'ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ನಮ್ಮ ಗುರಿ'

Published : Sep 14, 2017, 09:06 PM ISTUpdated : Apr 11, 2018, 12:36 PM IST
'ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ನಮ್ಮ ಗುರಿ'

ಸಾರಾಂಶ

ಪಕ್ಷದಲ್ಲಿ ಯಾವುದೇ ಗೊಂದಲ ಬೇಡ. ಪಕ್ಷದ ವರಿಷ್ಠರು ಯಾರಿಗೇ ಟಿಕೆಟ್ ಕೊಟ್ಟರೂ ಅಂತಹ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಅದಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವ ಕೆಲಸ ನಮ್ಮದಾಗಬೇಕು ಎಂದು ಜೆಡಿಎಸ್ ಜಿಲ್ಲಾ ಉಸ್ತುವಾರಿಯಾಗಿ ನೂತನವಾಗಿ ನೇಮಕಗೊಂಡ ಕೆ.ಬಿ.ಗೋಪಾಲ ಕೃಷ್ಣ ಅಭಿಪ್ರಾಯಪಟ್ಟರು.

ಕೋಲಾರ: ಪಕ್ಷದಲ್ಲಿ ಯಾವುದೇ ಗೊಂದಲ ಬೇಡ. ಪಕ್ಷದ ವರಿಷ್ಠರು ಯಾರಿಗೇ ಟಿಕೆಟ್ ಕೊಟ್ಟರೂ ಅಂತಹ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಅದಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವ ಕೆಲಸ ನಮ್ಮದಾಗಬೇಕು ಎಂದು ಜೆಡಿಎಸ್ ಜಿಲ್ಲಾ ಉಸ್ತುವಾರಿಯಾಗಿ ನೂತನವಾಗಿ ನೇಮಕಗೊಂಡ ಕೆ.ಬಿ.ಗೋಪಾಲ ಕೃಷ್ಣ ಅಭಿಪ್ರಾಯಪಟ್ಟರು.

ನಗರದ ಪತ್ರಕರ್ತರ ಭವನದಲ್ಲಿ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿ ಮುಂದಿನ ತಿಂಗಳು ಕೋಲಾರದಲ್ಲಿ ಬೃಹತ್ ಕಾರ್ಯಕರ್ತರ ಸಭೆ ನಡೆಸಲಾಗುವುದು. ಈ ಸಭೆಗೆ ಸುಮಾರು 50 ಸಾವಿರ ಮಂದಿಯನ್ನು ಸೇರಿಸಲಾಗುವುದು, ಈ ನಿಟ್ಟಿನಲ್ಲಿ ಎಲ್ಲಾ ಮುಖಂಡರು ಕೆಲಸ ಮಾಡಬೇಕು ಎಂದರು.

ರಾಜ್ಯ ವಿಧಾನಸಭಾ ಚುನಾವಣೆಗಳು ಹತ್ತಿರವಾಗುತ್ತಿವೆ, ಜಿಲ್ಲೆಯಲ್ಲಿರುವ ಎಲ್ಲಾ 6 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮದು. ಅದಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಸಂಘಟಿಸಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತೆ ಅಧಿಕಾರಕ್ಕೆ ಬರಬೇಕೆಂಬುದು ನಮ್ಮ ಗುರಿ. ಆದರೆ ಮುಖಂಡರ ನಡುವೆ ಗೊಂದಲಗಳಿವೆ, ಮುಂದಿನ ದಿನಗಳಲ್ಲಿ ಈ ಗೊಂದಲಗಳಿಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

ಜೆಡಿಎಸ್ ಮುಖಂಡರಾದ ಜಿ.ರಾಮರಾಜು ಮಾತನಾಡಿ, ವರಿಷ್ಠರು ನಮಗೆ ಜವಾಬ್ದಾರಿ ಕೊಟ್ಟಿದ್ದಾರೆ ಅದನ್ನು ಸಮರ್ಥವಾಗಿ ನಿರ್ವಹಿಸುವುದು ನಮ್ಮ ಕೆಲಸ ಎಂದರು. ಅಭ್ಯರ್ಥಿ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಗೊಂದಲ ಬೇಡ, ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ದುಡಿಯಲು ಸಿದ್ಧರಿದ್ದೇವೆ.

ಅದರೆ, ಜೆಡಿಎಸ್‌ಗೆ ಈ ಬಾರಿ ಕ್ಷೇತ್ರದಲ್ಲಿ ಗೆಲ್ಲುವ ಎಲ್ಲಾ ಅವಕಾಶಗಳು ಇರುವುದರಿಂದ ಸಮರ್ಥ ಮತ್ತು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂದರು.

ಕಲ್ಲಂಡೂರು ಲೋಕೇಶ್ ಮಾತನಾಡಿ, ಅಭ್ಯರ್ಥಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಅದನ್ನು ಮೊದಲು ನಿವಾರಿಸಿ ಪಕ್ಷದ ಮುಖಂಡರಲ್ಲಿ ಒಗ್ಗಟ್ಟು ತರಬೇಕು. ಇಲ್ಲಿ ಒಡಕು ಇರುವುದರಿಂದಲೇ ದಿನಕ್ಕೆ ಒಬ್ಬೊಬ್ಬರು ಅಭ್ಯರ್ಥಿ ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ಇದು ಕಾರ್ಯಕರ್ತರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ. ವಿಧಾನಸಭಾ ಚುನಾವಣೆಗಳು ಹತ್ತಿರ ಆಗುತ್ತಿವೆ, ಈ ಗೊಂದಲಗಳು ನಿವಾರಣೆ ಆಗಬೇಕು ಎಂದು ತಿಳಿಸಿದರು.

ಮೇಡಿಹಾಲ ಗೋಪಾಲಪ್ಪ ಮಾತನಾಡಿ, ಮೊದಲು ಅಭ್ಯರ್ಥಿ ಘೋಷಣೆ ಆಗಲಿ, ಆನಂತರ ಜನರ ಬಳಿಗೆ ಹೋಗೋಣ. ಅಭ್ಯರ್ಥಿ ಇಲ್ಲದೆ ಜನರ ಬಳಿ ಹೋಗುವುದು ಹೇಗೆ. ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಿದೆ, ಮುಖಂಡರಲ್ಲಿರುವ ಗೊಂದಲ ಗಳಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಖಡಕ್ಕಾಗಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿ ಜೆಡಿಎಸ್ ತಾಲೂಕು ಅಧ್ಯಕ್ಷ ಮೂರಂಡಹಳ್ಳಿ ಗೋಪಾಲ್, ಸಂಘಟನೆಯ ದೃಷ್ಟಿಯಿಂದ ಪಕ್ಷದ ವರಿಷ್ಠರು ಕೆಲವರಿಗೆ ಹೊಸದಾಗಿ ಜವಾಬ್ದಾರಿಗಳನ್ನು ಹೊರಿಸಿ ದ್ದಾರೆ. ಈ ಎಲ್ಲಾ ಮುಖಂಡರು ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡಬೇಕು. ಪ್ರಮುಖವಾಗಿ ಕೋಲಾರದ ಮುಖಂಡರು ವಾರಕ್ಕೆ ಕನಿಷ್ಠ ನಾಲ್ಕು ದಿವಸಗಳಾದರೂ ಕೇಂದ್ರ ಸ್ಥಾನದಲ್ಲಿರಬೇಕಾಗುತ್ತದೆ.

ಬೆಂಗಳೂರಿನಲ್ಲಿ ಕುಳಿತು ರಾಜಕಾರಣ ಮಾಡುವುದರಿಂದ ಏನೂ ಪ್ರಯೋಜನ ಆಗುವುದಿಲ್ಲ, ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಪಕ್ಷವನ್ನು ಸಂಘಟಿಸಿ ನೀವೂ ಬೆಳೆಯಿರಿ ಎಂದರು.ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ವರಿಷ್ಠರು ಬೇಗ ತೀರ್ಮಾನ ತೆಗೆದುಕೊಂಡು ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ದೂರ ಮಾಡಬೇಕು ಎಂದರು.

ಸಭೆಯಲ್ಲಿ ಮುಖಂಡರಾದ ಆರ್. ದಯಾನಂದ್, ಮಂಗಮ್ಮ ಮುನಿಸ್ವಾಮಿ, ಚನ್ನವೀರಯ್ಯ, ಈರಪ್ಪ, ಮುಂತಾದವರು ಇದ್ದರು, ಆದರೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಮುಬಾರಕ್, ಬಣಕನಹಳ್ಳಿ ನಟರಾಜ್, ರಾಜೇಶ್ವರಿ ಮುಂತಾದವರು ಗೈರು ಹಾಜರಿ ಎದ್ದು ಕಾಣುತ್ತಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವರ್ಷದ ಮೊದಲ ದಿನವೇ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್ ನೀಡಿದ LPG ಸಿಲಿಂಡರ್
ಆಕೆ ದೂರಿಗೆ ತಕ್ಷಣ ಸ್ಪಂದನೆ, ನನ್ನ ಬಗ್ಗೆ ಏಕಾಗಿ ಈ ನಿರ್ಲಕ್ಷ್ಯ? ದರ್ಶನ್ ಪತ್ನಿ ದೂರು