ತಕ್ಷಣ ಮೋದಿ ಜಾರಿಗೊಳಿಸುವ ಯೋಜನೆಗಳೇನು? ಯಾರಿಗೆ ಸಿಹಿ?

Published : May 25, 2019, 11:32 AM IST
ತಕ್ಷಣ ಮೋದಿ ಜಾರಿಗೊಳಿಸುವ ಯೋಜನೆಗಳೇನು? ಯಾರಿಗೆ ಸಿಹಿ?

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಚುನಾವಣೆ ಪ್ರಚಾರದ ಸಂದರ್ಭದಲ್ಲಿಯೂ ಹಲವು ಯೋಜನೆಗಳನ್ನು ರೂಪಿಸಿತ್ತು. ರೈತರು, ವ್ಯಾಪಾರಿಗಳು ಸೇರಿದಂತೆ ಎಲ್ಲ ವರ್ಗದ ಬಡವರ 35 ಸಾವಿರ ರು.ವರೆಗಿನ ಸಾಲ ಮನ್ನಾ, ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ, ಪ್ರಧಾನಿ ಕಿಸಾನ್‌ ಯೋಜನೆಗೆ ಮತ್ತಷ್ಟುಫಲಾನುಭವಿಗಳ ಸೇರ್ಪಡೆಗೆ ತಯಾರಿ ಆರಂಭಿಸಿತ್ತು. ಈ ಕುರಿತು ಮಾಧ್ಯಮಗಳಲ್ಲೂ ವರದಿಯಾಗಿತ್ತು. ಇದೀಗ ಆ ಯೋಜನೆಗಳನ್ನು ಅಧಿಕಾರಕ್ಕೇರುತ್ತಿದ್ದಂತೆ ಸರ್ಕಾರ ಜಾರಿಗೆ ತರುವುದು ನಿಶ್ಚಿತವಾಗಿದೆ.

ಸಾರ್ವತ್ರಿಕ ಸಾಲ ಮನ್ನಾ ಯೋಜನೆ

ಕಡಿಮೆ ಆದಾಯ ಹೊಂದಿರುವ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿರುವ ಬಡವರ ಮೇಲಿನ ಹೊರೆ ತಗ್ಗಿಸಲು ಕೇಂದ್ರ ಸರ್ಕಾರ ‘ಸಾರ್ವತ್ರಿಕ ಸಾಲ ಮನ್ನಾ’ ಯೋಜನೆ ಜಾರಿಗೊಳಿಸುವ ಸಾಧ್ಯತೆ ಇದೆ. ಸಣ್ಣ ಉದ್ದಿಮೆಗಳು, ಸಣ್ಣ ರೈತರು ಹಾಗೂ ಕುಶಲಕರ್ಮಿಗಳಂತಹ ಅಲ್ಪ ಮೊತ್ತದ ಸಾಲ ಮಾಡಿರುವ ವರ್ಗಗಳಿಗೆ ಇದರಿಂದ ಅನುಕೂಲವಾಗಲಿದೆ. ವಾರ್ಷಿಕ 60 ಸಾವಿರ ರು. ಅಥವಾ ಅದಕ್ಕಿಂತ ಕಡಿಮೆ ಆದಾಯ ಹೊಂದಿರುವ, 35 ಸಾವಿರ ರು. ಅಥವಾ ಅದಕ್ಕಿಂತ ಕಡಿಮೆ ಮೊತ್ತದ ಸಾಲ ಹೊಂದಿರುವ ಹಾಗೂ 20 ಸಾವಿರ ರು. ಮೌಲ್ಯದೊಳಗಿನ ಆಸ್ತಿ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗುತ್ತಾರೆ.

ಸಣ್ಣ ಉದ್ಯಮಿಗಳಿಗೆ ಖಾತ್ರಿ ರಹಿತ ಸಾಲ

ಸಣ್ಣ ಉದ್ಯಮಿಗಳು ಸಾಲ ಪಡೆಯಲು ಎದುರಿಸುತ್ತಿರುವ ಸಮಸ್ಯೆಯನ್ನು ಹೋಗಲಾಡಿಸಲು, ಅವರಿಗೆ 50 ಲಕ್ಷ ರು.ವರೆಗೆ ಖಾತ್ರಿರಹಿತ ಸಾಲ ಒದಗಿಸುವ ಯೋಜನೆಯೊಂದನ್ನು ಹೊಸ ಸರ್ಕಾರ, ಅಧಿಕಾರಕ್ಕೆ ಬಂದ ಕೂಡಲೇ ಘೋಷಿಸುವ ಸಾಧ್ಯತೆ ಇದೆ. ಇದು ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕತೆ ಚೇತರಿಕೆಗೂ ಕಾರಣವಾಗುವ ಗುರಿಹೊಂದಿದೆ.

ವ್ಯಾಪಾರಿಗಳಿಗೆ ಪಿಂಚಣಿ, ಕ್ರೆಡಿಟ್‌ ಕಾರ್ಡ್‌

ಸಣ್ಣ ಉದ್ಯಮಿಗಳು ಮುಪ್ಪಿನ ಕಾಲದಲ್ಲಿ ಯಾವುದೇ ಆದಾಯ ಹೊಂದದೇ ಎದುರಿಸುವ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಅವರಿಗೆ ಪಿಂಚಣಿ ಯೋಜನೆಯೊಂದನ್ನು ಜಾರಿಗೊಳಿಸಲು ಸರ್ಕಾರ ಈಗಾಗಲೇ ಯೋಜನೆಯೊಂದನ್ನು ರೂಪಿಸಿದೆ ಎನ್ನಲಾಗಿದೆ. ಜೊತೆಗೆ ಸಣ್ಣ ಉದ್ಯಮಿಗಳಿಗೆ ಕ್ರೆಡಿಡ್‌ ಕಾರ್ಡ್‌ ಸೌಲಭ್ಯವನ್ನು ಒದಗಿಸುವ ಗುರಿಯನ್ನೂ ಸರ್ಕಾರ ಹೊಂದಿದೆ.

ಸಣ್ಣ, ಮಧ್ಯಮ ಗಾತ್ರದ ಬ್ಯಾಂಕ್‌ಗಳ ವಿಲೀನ

ಸಣ್ಣ ಮತ್ತು ಮಧ್ಯಮ ಗಾತ್ರದ ಸರ್ಕಾರಿ ಬ್ಯಾಂಕ್‌ಗಳನ್ನು ವಿಲೀನ ಮಾಡಿ ಜಾಗತಿಕ ಮಟ್ಟದ ದೊಡ್ಡ ಬ್ಯಾಂಕ್‌ಗಳ ರಚನೆಯ ಪ್ರಕ್ರಿಯೆಗೆ ಸರ್ಕಾರ ಶೀಘ್ರವೇ ಚಾಲನೆ ನೀಡುವ ಸಾಧ್ಯತೆ ಇದೆ. ಈಗಾಗಲೇ ಎರಡು ಸುತ್ತಿನಲ್ಲಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಡೆದಿದ್ದು, ಮೂರನೇ ಹಂತದ ಪ್ರಕ್ರಿಯೆಗೂ ಚಾಲನೆ ಸಿಕ್ಕಿದೆ. ಈ ಕುರಿತ ಅಧಿಕೃತ ನಿರ್ಧಾರಗಳು, ಹೊಸ ಸರ್ಕಾರದ ಆದ್ಯತೆಯಾಗಿರಲಿವೆ ಎನ್ನಲಾಗಿದೆ.

ಕೃಷಿಕರ ಖಾತೆಗೆ ಸಬ್ಸಿಡಿ ಯೋಜನೆ ವಿಸ್ತರಣೆ

5 ಎಕರೆವರೆಗೆ ಭೂಮಿ ಹೊಂದಿರುವ ರೈತರ ಬ್ಯಾಂಕ್‌ ಖಾತೆಗೆ ವಾರ್ಷಿಕ 6000 ರು. ಜಮೆ ಮಾಡುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಹಿಂದಿನ ಬಜೆಟ್‌ನಲ್ಲಿ ಘೋಷಿಸಿ, ಅದನ್ನು ಜಾರಿಗೆ ಕೂಡ ತಂದಿತ್ತು. ಈ ಯೋಜನೆಯನ್ನು ಇನ್ನಷ್ಟುವಿಸ್ತರಿಸುವ ಮತ್ತು ಇನ್ನಷ್ಟುಆಕರ್ಷಕ ಮಾಡುವ ಉದ್ದೇಶವೂ ಸರ್ಕಾರಕ್ಕೆ ಇದೆ. ಈ ಕುರಿತು ಘೋಷಣೆಯನ್ನು ನೂತನ ಪ್ರಧಾನಿ ಮಾಡಲಿದ್ದಾರೆ ಎನ್ನಲಾಗಿದೆ.

ಆದಾಯ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳ

ಆದಾಯ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳ ಮಾಡಬೇಕೆಂಬುದು ಮಧ್ಯಮ ವರ್ಗದ ಬಹುದಿನದ ಬೇಡಿಕೆ. ಇಂಥದ್ದೊಂದು ಬೇಡಿಕೆಗಳ ಬಗ್ಗೆ ನೂತನ ಸರ್ಕಾರ ಗಮನ ಹರಿಸಬಹುದು ಎಂಬ ವಿಶ್ವಾಸವಿದೆ. ಜನರ ಆದಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಸಣ್ಣ ಪ್ರಮಾಣದಲ್ಲಿ ಆದಾಯ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳ ಮಾಡುವುದು ಸರ್ಕಾರಕ್ಕೂ ಹೆಚ್ಚಿ ಹೊರೆ ತರದು. ಹೀಗಾಗಿ ಸರ್ಕಾರ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬಹುದು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನಾಥ ಕಂದಮ್ಮಗಳಿಗೆ ಆಧಾರ್ ಕೂಡ ಸಿಗದೇ ಸಂಕಷ್ಟ: ಚಾಮರಾಜನಗರದಲ್ಲಿ ಕರುಣಾಜನಕ ಘಟನೆ
ವಿಶೇಷ ಅಧಿವೇಶನದಲ್ಲಿ ನಾರಿಶಕ್ತಿ ವಂದನ ಅಭಿಯಾನ ಕಾನೂನಾಗಲಿದೆ: ಮಾಳವಿಕಾ ಅವಿನಾಶ್