
ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಯ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಸಿದ್ಧತೆ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಂತೆ ಭಾನುವಾರ ಜೆಡಿಎಸ್ನ ಮಹತ್ವದ ಸಭೆ ನಡೆಯಲಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪಕ್ಷದ
ನಾಯಕರು ಭಾಗವಹಿಸಲಿದ್ದಾರೆ.
ನಗರ ಸ್ಥಳೀಯ ಸಂಸ್ಥೆಯ ಚುನಾವಣೆಗೆ ನಡೆಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಸರ್ಕಾರದ ಮಟ್ಟದಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿರುವಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಕೈ ಜೋಡಿಸಬೇಕೇ? ಅಥವಾ ಬೇಡವೇ ಎಂಬುದರ ಕುರಿತು ಮಾತುಕತೆ ನಡೆಸುವುದರ ಜತೆಗೆ ಸಾಧಕ-ಬಾಧಕ ಕುರಿತು ಚರ್ಚೆಗಳು ನಡೆಯಲಿವೆ. ಏಕಾಂಗಿಯಾಗಿ ಚುನಾವಣಾ ಅಖಾಡಕ್ಕಿಳಿದರೆ ಪಕ್ಷಕ್ಕೆ ಉಂಟಾಗುವ ಲಾಭ-ನಷ್ಟಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ದೇವೇಗೌಡ ಅವರು ಪಕ್ಷದ ನಾಯಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಬೇರೆಯವರಿಗೆ ವಹಿಸುವ ಬಗ್ಗೆ ಮಾತುಕತೆ ನಡೆಯಲಿದೆ. ಈಗಾಗಲೇ ಪಕ್ಷದ ಮುಖಂಡ ಎಚ್.ವಿಶ್ವನಾಥ್ ಅವರಿಗೆ ವಹಿಸುವುದು ಬಹುತೇಕ ಖಚಿತವಾಗಿದೆ.
ಆದರೆ ವಿಶ್ವನಾಥ್ ಅವರೇ ಹಿಂದೇಟು ಹಾಕುತ್ತಿರುವ ಕಾರಣ ಅವರ ಮನವೊಲಿಸಲು ನಾಯಕರು ಮುಂದಾಗಿದ್ದಾರೆ. ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಪಿ.ಜಿ.ಆರ್.ಸಿಂಧ್ಯಾ ಸೇರಿದಂತೆ ಇತರೆ ನಾಯಕರು ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅವರೊಂದಿಗೆ ಇರುವ ಆಶ್ವಾಸನೆ ನೀಡುವ ಮೂಲಕ ಅವರ ಮನವೊಲಿಸಲಾಗುವುದು ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.