ಕಾಂಗ್ರೆಸ್‌ನಲ್ಲಿ ಇದೀಗ ಸಿದ್ದರಾಮಯ್ಯ ಫುಲ್‌ ಆ್ಯಕ್ಟಿವ್‌!

Published : Aug 23, 2018, 09:51 AM ISTUpdated : Sep 09, 2018, 09:31 PM IST
ಕಾಂಗ್ರೆಸ್‌ನಲ್ಲಿ ಇದೀಗ ಸಿದ್ದರಾಮಯ್ಯ ಫುಲ್‌ ಆ್ಯಕ್ಟಿವ್‌!

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಪಕ್ಷದ ರಾಜಕೀಯದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಸ್ಥಳೀಯ ಚುನಾವಣೆ ಸಭೆ ಹಾಗೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 

ಬೆಂಗಳೂರು :  ಸ್ಥಳೀಯ ಸಂಸ್ಥೆ ಚುನಾವಣೆಗಳ ಬಿಸಿಯೇರುತ್ತಿರುವಂತೆಯೇ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದ ಮೇಲೆ ಹತೋಟಿ ಸಾಧಿಸತೊಡಗಿದ್ದು, ಪಕ್ಷದ ಪ್ರತಿಯೊಂದು ಚಟುವಟಿಕೆಯಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳತೊಡಗಿದ್ದಾರೆ.

ಪಕ್ಷ ಸಂಘಟನೆ ದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರು ಸಿದ್ದರಾಮಯ್ಯ ಅವರ ಈ ಉತ್ಸಾಹಕ್ಕೆ ಪೂರಕವಾಗಿ ನಡೆದುಕೊಳ್ಳತೊಡಗಿದ್ದು, ಇದು ಕಾಂಗ್ರೆಸ್‌ ಬಣ ರಾಜಕೀಯದ ಮೇಲಾಟಕ್ಕೆ ಮತ್ತೊಂದು ವೇದಿಕೆಯಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನಡೆಸುವ ಸಭೆಗಳಲ್ಲಿ ಸಿದ್ದರಾಮಯ್ಯ ಅವರು ತಪ್ಪದೇ ಹಾಜರಾಗಿದ್ದಾರೆ. ಅಲ್ಲದೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇದುವರೆಗೂ ಇಂತಹ ಐದು ಸಭೆಗಳು ನಡೆದಿದ್ದು, ಈ ಸಭೆಗಳಲ್ಲಿ ಮಂಡ್ಯ, ತುಮಕೂರು, ಮಂಗಳೂರು, ಶಿವಮೊಗ್ಗ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸಲಾಗಿದೆ.

ಇದಿಷ್ಟೇ ಅಲ್ಲ, ಮೈಸೂರು ಹಾಗೂ ಬಾದಾಮಿ ಕ್ಷೇತ್ರಕ್ಕೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿಯ ಸಭೆಯು ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದಿದ್ದು, ಆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಸಿಸಿ ಕಚೇರಿಯಿಂದ ಅಂತರ ಕಾಯ್ದುಕೊಂಡಿದ್ದ ಸಿದ್ದರಾಮಯ್ಯ ಅವರು ಇದೀಗ ಆಗಾಗ ಕೆಪಿಸಿಸಿ ಕಚೇರಿಯಲ್ಲಿ ಕಾಣಿಸಿಕೊಳ್ಳತೊಡಗಿದ್ದಾರೆ. ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರೊಂದಿಗೆ ಸಿದ್ದರಾಮಯ್ಯ ಉತ್ತಮ ಸಾಮರಸ್ಯವನ್ನು ಸಾಧಿಸಿದ್ದಾರೆ. ಈ ಮೂವರು ನಾಯಕರ ನಡುವೆ ಹೊಂದಾಣಿಕೆಯ ಪರಿಣಾಮವಾಗಿಯೇ ಕೊಡಗು ಜಿಲ್ಲೆ ನೆರೆ ಹಾನಿ ಪರಿಶೀಲನೆಗೆ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಹಾಗೂ ಈಶ್ವರ್‌ ಖಂಡ್ರೆ ಒಟ್ಟಿಗೇ ಗುರುವಾರ ತೆರಳಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ಮಾಡಲೆಂದೇ ವಿರೋಧ ಪಕ್ಷದವರು ಮಸೂದೆಗೆ ವಿರೋಧ?: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪ್ರಶ್ನೆ
ರಾಯಚೂರು: ಟಿಪ್ಪರ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿ; ಹತ್ತಿ ಮಾರಲು ಹೋಗಿದ್ದ ರೈತ ದುರ್ಮರಣ!