
ಬೆಂಗಳೂರು [ಆ.21]: ಬಿಜೆಪಿ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆಯೇ ಭುಗಿಲೆದ್ದಿದ್ದ ಬಂಡಾಯ ಸಂಜೆ ವೇಳೆಗೆ ತುಸು ಶಮನಗೊಂಡಿದ್ದು, ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಶಾಸಕರ ಪೈಕಿ ಕೆಲವರಿಗೆ ನಿಗಮ ಮಂಡಳಿ, ಸಂಸದೀಯ ಕಾರ್ಯದರ್ಶಿಗಳ ನೇಮಕದ ಭರವಸೆ ನೀಡಲಾಗಿದೆ.
ಸಚಿವ ಸ್ಥಾನದ ಆಕಾಂಕ್ಷೆ ಹೊಂದಿದ್ದ ಉಮೇಶ್ ಕತ್ತಿ, ಎಂ.ಪಿ.ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ರಾಜೂಗೌಡ ಗೂಳಿಹಟ್ಟಿಶೇಖರ್, ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಜಿ.ಎಚ್.ತಿಪ್ಪಾರೆಡ್ಡಿ ಮೊದಲಾದವರು ತಮಗೆ ಅವಕಾಶ ಸಿಗದೇ ಇದ್ದುದರಿಂದ ಬೇಸರಗೊಂಡಿದ್ದರು. ಇವರಲ್ಲಿ ಕೆಲವರು ಬಹಿರಂಗವಾಗಿ, ಇನ್ನುಳಿದವರು ತಮ್ಮ ಆಪ್ತರ ಬಳಿ ಖಾಸಗಿಯಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಆದರೆ, ಸಂಜೆ ಹೊತ್ತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಲಚಂದ್ರ ಜಾರಕಿಹೊಳಿ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದರು. ಈ ವೇಳೆ ಪಕ್ಷದ ರಾಜ್ಯ ಉಸ್ತುವಾರಿ ಪಿ.ಮುರಳೀಧರರಾವ್ ಅವರೂ ಇದ್ದರು. ಬಾಲಚಂದ್ರ ಅವರ ಸಹೋದರ ಹಾಗೂ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ನ್ಯಾಯಾಲಯದ ನಡೆ ನೋಡಿಕೊಂಡು ಶೀಘ್ರದಲ್ಲೇ ಸಚಿವ ಸ್ಥಾನ ಹಾಗೂ ಪ್ರಮುಖ ಖಾತೆ ನೀಡುವ ಸ್ಪಷ್ಟಭರವಸೆ ನೀಡಿದ ನಂತರ ಸಮಾಧಾನಗೊಂಡರು. ತಮ್ಮ ಕುಟುಂಬದ ಒಬ್ಬರಿಗೆ ಸಚಿವ ಸ್ಥಾನ ಸಿಕ್ಕರಾಯಿತು ಎಂದು ತೃಪ್ತಿ ಹೊರಹಾಕಿದರು ಎನ್ನಲಾಗಿದೆ.
ಇದೇ ವೇಳೆ ಯಡಿಯೂರಪ್ಪ ಮತ್ತು ಮುರಳೀಧರರಾವ್ ಅವರು ಇತರ ಅತೃಪ್ತ ಶಾಸಕರೊಂದಿಗೆ ಮಾತುಕತೆ ನಡೆಸಿ ಮುಂದಿನ ಹಂತದಲ್ಲಿ ಕೆಲವರಿಗೆ ಸಚಿವ ಸ್ಥಾನ ನೀಡುವ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು. ಇಲ್ಲದಿದ್ದರೆ ಪ್ರಮುಖ ನಿಗಮ ಮಂಡಳಿಗಳ ಅಧ್ಯಕ್ಷಗಿರಿ ನೀಡುವ ಭರವಸೆಯನ್ನೂ ನೀಡಿದರು. ಯಡಿಯೂರಪ್ಪ ಅವರ ಮಾತಿನಿಂದ ಹಲವು ಶಾಸಕರ ಕೋಪ ತಣ್ಣಗಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.