
ಆನೇಕಲ್(ನ.09): ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರು ಸೆಲ್ಫಿ ವ್ಯಸನಿಗಳಾಗುತ್ತಿದ್ದು, ಎಲ್ಲೆಂದರಲ್ಲಿ ಮೊಬೈಲ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ದಾರುಣವಾಗಿ ಸಾವನ್ನಪ್ಪುತ್ತಿದ್ದಾರೆ.
ಹೌದು, ಕಾಲೇಜಿಗೆ ಚಕ್ಕರ್ ಹೊಡೆದು ಪ್ರವಾಸಕ್ಕೆ ಬಂದಿದ್ದ ವಿದ್ಯಾಥಿಗಳಿಬ್ಬರು ಕಲ್ಯಾಣಿ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ. ನಗರದ ಯಲಚೇನಹಳ್ಳಿ ವಾಸಿಗಳಾದ ಪ್ರಶಾಂತ್(17), ಜೀವನ್(16) ಸೆಲ್ಪೀ ಕ್ರೇಜ್`ಗೆ ಬಲಿಯಾದ ನತದೃಷ್ಟರು.
ಜಗರದ ಜ್ಯೋತಿ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳಾದ ಇವರು ಕಾಲೇಜಿಗೆ ಚಕ್ಕರ್ ಹೊಡೆದು ತಮ್ಮ 13 ಮಂದಿ ಸಹಪಾಠಿಗಳೊಂದಿಗೆ ಬನ್ನೇರುಘಟ್ಟ ಚಂಪಕಧಾಮಸ್ವಾಮಿ ದೇವಾಲಯ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಅರಣ್ಯಕ್ಕೆ ಹೊಂದಿಕೊಂಡಂತಿರುವ ಸುವರ್ಣಮುಖಿ ಕಲ್ಯಾಣಿ ವೀಕ್ಷಿಸಲು ಬಂದಿದ್ದಾರೆ. ಈ ವೇಳೆ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆಯ ತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಪೊಲೀಸರು ಮತ್ತು ಆಗ್ನಿ ಶಾಮಕದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಇದೇ ಕಲ್ಯಾಣಿಯಲ್ಲಿ ಪದೇ ಪದೇ ಅವಘಡಗಳು ಸಂಭವಿಸುತ್ತಿದೆ. ಮುಜರಾಯಿ ಇಲಾಖೆಗೆ ಸೇರಿದ ಸುವರ್ಣಮುಖಿ ಕಲ್ಯಾಣಿಗೆ ಸುತ್ತಲು ತಡೆ ಗೋಡೆ ನಿರ್ಮಿಸಿ ಕಬ್ಬಿಣದ ಸರಳುಗಳಿಂದ ಸುತ್ತು ಬೇಲಿ ನಿರ್ಮಿಸುವ ಕಾಮಗಾರಿ ಮುಜರಾಯಿ ಇಲಾಖೆ ಕೈಗೊಂಡಿತ್ತು. ಆದರೆ, ಅರಣ್ಯ ಇಲಾಖೆ ಅನಗತ್ಯವಾಗಿ ತಡೆಯೊಡ್ಡಿದ್ದು, ಕಾಮಗಾರಿ ಅರ್ಧಕ್ಕೆ ನಿಂತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.