ಮುಖ್ಯಮಂತ್ರಿ ಸಿದ್ದರಾಮಯ್ಯ – ಅಮಿತ್ ಶಾ ನಡುವಿನ ಉಗ್ರ ಸಮರ
ಬೆಂಗಳೂರು (ಜ.11): ಅಮಿತ್ ಶಾ ವಿರುದ್ಧ ವಾಕ್ಸಮರ ತೀವ್ರಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೆಸ್ಸೆಸ್ ಸೇರಿದಂತೆ ಕೇಸರಿ ಸಂಘಟನೆಗಳನ್ನು ಭಯೋತ್ಪಾದಕ ಗುಂಪುಗಳಿಗೆ ಹೋಲಿಸಿದ್ದಾರೆ.
ಬಿಜೆಪಿ, ಆರೆಸ್ಸೆಸ್ ಹಾಗೂ ಬಜರಂಗದಳದವರು ಉಗ್ರಗಾಮಿಗಳಿದ್ದಂತೆ ಎಂದು ಜರೆದಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಮಾತಿಗೆ ಪೂರಕವಾಗಿ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ, ಆರೆಸ್ಸೆಸ್ ಹಾಗೂ ಬಜರಂಗದಳಕ್ಕೆ ಸೇರಿದವರಿಗೆ ‘ಜಿಹಾದಿಗಳ’ ಹಣೆಪಟ್ಟಿ ಕಟ್ಟಿದ್ದಾರೆ. ಅಲ್ಲದೆ, ಕೇಸರಿ ಸಂಘಟನೆಗಳನ್ನು ನಿಷೇಧಿಸುವಂತೆಯೂ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ
ಚಿತ್ರದುರ್ಗ: ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರ ಅಧಿಕಾರ ನಡೆಸುತ್ತಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ನಿರಂತರವಾಗಿ ಕಗ್ಗೊಲೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ಆರೋಪಿಸಿದರು.
ಪರಿವರ್ತನಾ ಯಾತ್ರೆ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಬುಧವಾರ ನಡೆದ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷ ದಲ್ಲಿ ಬಿಜೆಪಿ, ಆರೆಸ್ಸೆಸ್ನ 23 ಮಂದಿ ಕಾರ್ಯ ಕರ್ತರನ್ನು ರಾಜ್ಯದಲ್ಲಿ ಹತ್ಯೆ ಮಾಡಲಾಗಿದೆ. ಈ ಹತ್ಯೆಗಳ ಹಿಂದಿನ ಕಾರಣಗಳ ಬಗ್ಗೆ ಕನಿಷ್ಠ ತನಿಖೆಗಳು ನಡೆಯುತ್ತಿಲ್ಲ. ವಾಸ್ತವಾಂಶಗಳನ್ನು ಜನತೆಗೆ ತಿಳಿಸುವ ಪ್ರಯತ್ನ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಓಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ದೂರಿದರು.