ಕರ್ನಾಟಕದ ಮಾಜಿ ರಾಜ್ಯಪಾಲ, ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ತಮ್ಮ ಪಕ್ಷದ ಅಧ್ಯಕ್ಷರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ್ದು, ಇದು ರಾಷ್ಟ್ರರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ನವದೆಹಲಿ, [ನ.15] : ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ತಮ್ಮ ಪಕ್ಷದ ಅಧ್ಯಕ್ಷರ ವಿರುದ್ಧವೇ ಅಸಮಧಾನ ಹೊರಹಾಕಿದ್ದಾರೆ.
ಇಂದು [ಗುರುವಾರ] ನವದೆಹಲಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಯಕತ್ವದ ಬಗ್ಗೆ ಮಾತನಾಡಿರುವ ಹಂಸರಾಜ್ ಭಾರದ್ವಾಜ್, ರಾಹುಲ್ ಗಾಂಧಿ ಒಬ್ಬ ರಾಜಕೀಯ ನಾಯಕ ಎಂಬುದನ್ನು ನಾನು ಒಪ್ಪಲಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.
ರಾಹುಲ್ ಗಾಂಧಿ ಒಬ್ಬ ರಾಜಕೀಯ ನಾಯಕ ಎಂಬುದನ್ನು ನಾನು ಇನ್ನೂ ಒಪ್ಪಲಾರೆ. ರಾಹುಲ್ ಗಾಂಧಿ ಇನ್ನೂ ಕಲಿಯಬೇಕಾದ್ದು ಬಹಳಷ್ಟಿದೆ. ಜನ ಆತನನ್ನು ಅಂಗೀಕರಿಸಿದಾಗ ಆತ ಒಬ್ಬ ನಾಯಕನಾಗಿ ಹೊರ ಹೊಮ್ಮುತ್ತಾನೆ ಎಂದು ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ.
ಇನ್ನು, ಕಾಂಗ್ರೆಸ್ ಯಾಕೆ ಸೋಲುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಜಾತಿ ರಾಜಕಾರಣದಲ್ಲಿ ಮುಳುಗಿದೆ ಎಂದರು. ಕಾಂಗ್ರೆಸ್ನ ಹಿರಿಯ ನಾಯಕರಾಗಿರುವ ಹಂಸರಾಜ್ ಭಾರದ್ವಾಜ್ ಅವರು ತಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದೆ.