
ಬೆಂಗಳೂರು [ಜೂ. 21] : ಪಡಿತರ ಚೀಟಿದಾರ ಕುಟುಂಬದ ಸದಸ್ಯರ ಆಧಾರ್ ದೃಢೀಕರಣ (ಇ-ಕೆವೈಸಿ) ಮಾಡಿಕೊಳ್ಳುವುದನ್ನು ಜುಲೈ 15ರವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.
ರಾಜ್ಯಾದ್ಯಂತ ಪಡಿತರ ಚೀಟಿದಾರ ಕುಟುಂಬ ಸದಸ್ಯರ ಆಧಾರ್ ದೃಢೀಕರಣವನ್ನು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆನ್ಲೈನ್ ಮೂಲಕ ಮಾಡಿಕೊಳ್ಳುವಂತೆ ಈ ಹಿಂದೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚನೆ ನೀಡಿತ್ತು. ಜುಲೈ 31ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದ ಸದಸ್ಯರಿಗೆ ಪಡಿತರ ವಿತರಣೆ ನಿಲ್ಲಿಸುವುದಾಗಿ ಆದೇಶಿಸಿತ್ತು. ಇದೀಗ ಇ-ಕೆವೈಸಿ ನೋಂದಣಿಯನ್ನು ಜುಲೈ 15ರವರೆಗೆ ನ್ಯಾಯಬೆಲೆ ಅಂಗಡಿ ಹಂತದಲ್ಲಿ ಸಂಗ್ರಹಿಸುವುದನ್ನು ನಿಲ್ಲಿಸಲಾಗಿದೆ ಇಲಾಖೆ ತಿಳಿಸಿದೆ.
ತಾಂತ್ರಿಕ ದೋಷ ಕಾರಣ: ಇ-ಕೆವೈಸಿ ಮತ್ತು ಪಡಿತರ ವಿತರಣೆಯನ್ನು ಒಂದೇ ಸಮಯದಲ್ಲಿ ಮಾಡುತ್ತಿದ್ದ ಕಾರಣ ತಾಂತ್ರಿಕ ದೋಷ (ಸರ್ವರ್ಡೌನ್) ಕಂಡು ಬಂದಿತ್ತು. ಇದರಿಂದ ಪಡಿತರ ಚೀಟಿದಾರರು ಪಡಿತರಕ್ಕಾಗಿ ಮೂರ್ನಾಲ್ಕು ಬಾರಿ ನ್ಯಾಯಬೆಲೆ ಅಂಗಡಿಗೆ ಅಲೆದಾಡುವಂತಹ ಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿ ಇ-ಕೆವೈಸಿ ಅಥವಾ ಪಡಿತರ ವಿತರಣೆ ನಿಲ್ಲಿಸಿ ತಾಂತ್ರಿಕ ದೋಷದ ಸಮಸ್ಯೆ ಸರಿಪಡಿಸುವಂತೆ ರಾಜ್ಯ ಪಡಿತರ ವಿತರಕರ ಸಂಘದ ಸದಸ್ಯರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ 15 ದಿನಗಳ ಹಿಂದೆ ಸಭೆ ನಡೆಸಿದ್ದ ಆಯುಕ್ತರು ಇ-ಕೆವೈಸಿ ನೋಂದಣಿ ಮತ್ತು ಪಡಿತರ ವಿತರಣೆ ಅವಧಿಯಲ್ಲಿ ಬದಲಾವಣೆ ಮಾಡಿ ಆದೇಶಿಸಿದ್ದಾರೆ.
ಪ್ರತಿದಿನ ಬೆಳಗ್ಗೆ 7ರಿಂದ 12ರವರೆಗೆ ಪಡಿತರ ವಿತರಣೆ ಮತ್ತು 12ರಿಂದ 4 ಗಂಟೆವರೆಗೆ ಆನ್ಲೈನ್ ಅರ್ಜಿ, ಹೊಸ ಪಡಿತರ ಕಾರ್ಡ್ ವಿತರಣೆ ಇತ್ಯಾದಿ ಕಾರ್ಯಗಳು ಹಾಗೂ 4ರಿಂದ ರಾತ್ರಿ 8ರವರೆಗೆ ಪಡಿತರ ವಿತರಿಸುವಂತೆ ಸೂಚನೆ ನೀಡಿದ್ದರು. ಆದರೆ ನಿಗದಿತ ಅವಧಿಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜುಲೈ 15ರವರೆಗೆ ತಾತ್ಕಾಲಿಕವಾಗಿ ಇ-ಕೆವೈಸಿ ನೋಂದಣಿ ನಿಲ್ಲಿಸಲು ಇಲಾಖೆ ಆಯುಕ್ತರು ಆದೇಶ ನೀಡಿದ್ದಾರೆ. ಈ ಅವಧಿಯಲ್ಲಿ ತಾಂತ್ರಿಕ ದೋಷ ಕಂಡು ಬರದಂತೆ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ ಎಂದು ರಾಷ್ಟ್ರೀಯ ಪಡಿತರ ವಿತರಕರ ಒಕ್ಕೂಟದ ಕಾರ್ಯಾಧ್ಯಕ್ಷ ಟಿ.ಕೃಷ್ಣಪ್ಪ ಅವರು ಕನ್ನಡ ಪ್ರಭಕ್ಕೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.