2012ರ ಗುಜರಾತ್ ವಿಧಾನಸಭಾ ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಹಿಂದೆ ಕಾರ್ಯ ನಿರ್ವಹಿಸಿದ ಚುನಾವಣಾ ರಣತಂತ್ರಜ್ಞ ಪ್ರಶಾಂತ್ ಕಿಶೋರ್, ಮುಂಬರುವ 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಪರವಾಗಿಯೇ ಕೆಲಸ ಮಾಡಬಹುದಾದ ಲಕ್ಷಣಗಳು ಗೋಚರಿಸುತ್ತಿವೆ.
ನವದೆಹಲಿ: 2012ರ ಗುಜರಾತ್ ವಿಧಾನಸಭಾ ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಹಿಂದೆ ಕಾರ್ಯ ನಿರ್ವಹಿಸಿದ ಚುನಾವಣಾ ರಣತಂತ್ರಜ್ಞ ಪ್ರಶಾಂತ್ ಕಿಶೋರ್, ಮುಂಬರುವ 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಪರವಾಗಿಯೇ ಕೆಲಸ ಮಾಡಬಹುದಾದ ಲಕ್ಷಣಗಳು ಗೋಚರಿಸುತ್ತಿವೆ.
2014ರ ಲೋಕಸಭಾ ಚುನಾವಣೆ ಬಳಿಕ ಬಿಜೆಪಿಗೆ ಗುಡ್ಬೈ ಹೇಳಿದ ಪ್ರಶಾಂತ್ ಕಿಶೋರ್, ಕಾಂಗ್ರೆಸ್ ಚುನಾವಣಾ ರಣತಂತ್ರ ರೂಪಕರಾಗಿ ಬಿಹಾರದಲ್ಲಿ ಕಾಂಗ್ರೆಸ್, ಆರ್ಜೆಡಿ ಮತ್ತು ಜೆಡಿಯು ಪಕ್ಷಗಳ ಮಹಾ ಮೈತ್ರಿಗೆ ಕಾರಣೀಭೂತರಾಗಿದ್ದರು. ಆದರೆ, ಇದೀಗ ಕಳೆದ 6 ತಿಂಗಳಿನಿಂದ ಪ್ರಶಾಂತ್ ಕಿಶೋರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದು, 2019ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಪರ ತೊಡಗಿಸಿಕೊಳ್ಳುವ ಬಗ್ಗೆ ಮೋದಿ ಮತ್ತು ಪ್ರಶಾಂತ್ ಕಿಶೋರ್ ಅವರ ನಡುವೆ ಚರ್ಚೆ ನಡೆದಿರಬಹುದು ಎನ್ನಲಾಗಿದೆ. ಅಲ್ಲದೆ, ಬಿಜೆಪಿ ರಾಷ್ಟಾ್ರಧ್ಯಕ್ಷ ಅಮಿತ್ ಶಾ ಅವರನ್ನು ಸಹ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಪ್ರಶಾಂತ್ ಕಿಶೋರ್ ಪುನಃ ಬಿಜೆಪಿ ರಣತಂತ್ರ ರೂಪಕರಾಗಿ ಮರಳಿದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಂದು ಬ್ರಾಂಡ್ ಆಗಿ ರೂಪಿಸುವ ಮೂಲಕ ರಾಷ್ಟಾ್ರದ್ಯಂತ ಇರುವ ಬಿಜೆಪಿ ಪರವಾದ ಬೆಂಬಲವನ್ನು ಮತವಾಗಿ ಪರಿವರ್ತಿಸಲಿದ್ದಾರೆ. ಜತೆಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿಯೇ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ.