
ಬೆಂಗಳೂರು (ಮಾ. 06): ರಾಜ್ಯದಲ್ಲಿ ಮುಂದಿನ ಮೂರು ತಿಂಗಳ ಅವಧಿಯವರೆಗೆ ಇರುಳಿನಲ್ಲಿ ಉಷ್ಣಾಂಶ ಹೆಚ್ಚಳವಾಗಲಿದ್ದು, ಪರಿಣಾಮ ಸೆಕೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಪ್ರಸಕ್ತ ವರ್ಷ ಅವಧಿಗಿಂತ ಮುನ್ನ ಬೇಸಿಗೆ ಆರಂಭವಾಗಿದೆ. ಮಾಚ್ರ್, ಏಪ್ರಿಲ್ ಹಾಗೂ ಮೇ ತಿಂಗಳ ಅವಧಿಯಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ ಶೇ.2 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗಲಿದೆ. ಇದರಿಂದ ಬಿಸಿ ಗಾಳಿ ಬಿಸಲಿದ್ದು, ರಾತ್ರಿ ವೇಳೆಯಲ್ಲಿ ಸೆಕೆ ಪ್ರಮಾಣ ಹೆಚ್ಚಾಗಲಿದೆ. ರಾಜ್ಯಾದ್ಯಂತ ಸರಾಸರಿ ರಾತ್ರಿ ವೇಳೆಯಲ್ಲಿ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಇಲಾಖೆಯ ತಿಳಿಸಿದೆ.
ವಾಡಿಕೆಯಂತೆ ಉತ್ತರ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ (ಸರಾಸರಿ 34ರಿಂದ 36 ಡಿಗ್ರಿ ಸೆಲ್ಸಿಯಸ್) ಹಗಲು ವೇಳೆಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಕರಾವಳಿ ಭಾಗದಲ್ಲಿ ಮಾತ್ರ ವಾಡಿಕೆ ಪ್ರಮಾಣಕ್ಕಿಂತ ಒಂದು ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಎರಡು ದಿನ ಮಳೆ ಸಾಧ್ಯತೆ:
ವಾತಾವರಣದಲ್ಲಿ ಗಾಳಿಯ ಒತ್ತಡ (ಟ್ರಫ್) ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಕೆಲವಡೆ ಮುಂದಿನ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಸೋಮವಾರ ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಆಗಿದೆ.
ಮುಂದಿನ ಎರಡು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜ ನಗರ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಐದರಿಂದ ಇಪತ್ತು ಮಿ.ಮೀ ಮಳೆ ಆಗಬಹುದು, ಉತ್ತರ ಒಳನಾಡು, ಮಳೆನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.