
ಉಡುಪಿ: ಉಡುಪಿ-ಮಂಗಳೂರಿಗೆ ಸೋಮವಾರ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ಕೊಟ್ಟದ್ದು ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಿಜೆಪಿಯ ಜನಸುರಕ್ಷಾ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರನ್ನು ಛೂ ಬಿಡಲು ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಕಾಪುವಿನಲ್ಲಿ ಮಂಗಳವಾರ ಬಿಜೆಪಿ ಜನಸುರಕ್ಷಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರ ಬರುತ್ತವೆ ಹೋಗುತ್ತವೆ. ಆದರೆ ಪೊಲೀಸರು ಇಲಾಖೆಯಲ್ಲೇ ಇರುತ್ತಾರೆ. ಪೊಲೀಸರೇ, ನೀವು ಕಾಂಗ್ರೆಸ್ ಪಕ್ಷದ ಚೇಲಾಗಳಾಗಿ ಕೆಲಸ ಮಾಡಬೇಡಿ. ಖುದ್ದು ಕಾಂಗ್ರೆಸ್ ಮುಖಂಡರು ರೌಡಿಗಳಿಗೆ ಕುಮ್ಮಕ್ಕು ಕೊಡುತ್ತಾ ನಿಮಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಪೊಲೀಸರನ್ನು ಉದ್ದೇಶಿಸಿ ಹೇಳಿದರು.
ನಲಪಾಡ್ ಅಫೀಮು ಸೇವಿಸಿದ್ದ, ಆತನಿಗೂ ಡ್ರಗ್ ಮಾಫಿಯಾಗೂ ಸಂಬಂಧ ಇದೆ. ಆದರೂ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ, ಆತನ ಬಳಿ ಏಳು ಪಿಸ್ತೂಲ್ಗಳಿದ್ದವು, ಅವುಗಳಿಗೆ ಲೈಸನ್ಸ್ ಎಲ್ಲಿಂದ ಬಂತು? ಅಕ್ರಮ ಶಸ್ತ್ರಾಸ್ತ್ರ ಸಾಗಣೆಗೂ ನಲಪಾಡ್ಗೂ ಸಂಬಂಧ ಇದೆಯೇ ಎಂಬ ಬಗ್ಗೆಯೂ ಸರ್ಕಾರ ತನಿಖೆ ನಡೆಸುತ್ತಿಲ್ಲ ಎಂದವರು ಆರೋಪಿಸಿದರು.
ಈವರೆಗೆ ಉತ್ತರಪ್ರದೇಶಕ್ಕೆ ಕ್ರಿಮಿನಲ್ ರಾಜ್ಯ ಎನ್ನುವ ಕುಖ್ಯಾತಿ ಇತ್ತು. ಇದಕ್ಕೆ ಅಲ್ಲಿ ಆಳುತ್ತಿದ್ದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳೇ ಕಾರಣವಾಗಿದ್ದವು. ಆದರೆ ಈಗ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ, ಅಲ್ಲಿನ ಚಿತ್ರಣವೇ ಬದಲಾಗಿದೆ. ಯೋಗಿ ಆದಿತ್ಯನಾಥ್ ಕ್ರಿಮಿನಲ್ಗಳ ವಿರುದ್ಧ ಸಮರ ಸಾರಿದ್ದಾರೆ. ಅಂತಹ ಆಡಳಿತ ಕರ್ನಾಟಕದಲ್ಲೂ ಬರಬೇಕು. ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.