
ನವದೆಹಲಿ(ಜೂ.07): ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ ಭೂಷಣ್ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಕುಸ್ತಿಪಟುಗಳ ಪ್ರತಿಭಟನೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಪ್ರತಿಭಟನಾ ನಿರತ ಕುಸ್ತಿಪಟುಗಳ ಜೊತೆ ಸುದೀರ್ಘ ಮಾತುಕತೆ ನಡೆಸಿದ ಅನುರಾಗ್ ಠಾಕೂರ್ ಕೆಲ ಮಹತ್ವದ ಘೋಷಣೆ ಮಾಡಿದ್ದಾರೆ. ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧದ ತನಿಖೆ ಪೂರ್ಣಗೊಳ್ಳಲಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಠಾಕೂರ್ ನೀಡಿದ ಭರವಸೆ ಮೇರೆಗೆ ಕುಸ್ತಿಪಟುಗಳು ಜೂನ್ 15ರ ವರೆಗೆ ಪ್ರತಿಭಟನೆ ರದ್ದು ಮಾಡಲು ನಿರ್ಧರಿಸಿದ್ದಾರೆ.
ಅನುರಾಗ್ ಠಾಕೂರ್ ಅಹ್ವಾನದ ಮೇರೆಗೆ ಮಾತುಕತೆಗಾಗಿ ತೆರಳಿದ ಕುಸ್ತಿಪಟುಗಳು ಹಲವು ಬೇಡಿಕೆ ಮುಂದಿಟ್ಟಿದ್ದಾರೆ. ಪ್ರಮುಖವಾಗಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧಿಸುವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂಬ ಅಚಲ ನಿರ್ಧಾರವನ್ನು ಕುಸ್ತಿಪಟಗಳು ವ್ಯಕ್ತಪಡಿಸಿದ್ದಾರೆ. ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧ ನಡೆಯುತ್ತಿರುವ ತನಿಖೆ ಪೂರ್ಣಗೊಳ್ಳಲಿದೆ. ಜೂನ್ 15ಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗಲಿದೆ. ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಅನುರಾಗ್ ಠಾಕೂರ್ ಭರವಸೆ ನೀಡಿದ್ದಾರೆ.
ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲಿನ ಎಫ್ಐಆರ್ ವಾಪಸ್ ಪಡೆಯಲು ಕುಸ್ತಿಪಟುಗಳು ಬೇಡಿಕೆ ಮುಂದಿಟ್ಟಿದ್ದಾರೆ. ಇದಕ್ಕೆ ಕ್ರೀಡಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಹಿಳಾ ಕುಸ್ತಿಪಟುಗಳ ಸುರಕ್ಷತೆ ಕುರಿತು ಭರವಸೆ ನೀಡಲಾಗಿದೆ. ಅನುರಾಗ್ ಠಾಕೂರ್ ಭರವಸೆ ನೀಡಿದ ಬಳಿಕ ಜೂನ್ 15ರ ವರೆಗೆ ಪ್ರತಿಭಟನೆ ತಾತ್ಕಾಲಿಕವಾಗಿ ಕೈಬಿಡಲು ಒಪ್ಪಿದ್ದಾರೆ. ಆದರೆ ಜೂನ್ 15ರ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ.
ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ವಿರುದ್ಧ ತನಿಖೆಯನ್ನು ದೆಹಲಿ ಪೊಲೀಸರು ಚುರುಕುಗೊಳಿಸಲಾಗಿದೆ. ಇದರ ಆಧಾರದಲ್ಲಿ ಅನುರಾಗ್ ಠಾಕೂರ್ ಜೂನ್ 15ರೊಳಗೆ ತನಿಖೆ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕುಸ್ತಿಪಟುಗಳು ಶನಿವಾರ ಭೇಟಿ ಮಾಡಿದ್ದರು. ಈ ಚರ್ಚೆ ಬಳಿಕ ಬ್ರಿಜ್ ಭೂಷಣ ಅವರ ದೆಹಲಿ, ಲಖನೌ ಹಾಗೂ ಗೊಂಡ ನಿವಾಸಗಳಿಗೆ ದೆಹಲಿ ಪೊಲೀಸರು ಭೇಟಿ ನೀಡಿ ಅವರ ಆಪ್ತರು, ಮನೆಗೆಲಸದವರನ್ನು ವಿಚಾರಣೆ ನಡೆಸಿದ್ದಾರೆ.
Wrestlers Protest: ಕುಸ್ತಿಪಟುಗಳ ಬೆನ್ನಿಗೆ ನಿಂತ ರೈತರು!
ಕೆಲಸದವರ ಬಳಿ ಬ್ರಿಜ್ರ ವರ್ತನೆ, ನಡತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿದ್ದು, ವಿಚಾರಣೆಗೆ ಒಳಪಟ್ಟವರ ಮಾಹಿತಿ, ವಿಳಾಸವನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಮುಂದೆ ಮತ್ತೆ ವಿಚಾರಣೆಗೆ ಕರೆದರೆ ಬರಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಕುಸ್ತಿ ಫೆಡರೇಶನ್ಗೆ 3-4 ಅಧಿಕಾರಿಗಳನ್ನೂ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಅಧಿಕಾರಿಗಳಿಂದ ಬ್ರಿಜ್ರ ಕೆಲಸದ ಶೈಲಿ, ಕುಸ್ತಿ ಚಟುವಟಿಕೆಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮಾಹಿತಿ ಪಡೆದಿರುವುದಾಗಿ ವರದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.