
ಹಾವೇರಿ(ಶಿಗ್ಗಾವಿ)(ನ.05): ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬಸವರಾಜ ಬೊಮ್ಮಾಯಿ. ಇವರ ಕಾಲದಲ್ಲೇ 40 ಪರ್ಸೆಂಟ್ ಕಮಿಷನ್ ಬಂದಿದ್ದು. ಶಿಗ್ಗಾಂವಿ ಕ್ಷೇತ್ರಕ್ಕೆ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅವರ ಕೊಡುಗೆ ಏನು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಶಿಗ್ಗಾಂವಿ ಕ್ಷೇತ್ರದ ಹುಲಗೂರು, ಹುರಳಿಕುಪ್ಪಿ, ಬಂಕಾಪುರದಲ್ಲಿ ಸೋಮವಾರ ಪಕ್ಷದ ಅಭ್ಯರ್ಥಿ ಯಾಸೀರ್ಖಾನ್ ಪಠಾಣ ಪರ ಪ್ರಚಾರ ನಡೆಸಿ ಮಾತನಾಡಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ಹಿಂದುಳಿದವರಿಗೆ, ದಲಿತರಿಗೆ, ಮಹಿಳೆಯರಿಗೆ, ಬಡವರಿಗೆ ಇಂತಿಂಥ ಕೆಲಸ ಮಾಡಿದ್ದೇವೆ ಎಂದು ಜನರಿಗೆ ಹೇಳಲು ಅವರ ಬಳಿ ಏನೂ ಇಲ್ಲ. ಮುಖ್ಯಮಂತ್ರಿ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ಈ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಈ ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದಿರುವ ಬೊಮ್ಮಾಯಿ ಈ ಕ್ಷೇತ್ರಕ್ಕೆ ಏನೂ ಮಾಡಿಲ್ಲ. ಶಿಗ್ಗಾಂವಿ, ಸವಣೂರು ಏತ ನೀರಾವರಿಗೆ ಹಣ ಕೊಟ್ಟವರು ನಾವು. ಬೊಮ್ಮಾಯಿಯವರೇ ನೀವೇನು ಮಾಡಿದ್ದೀರಿ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಕೊಟ್ಟಿಲ್ಲ ಎಂದು ಆರೋಪಿಸಿದರು.
ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಸಿದ್ಧ: ಬೊಮ್ಮಾಯಿ
ಹಾವೇರಿ (ಶಿಗ್ಗಾವಿ): ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ನಮ್ಮ ಸರ್ಕಾರ ಕೋವಿಡ್ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಂ ಡಿದೆ. ಮಂತ್ರಿ, ಸಿಎಂ ಆಗಿ ಮಾಡಿದ ಅಭಿವೃದ್ಧಿ, ಶಿಗ್ಗಾವಿ- ಸವಣೂರು ಕ್ಷೇತ್ರದ ಅಭಿವೃದ್ಧಿ ಬಗೆಗಿನ ಬಹಿ ರಂಗ ಚರ್ಚೆಗೆ ಸಿದ್ದನಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.
'ಸಿದ್ದರಾಮಯ್ಯನವರೇ, ನಾನು ಕ್ಷೇತ್ರದಲ್ಲಿ ಒಂದು ಮನೆಯನ್ನು ಕಟ್ಟಿಲ್ಲ. ಬದಲಾ ಗಿ 12,500 ಮನೆ ಕಟ್ಟಿಸಿದ್ದೇನೆ. ಬೇಕಿದ್ದರೆ ದಾಖಲೆ ತೆಗೆದು ನೋಡಿ. ಸಿಎಂ ಆಗಿ ಹಸಿ ಸುಳ್ಳು ಹೇಳುವುದು ನಿಮ್ಮ ಸ್ಥಾನಕ್ಕೆ ಶೋಭೆ ತರದು' ಎಂದು ಕಿಡಿಕಾರಿದರು. 'ನಮ್ಮ ಸರ್ಕಾರ ಕೊರೋನಾ ನಿಯಂತ್ರಿಸಲು ಕ್ರಮ ಕೈಗೊಂಡಿದೆ. ಎರಡಿದ್ದ ಟೆಸ್ಟ್ ಲ್ಯಾಬ್ಗಳನ್ನು 60ಕ್ಕೇರಿಸಿ ಸಾವಿರಾರು ಜನರ ಪ್ರಾಣ ಉಳಿಸಿದೆ. ಈ ಯಶಸ್ಸು ಕಂಡು ಅಸೂಯೆಯಿಂದ ರಾಜಕೀಯ ಪ್ರೇರಿತ ಆರೋಪ ಮಾಡುವುದನ್ನು ಬಿಡಿ. ನನ್ನ ಸ್ವಂತ ಮನೆಯನ್ನೇ ಕೊವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿ ಕ್ಷೇತ್ರದ ನೂರಾರು ಮಂದಿಗೆ ಚಿಕಿತ್ಸೆ ಕೊಟ್ಟಿರುವುದನ್ನು ಜನ ಎಂದೂ ಮರೆಯುದಿಲ್ಲ' ಎಂದು ತಿಳಿಸಿದರು. 'ನನ್ನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನಿಮ್ಮ ಸರ್ಕಾರದ ಬಳಿಯೇ ದಾಖಲೆ ಇವೆ. ಇಲ್ಲದಿದ್ದರೆ ಅದ್ದನು ಕಳುಹಿಸಿ ಕೊಡಲು ಸಿದ್ದನಿದ್ದೇನೆ' ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.