
ಬೆಂಗಳೂರು (ಡಿ.23): ಮುಂಬರುವ ವಿಧಾನಸಭೆ ಚುನಾವಣೆಯ ವೇಳೆಗೆ ಭಾರಿ ರಾಜಕೀಯ ದಾಳವಾಗಿ ಬಳಕೆಯಾಗಲಿದೆ ಎಂದೇ ನಿರೀಕ್ಷಿಸಲಾಗಿರುವ ಲಿಂಗಾಯತ ಹಾಗೂ ವೀರಶೈವ ಧರ್ಮದ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಮುಂದಾಗಿರುವ ರಾಜ್ಯ ಸರ್ಕಾರ ಶುಕ್ರವಾರ 7 ಮಂದಿ ತಜ್ಞರನ್ನೊಳಗೊಂಡ ಉನ್ನತಮಟ್ಟದ ಸಮಿತಿ ರಚಿಸಿದ್ದು, ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಿದೆ.
ಈಗಾಗಲೇ ಲಿಂಗಾಯತ ಹಾಗೂ ವೀರಶೈವ ಧರ್ಮದ ವಿಚಾರವಾಗಿ ಸಲ್ಲಿಕೆಯಾಗಿದ್ದ ಐದು ಮನವಿ ಪತ್ರಗಳ ಕುರಿತಂತೆ ಪರಿಶೀಲನೆ ನಡೆಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಳೆದ ಸೋಮವಾರವಷ್ಟೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಶಿಫಾರಸು ಮಾಡಿತ್ತು. ಸರ್ಕಾರದ ಮನವಿ ಮೇರೆಗೆ ಆಯೋಗವು ಶುಕ್ರವಾರ ತಜ್ಞರ ಸಮಿತಿ ರಚಿಸಿದೆ.
ಈ ಸಮಿತಿಯು ಅಧ್ಯಯನ ನಡೆಸಿ, ವೀರಶೈವ ಅಥವಾ ಲಿಂಗಾಯತ, ವೀರಶೈವ-ಲಿಂಗಾಯತ ಹಾಗೂ ಲಿಂಗಾಯತ ಈ ಮೂರು ಶಬ್ದಗಳ ಬಗೆಗೆ ಇರುವ ಸಂಶಯಗಳಿಗೆ ಉತ್ತರವಾಗಿ ಆಯೋಗಕ್ಕೆ ಶಿಫಾರಸು ಮಾಡಲಿದೆ. ಈ ಶಿಫಾರಸನ್ನು ಆಯೋಗ ರಾಜ್ಯ ಸರ್ಕಾರಕ್ಕೆ ಕಳಿಸಲಿದ್ದು, ಮುಂದೆ ಸರ್ಕಾರ ಆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ.
ಸಮಿತಿಯಲ್ಲಿ ಯಾರಿದ್ದಾರೆ? : ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾ. ನಾಗಮೋಹನ್ ದಾಸ್ ಸಮಿತಿಯ ಅಧ್ಯಕ್ಷರಾ ಗಿದ್ದು, ಚಿಂತಕ ಪ್ರೊ.ಮುಜಾಫರ್ ಅಸಾದಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ. ಎಸ್. ದ್ವಾರಕಾನಾಥ್, ಹಿರಿಯ ಪತ್ರಕರ್ತ ಸರಜೂ ಕಾಟ್ಕರ್, ವಿಮರ್ಶಕ ಡಾ. ಪುರುಷೋತ್ತಮ ಬಿಳಿ ಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದ ರಾಮಯ್ಯ, ಹಿರಿಯ ಸಾಹಿತಿ ರಾಮಕೃಷ್ಣ ಮರಾಠೆ ಸಮಿತಿಯ ಸದಸ್ಯರು.
ಸರ್ಕಾರ ಪರವಾದ ಸಮಿತಿ: ವಿಪಕ್ಷಗಳ ವಿರೋಧ : ರಾಜ್ಯ ಸರ್ಕಾರ ಈ ಸಮಿತಿ ರಚನೆ ಮಾಡಿರುವುದು ಹಾಗೂ ಆಯ್ಕೆ ವಿಧಾನಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಲಿಂಗಾಯತ ಧರ್ಮದ ಘೋಷಣೆ ಪರವಾಗಿಯೇ ವರದಿ ಪಡೆಯಲು ಅನುಕೂಲವಾಗುವ ಗಣ್ಯರನ್ನೇ ಸಮಿತಿಗೆ ನೇಮಕ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.