
ಬೆಂಗಳೂರು(ಆ.21): ಮುಂದಿನ 2024ರಲ್ಲಿ ಪ್ಯಾರಿಸ್ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ 75 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ನೀಡಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಘೋಷಿಸಿದ್ದ ‘ಅಮೃತ ಕ್ರೀಡಾ ದತ್ತು’ ಕಾರ್ಯಕ್ರಮದ ಅಡಿ ಈ ಸಮಿತಿ ರಚಿಸಲಾಗಿದೆ. ಸಮಿತಿ ರಚಿಸಿ ಹೊರಡಿಸಿರುವ ಆದೇಶದಲ್ಲಿ ಆಯ್ಕೆಯಾದ ಪ್ರತಿ ಕ್ರೀಡಾಪಟು ತರಬೇತಿ, ಸಂಬಂಧಪಟ್ಟ ಕ್ರೀಡೆಯ ಕಿಟ್ ಮುಂತಾದವುಗಳಿಗೆ ತಲಾ ಐದು ಲಕ್ಷ ರುಪಾಯಿ ಪಡೆಯಲಿದ್ದಾರೆ.
ಎಂಟು ಜನರ ಸಮಿತಿಯ ಅಧ್ಯಕ್ಷರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಕಾರ್ಯ ನಿರ್ವಹಿಸಲಿದ್ದಾರೆ. ಉಳಿದಂತೆ ಅರ್ಜುನ ಪ್ರಶಸ್ತಿ ಪುರಸ್ಕೃತ ಶ್ರೀಧರ್, ರಘುನಾಥ್ ಹಾಗೂ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಅಮಿನ್ ಸಮಿತಿಯಲ್ಲಿದ್ದಾರೆ. ಈ ಮೂವರು ಉತ್ತಮ ಕ್ರೀಡಾಪಟುವನ್ನು ಗುರುತಿಸುವ ಸಮಿತಿಯಲ್ಲಿಯೂ ಸಹ ಕಾರ್ಯ ನಿರ್ವಹಿಸಲಿದ್ದಾರೆ.
ಟೋಕಿಯೋ ಪ್ಯಾರಾಲಿಂಪಿಕ್ಸ್: ಕರ್ನಾಟಕ ಸರ್ಕಾರದಿಂದ ಬಂಪರ್ ಬಹುಮಾನ ಘೋಷಣೆ
ವೈಜ್ಞಾನಿಕವಾಗಿ ಅರ್ಹ ಕ್ರೀಡಾಪಟುವನ್ನು ಗುರುತಿಸಲಾಗುವುದು, ಜೊತೆಗೆ ತರಬೇತಿ ಶಿಬಿರ ಹಾಗೂ ಟೂರ್ನಮೆಂಟ್ಗಳಲ್ಲಿ ಸಹ ಅರ್ಹರನ್ನು ಪರಿಗಣಿಸಲಾಗುವುದು. 2024ರ ಒಲಿಂಪಿಕ್ನಲ್ಲಿ ಪದಕ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದಲ್ಲಿ ಭಾರತ ಇರಬೇಕು. ಕರ್ನಾಟಕದ ಕ್ರೀಡಾಪಟುಗಳು ಹೆಚ್ಚಿನ ಪದಕ ಹೊಂದಿರಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಪಾಲರಿಂದ ಶೀಘ್ರ ಸನ್ಮಾನ:
ಈ ಮಧ್ಯ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಟೊಕಿಯೋ ಒಲಿಂಪಿಕ್ನಲ್ಲಿ ಭಾಗವಹಿಸಿದ್ದ ಕರ್ನಾಟಕದ ನಾಲ್ವರು ಕ್ರೀಡಾ ಪಟುಗಳಿಗೆ ತಲಾ ಒಂದು ಲಕ್ಷ ರುಪಾಯಿ ಬಹುಮಾನ ಘೋಷಿಸಿದ್ದಾರೆ. ಶೀಘ್ರದಲ್ಲಿ ಕಾರ್ಯಕ್ರಮ ಏರ್ಪಡಿಸಿ ಗೌರವಿಸಲಾಗುವುದು ಎಂದು ರಾಜಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.