಿದರೆ ಕೋಟಿಗಟ್ಟಲೇ ಸಂಪಾದನೆ ಮಾಡಬಹುದು. ಅವರ ಮನೆಯ ಎಲ್ಲಾ ಸದಸ್ಯರ ಮಾಹಿತಿಯಿದೆ ಎಂದು ಕೃಷ್ಣ ತನ್ನ ಇಬ್ಬರು ಸಹಚರರಿಗೆ ತಿಳಿಸಿ, ವಿಮಲಾ ಅವರನ್ನು ಅಪಹರಿಸಿದ್ದಾನೆ.

ಅಪಹರಣ ನಡೆದಿದ್ದು ಹೇಗೆ?

ವಿಮಲಾ ಅವರ ಹಿರಿಯ ಮಗ ಶಿವಕುಮಾರ್‌ ಕೆಲ ದಿನಗಳ ಹಿಂದೆ ಬುಲೆಟ್‌ ಖರೀದಿಸಿದ್ದು, ಈ ವಿಚಾರ ತಿಳಿದಿದ್ದ ಕೃಷ್ಣ ಶಿ​ವ​ಕು​ಮಾರ್‌ಗೆ ಕರೆ ಮಾಡಿ, ಬುಲೆಟ್‌ ಖರೀದಿ ಮಾಡಿದಕ್ಕೆ ಬಹುಮಾನ ಬಂದಿದೆ. ಯಶವಂತಪುರ ಬಳಿಯ ಬ್ಲೂಡಾರ್ಟ್‌ ಕೊರಿಯರ್‌ ಬಳಿ ಬರುವಂತೆ ಹೇಳಿದ್ದಾರೆ. ಇದನ್ನು ನಂಬಿದ ಶಿವಕುಮಾರ್‌ ಕೊರಿಯರ್‌ ಕಚೇರಿಗೆ ಹೋಗಿ ವಿಚಾರಿಸಿದಾಗ ಸತ್ಯಾಂಶ ತಿಳಿದಿದೆ. ಬಳಿಕ ವಾಪಸ್‌ ಬಂದಾಗ ಮನೆಗೆ ಬೀಗ ಹಾಕಿದ್ದು, ತಾಯಿ ವಿಮಲಾ ಆಸ್ಪತ್ರೆಗೆ ಹೋಗಿರಬಹುದು ಎಂದು ಶಿವಕುಮಾರ್‌ ಭಾ​ವಿ​ಸಿದ್ದಾರೆ. ಈ ನಡುವೆ ಮನೆಗೆ ಬಂದಿದ್ದ ಆರೋಪಿಗಳು ನಾವು ಕ್ರೈಂ ಪೊಲೀಸರು, ನಿಮ್ಮ ಸೊಸೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಗಾಗಿ ಶಿವಕುಮಾರ್‌ನನ್ನು ಬಂಧಿಸಿದ್ದೇವೆ. ಕೂಡಲೇ ಠಾಣೆಗೆ ಬರುವಂತೆ ಹೇಳಿದ್ದಾರೆ. ಆಗ ವೃದ್ಧೆ ‘ನೀವು ನಿಜವಾದ ಪೊಲೀಸರೇ, ಸಮವಸ್ತ್ರವಿಲ್ಲ' ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆರೋಪಿಗಳು ಪೊಲೀಸ್‌ ಗುರುತಿನ ಚೀಟಿ ತಂದಿಲ್ಲ. ಚಾಲನಾ ಪರವಾನಿಗೆ ನೋಡಿ ಎಂದು ತೋರಿಸಿ, ಮನೆಯಿಂದ ಕರೆತಂದಿದ್ದಾರೆ. 

ಈ ವೇಳೆ ಕಾರಿನಲ್ಲಿ ಕೊಲೆ ಆರೋಪಿಯನ್ನು ಕೂರಿಸಿದ್ದೇವೆ. ಏನು ಮಾತನಾಡದೇ ಕುಳಿತುಕೊಳ್ಳಿ ಎಂದು ಬೆದರಿಕೆಯೊಡ್ಡಿ, ಕೆಲ ದೂರು ಹೋಗುತ್ತಿದ್ದಂತೆ ಕಣ್ಣಿಗೆ ಬಟ್ಟೆಕಟ್ಟಿ, ವಿಜಯಕುಮಾರ್‌ ವಾಸಿಸುತ್ತಿರುವ ಹೆಬ್ಬಾಳದ ಮನೆಗೆ ಕರೆದೊಯ್ದಿದ್ದಾರೆ. ಬಳಿಕ ಅವರ ಬಳಿಯಿದ್ದ ಸರ ಹಾಗೂ ಇತರೆ ಚಿನ್ನಾಭರಣಗಳನ್ನು ಕಸಿದುಕೊಂಡಿದ್ದಾರೆ. ಕೆಲ ಸಮಯದ ಬಳಿಕ ಶಿವಕುಮಾರ್‌ಗೆ ಫೋನ್‌ ಮಾಡಿದ ಆರೋಪಿಗಳು ‘ನಿಮ್ಮ ತಾಯಿ ಸುರಕ್ಷಿತವಾಗಿದ್ದಾರೆ. ಪೊಲೀಸ್‌ ಬಳಿ ಹೋಗಬೇಡ. ನಿನ್ನ ಸಹೋದರನ ನಂಬರ್‌ ಕೊಡು' ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಗಾಬರಿಗೊಂಡ ಶಿವಕುಮಾರ್‌, ನಂಬರ್‌ ನೀಡಿದ್ದಾರೆ. ಬಳಿಕ ಶಿವಕುಮಾರ್‌ ಸಹೋದರ ಸುಂದರ್‌ಗೆ ಕರೆ ಮಾಡಿದ ಆರೋಪಿಗಳು. 1.5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಸಹೋದರರು ಯಶವಂತಪುರ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಾಗುತ್ತಿದ್ದಂತೆ ಕಾರ‍್ಯಪ್ರವೃತ್ತ ರಾದ ಪೊಲೀಸರು ಮೂರು ವಿಶೇಷ ತಂಡ ರಚಿಸಿ, ಕಾರ್ಯಾಚರಣೆಗಿಳಿಸಿದ್ದಾರೆ. ಅ​ಪ​ಹ​ರ​ಣ​ಕಾ​ರರು ಮಾ​ಡಿದ್ದ ಕರೆ ಆ​ಧಾರದ ಮೇಲೆ ಹೊ​ಸ​ಕೋಟೆ, ವೈ​ಟ್‌​ಫೀಲ್ಡ್‌ ಹಾಗೂ ಹೆ​ಬ್ಬಾ​ಳ​ದಲ್ಲಿ ಮೂರು ತಂಡ​ಗಳು ಹು​ಡು​ಕಾಟ ನ​ಡೆ​ಸಿವೆ. ಯ​ಶ​ವಂತ​ಪುರ ಇ​ನ್‌​ಸ್ಟೆ​ಕ್ಟರ್‌ ಮು​ದ್ದ​ರಾಜು ಅ​ವರ ತಂಡ ಹೆ​ಬ್ಬಾ​ಳ​ದಲ್ಲಿ ಹುಡುಕಾಟ ನಡೆಸಿದಾಗ ಆರೋಪಿ ಕೃಷ್ಣ, ಹೆ​ಬ್ಬಾ​ಳ​ದಿಂದ ನಾ​ಗೇ​ನ​ಹ​ಳ್ಳಿಗೆ ಆ​ಟೋ​ದಲ್ಲಿ ಬಂದು ಮ​ನೆಗೆ ಹೋ​ಗುತ್ತಿದ್ದಾಗ ಪೊಲೀಸರ ಕಂಡು ಓಡಲು ಯತ್ನಿಸಿದ್ದಾನೆ. ಕಾಲಿಗೆ ಗಾಯಮಾಡಿಕೊಂಡಿದ್ದ ಈತ ಕುಂಟುತ್ತಿದ್ದರಿಂದ ವೇಗವಾಗಿ ಓಡಲು ಸಾಧ್ಯವಾಗಿಲ್ಲ. ಕೂಡಲೇ ಪೊಲೀಸರು ಹಿಂಬಾಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಇತರೆ ಆರೋಪಿಗಳನ್ನು ಬಂಧಿಸಿ, ವೃದ್ಧೆಯನ್ನು ರಕ್ಷಿಸಿದ್ದಾರೆ. ಆರೋಪಿಗಳಿಂದ ಕೃ​ತ್ಯಕ್ಕೆ ಬ​ಳ​ಸಿದ್ದ ಮಾ​ಸ್ವಿಫ್ಟ್‌ ಕಾರು, ಬೈಕ್‌ ವಶಕ್ಕೆ ಪಡೆಯಲಾಗಿದೆ ಎಂದು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುರ್ಚಿಗಾಗಿ ಕಿತ್ತಾಟ, ಅಭಿವೃದ್ಧಿ ಶೂನ್ಯ: ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಎನ್.ರವಿಕುಮಾರ್ ಟೀಕೆ
ಮದುವೆಯ ದಿನದಂದೇ ಎರಡನೇ ಬಾರಿಗೆ ತಾಯಿಯಾದ ಟಾಲಿವುಡ್ ಖ್ಯಾತ ನಟಿ.. ವೈರಲ್ ಆಯ್ತು ಪೋಸ್ಟ್!