
ಕಲಬುರಗಿ (ಜ.22): ಬಹುದಿನಗಳಿಂದ ನಡೆಯುತ್ತಿದ್ದ ಬಿಜೆಪಿ ಒಳಜಗಳ ಇಂದು ಹೊಸ ತಿರುವನ್ನು ಪಡೆದಿದೆ. ವಿಪಕ್ಷ ನಾಯಕ ಈಶ್ವರಪ್ಪರವರ ನಡೆಯಿಂದ ಬೇಸತ್ತು ಬಿಜೆಪಿ ಮುಖಂಡ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ , ಮೂರು ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿರುವ ಆಯನೂರು ಮಂಜುನಾಥ್, ಈಶ್ವರಪ್ಪ ನಡೆಯಿಂದ ಮನನೊಂದು ಮೂರು ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈಶ್ವರಪ್ಪ ರಾಜಕೀಯ ಆತ್ಮಾಹುತಿ ದಾರಿ ಕಂಡುಕೊಳ್ಳುತ್ತಿದ್ದಾರೆ, ಸಂಧಾನಕ್ಕೆ ಒಪ್ಪದೇ ಕೇವಲ ಬಹಿರಂಗ ಹೇಳಿಕೆ ಮೂಲಕ ಪಕ್ಷಕ್ಕೆ ಹಾನಿ ಮಾಡುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ.
ರಾಯಣ್ಣ ಬ್ರಿಗೇಡ್ ಹಿಂದೆ ಈಶ್ವರಪ್ಪನವರ ಕುತ್ಸಿತ ಮನೋಭಾವದ ರಾಜಕೀಯ ಷಡ್ಯಂತ್ರವಿದೆ ಎಂದು ಅವರು ರಾಜಿನಾಮೆ ಪತ್ರದಲ್ಲಿ ಆರೋಪಿಸಿದ್ದಾರೆ.
ಬಿಜೆಪಿಗೆ ಬಹುಮತ ಬರದಂತೆ ನೋಡಿಕೊಂಡು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು, ಅಧಿಕಾರ ಪಡೆಯುವ ಲೆಕ್ಕಾಚಾರ ಈಶ್ವರಪ್ಪ ಅವರಿಗಿದೆ ಎಂದು ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕೂಡಲೇ ಈಶ್ವರಪ್ಪ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವೇ ಸಮಸ್ಯೆ ಬಗೆಹರಿಸಬೇಕು ಎಂದು ಕಲಬುರಗಿಯಲ್ಲಿ ಹೇಳಿಕೆ ನೀಡಿದ್ದಾರೆ.
ಪಕ್ಷವು ಆಯನೂರು ಮಂಜುನಾಥ್, ಶಿವಮೊಗ್ಗ, ಉತ್ತರ ಕನ್ನಡ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಉಸ್ತುವಾರಿ ವಹಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.