ಭಿಕ್ಷೆ ಬೇಡಿ, ತರಕಾರಿ ಮಾರಿ ಶಿಕ್ಷಕರ ವಿನೂತನ ಪ್ರತಿಭಟನೆ

By Kannadaprabha NewsFirst Published Dec 17, 2020, 10:45 AM IST
Highlights

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಖಾಸಗಿ ಶಾಲಾ ಶಿಕ್ಷಕರು  ರಾಜ್ಯ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಡಿ.17): ಕೋವಿಡ್‌ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗದೆ ಹಲವು ತಿಂಗಳಿಂದ ಸರಿಯಾಗಿ ವೇತನ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳ ಸಾವಿರಾರು ಶಿಕ್ಷಕರು ಸರ್ಕಾರದಿಂದ ತಮಗೆ ಗೌರವ ಧನ, ಆಹಾರ ಕಿಟ್‌ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಬೆಂಗಳೂರಿನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌) ನೇತೃತ್ವದಲ್ಲಿ ಮೌರ್ಯ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ರಾರ‍ಯಲಿ ನಡೆಸಿದ ನೂರಾರು ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರು ನಂತರ ಪ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ಸರ್ಕಾರ ಕೂಡಲೇ ಸಂಕಷ್ಟದಲ್ಲಿರುವ ತಮ್ಮ ನೆರವಿಗೆ ಧಾವಿಸುವಂತೆ ಆಗ್ರಹಿಸಿದರು. ಈ ವೇಳೆ ಕೈಯಲ್ಲಿ ತಟ್ಟೆಲೋಟ ಹಿಡಿದು ಬೇಡಿ ಹಾಗೂ ತಳ್ಳುವ ಗಾಡಿಯಲ್ಲಿ ತರಕಾರಿ ಮಾರಾಟದಂತಹ ಅಣಕು ಪ್ರದರ್ಶನಗಳ ಮೂಲಕ ಸರ್ಕಾರ ಹಾಗೂ ಶಿಕ್ಷಣ ಸಚಿವರು ನಮ್ಮನ್ನು ಬೀದಿಗೆ ಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

"ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ" ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಹಮ್ಮಿಕೊಂಡಿರುವ "ನಮ್ಮ ನಡೆ ಶಿಕ್ಷಕರ ಕಡೆ....

Posted by R Ashoka on Wednesday, December 16, 2020

ಕ್ಯಾಮ್ಸ್‌ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಮಾತನಾಡಿ, ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸುವ ಬಗ್ಗೆ ಸರ್ಕಾರ ಸ್ಪಷ್ಟನೀತಿ ಹೊರಡಿಸಿಲ್ಲ. ಹೀಗಾಗಿ ರಾಜ್ಯದ ಶೇ.95ರಷ್ಟುಖಾಸಗಿ ಶಾಲೆಗಳು ತೀವ್ರ ಸಂಕಷ್ಟಎದುರಿಸುತ್ತಿವೆ. ಇದರಿಂದ ಶಾಲೆಗಳಿಗೆ ಶಿಕ್ಷಕರಿಗೆ ವೇತನ ನೀಡಲೂ ಕಷ್ಟವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು.

ಮಕ್ಕಳೇ, ವಿದ್ಯಾಗಮಕ್ಕೆ ರೆಡಿಯಾಗಿ, ಕೊರೊನಾ ನಿಯಮ ಪಾಲಿಸೋದನ್ನ ಮರೆಯಬೇಡಿ

ಪ್ರತಿಭಟನಾಕಾರರನ್ನುದ್ದೇಶಿಸಿ ವಿಧಾನ ಪರಿಷತ್‌ ಸದಸ್ಯ ಹಾಗೂ ಕ್ಯಾಮ್ಸ್‌ ಗೌರವ ಅಧ್ಯಕ್ಷ ಪುಟ್ಟಣ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಆಯನೂರು ಮಂಜುನಾಥ್‌, ವಿವಿಧ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಮುಖ್ಯಸ್ಥರು, ಸದಸ್ಯರು, ಕ್ಯಾಮ್ಸ್‌ ಪದಾಧಿಕಾರಿಗಳು ಭಾಗವಹಿಸಿದ್ದರು.

ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ

ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಖಾಸಗಿ ಶಿಕ್ಷಕರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರ ಬೇಡಿಕೆಗಳ ಮನವಿ ಸ್ವೀಕರಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್‌.ಅಶೋಕ್‌ ಅವರು ಶಿಕ್ಷಕರ ಮನವಿ ಸ್ವೀಕರಿಸಿ ನ್ಯಾಯಯುತ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಬಳಿಕ ಶಿಕ್ಷಕರು ಪ್ರತಿಭಟನೆ ಕೈಬಿಟ್ಟರು.

ಬಸವರಾಜ ಬೊಮ್ಮಾಯಿ ಮಾತನಾಡಿ, ಶಿಕ್ಷಕರು ಹಾಗೂ ಶಾಲಾ ಆಸಳಿತ ಮಂಡಳಿಗಳು ಶಿಕ್ಷಕರಿಗೆ ಗೌರವ ಧನ, ಆಹಾರ ಕಿಟ್‌, ಪ್ರತ್ಯೇಕ ವಿಮಾ ಸೌಲಭ್ಯ, ಉಚಿತ ಕೋವಿಡ್‌ ವ್ಯಾಕ್ಸಿನ್‌ ನೀಡುವುದು ಹಾಗೂ ಶಿಕ್ಷಣ ಸಂಸ್ಥೆಗಳ ಪುನಾರಂಭ, ದಾಖಲಾತಿ, ಹಾಜರಾತಿ, ಕನಿಷ್ಠ ಮೌಲ್ಯಮಾಪನದ ತೇರ್ಗಡೆ ಬಾಕಿ ಹಾಗೂ ಪ್ರಸ್ತುತ ಕನಿಷ್ಠ ಶುಲ್ಕ ಕಟ್ಟಿದಾಖಲಾತಿ ಮಾಡುವ ಬಗ್ಗೆ ಸ್ಪಷ್ಟೀಕರಣದ ಆದೇಶ ನೀಡಬೇಕೆಂದು ಕೋರಿದ್ದಾರೆ. ಇದರಲ್ಲಿ ಕೆಲವು ಆಡಳಿತಾತ್ಮಕ ಅನುಮೋದನೆ ಆಗಬೇಕಾಗುತ್ತದೆ. ಕೋರ್ಟ್‌ ಆದೇಶವನ್ನೂ ಪಾಲಿಸಬೇಕಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಯಾವೆಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವೋ ಅವುಗಳನ್ನು ಈಡೇರಿಸಲು ಸರ್ಕಾರ ಕ್ರಮ ವಹಿಸಲಿದೆ ಎಂದು ಭರವಸೆ ನೀಡಿದರು. ಸಚಿವ ಅಶೋಕ್‌ ಮಾತನಾಡಿದರು.

ಸರ್ಕಾರಕ್ಕೆ ಖಾಸಗಿ ಶಿಕ್ಷಕರ ಬೇಡಿಕೆಗಳೇನು?

* ಖಾಸಗಿ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ ಕೋವಿಡ್‌ ಲಸಿಕೆ ಉಚಿತವಾಗಿ ನೀಡಬೇಕು

* ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ಕೋವಿಡ್‌ ಮುಗಿಯೋವರೆಗೂ ಸರ್ಕಾರದಿಂದ ಗೌರವಧನ ಹಾಗೂ ಆಹಾರ ಕಿಟ್‌ ನೀಡಬೇಕು

* ಶಿಕ್ಷಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ವಿಮೆ ಸೌಲಭ್ಯ ನೀಡಬೇಕು

* ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸಲು ಕ್ರಮ ವಹಿಸಬೇಕು

* ಮಕ್ಕಳ ದಾಖಲಾತಿ, ಹಾಜರಾತಿ, ಕನಿಷ್ಠ ಮೌಲ್ಯಮಾಪನದ ತೇರ್ಗಡೆ, ಬಾಕಿ ಹಾಗೂ ಪ್ರಸಕ್ತ ವರ್ಷದ ಶುಲ್ಕ ಕಟ್ಟಿದಾಖಲಾತಿ ಮಾಡುವ ಬಗ್ಗೆ ಸ್ಪಷ್ಟೀಕರಣದ ಆದೇಶ ನೀಡಬೇಕು
 

click me!