
ಬೆಂಗಳೂರು (ಜೂ. 25): ದೇಶದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ರಾಜ್ಯದ ವಿವಿಧ ಅಭಯಾರಣ್ಯಗಳಲ್ಲಿ ಕಳೆದ 10 ದಿನಗಳಲ್ಲಿ ಮೂರು ಹುಲಿಗಳು ಮೃತ ಪಟ್ಟಿದ್ದು, ಈ ಪೈಕಿ ಎರಡು ಹುಲಿಗಳ ಸಾವು ವಿಷ ಪ್ರಾಶನದಿಂದ ಆಗಿರಬಹುದು ಎಂಬ ಗುಮಾನಿ ಉಂಟಾಗಿರುವ ಕಾರಣ ವನ್ಯಜೀವಿ ಪ್ರೇಮಿಗಳಲ್ಲಿ ಆತಂಕ ಮೂಡಿದೆ.
ಬಂಡೀಪುರ ಹುಲಿ ಯೋಜನೆ ವ್ಯಾಪ್ತಿಯ ಮೂಲೆಹೊಳೆ ಅರಣ್ಯ ವಲಯದಲ್ಲಿ ಜೂ.19ರಂದು 7 ವರ್ಷದ ಹುಲಿ ಸಾವನ್ನಪ್ಪಿದೆ. ಇದರ ದೇಹದ ಮೇಲೆ ಗಾಯದ ಗುರುತುಗಳಿದ್ದು, ಎರಡು ಹುಲಿಗಳ ಕಾದಾಟದಿಂದ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.
ಉಳಿದಂತೆ ಮೈಸೂರು ಜಿಲ್ಲೆಯ ಭೀಮನಕಟ್ಟೆಯ ಬಳಿ ಜೂ.18ರಂದು 7 ವರ್ಷದ ಗಂಡು ಹುಲಿ ಅನುಮಾನಾಸ್ಪದವಾಗಿ ಮೃತಪಟ್ಟಿತ್ತು. ಈ ಹುಲಿಯ ಮೈಮೇಲೆ ಹಳೆಯ ಗಾಯದ ಗುರುತುಗಳು ಕಂಡುಬಂದಿದ್ದು, ಕತ್ತಿನ ಮೂಳೆ ಮುರಿದಿದೆ.
ಹೊಟ್ಟೆಭಾಗದ ಹಲವು ಅಂಗಾಂಗಗಳಿಗೆ ತೀವ್ರ ಪೆಟ್ಟಾಗಿದೆ. ಅಲ್ಲದೆ, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್ನಲ್ಲಿ ಜೂ.24ರಂದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದ್ದು, ಈ ಹುಲಿಗಳಿಗೆ ವಿಷ ಹಾಕಿ ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಬೆಳವಣಿಗೆ ವನ್ಯಜೀವಿ ಪ್ರೇಮಿಗಳಿಗೆ ಆತಂಕಕ್ಕೆ ಕಾರಣವಾಗಿದೆ.
ಕಳೆದ ಹತ್ತು ದಿನಗಳಲ್ಲಿ ಮೂರು ಹುಲಿಗಳು ಸತ್ತಿರುವ ಸಂಬಂಧ ವರದಿ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.
- ಸಂಜಯ್ ಮೋಹನ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.