ಕರ್ನಾಟಕದಲ್ಲಿ 5 ವರ್ಷವೂ ಗ್ಯಾರಂಟಿ ಯೋಜನೆ ಇರುತ್ತವೆ: ಸಿದ್ದರಾಮಯ್ಯ

By Kannadaprabha NewsFirst Published Nov 28, 2023, 2:00 AM IST
Highlights

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡುತ್ತಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ರಾಜಕೀಯ ಪ್ರೇರಿತ ಹಾಗೂ ಸತ್ಯಕ್ಕೆ ದೂರವಾದ ಆರೋಪ. ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿ ಐದು ವರ್ಷಗಳವರೆಗೂ ಅನುಷ್ಠಾನಗೊಳ್ಳಲಿವೆ. 

ಮುಶೀರಾಬಾದ್‌ (ತೆಲಂಗಾಣ): ‘ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡುತ್ತಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ರಾಜಕೀಯ ಪ್ರೇರಿತ ಹಾಗೂ ಸತ್ಯಕ್ಕೆ ದೂರವಾದ ಆರೋಪ. ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿ ಐದು ವರ್ಷಗಳವರೆಗೂ ಅನುಷ್ಠಾನಗೊಳ್ಳಲಿವೆ. ರಾಜ್ಯದ ಜನತೆಯನ್ನು ಮೋಸ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತೆಲಂಗಾಣ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್‌ ಅವರು ಸೋಲಿನ ಭಯದಿಂದ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂತು. ಅಧಿಕಾರ ಸ್ವೀಕರಿಸಿದ ಮೇ 20ರ ದಿನವೇ ಐದೂ ಗ್ಯಾರಂಟಿ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿ ಸರ್ಕಾರಿ ಆದೇಶಗಳನ್ನೂ ಹೊರಡಿಸಲಾಯಿತು. ಇದು ನಮ್ಮ ಪಕ್ಷಕ್ಕೆ ಇರುವ ಬದ್ಧತೆ ಎಂದು ಹೇಳಿದರು.

Latest Videos

ಬಿಜೆಪಿ ತನ್ನ ಭರವಸೆಗಳನ್ನು ಈಡೇರಿಸಿಲ್ಲ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಈ ಹಿಂದೆಯೂ ಕಾಂಗ್ರೆಸ್ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಆದರೆ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಸಾಕಷ್ಟು ಭರವಸೆಗಳನ್ನು ನೀಡಿದ್ದರೂ, 2019-2023ರ ತನ್ನ ಅವಧಿಯಲ್ಲಿ ಕೇವಲ ಶೇ. 10 ರಷ್ಟು ಭರವಸೆ ಮಾತ್ರ ಈಡೇರಿಸಿತ್ತು. ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮಾಡುತ್ತಿರುವ ಆರೋಪಗಳು ಚುನಾವಣಾ ಪ್ರೇರಿತ ಎಂದರು.

ರಾಜ್ಯ ಸರ್ಕಾರ ಹೊಸದಾಗಿ ಜಾತಿಗಣತಿ ನಡೆಸಲಿ: ಮಾಜಿ ಸಚಿವ ರೇಣುಕಾಚಾರ್ಯ

ಶಕ್ತಿ ಯೋಜನೆಗೆ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅನ್ನಭಾಗ್ಯ ಅಡಿ 4.37 ಕೋಟಿ ಜನರು ಲಾಭ ಪಡೆಯುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಶೇ.97 ರಷ್ಟು ಮನೆಗಳಿಗೆ 200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. 1.14 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಮಾಸಿಕ 2 ಸಾವಿರ ರು. ಸಹಾಯಧನ ನೀಡಲಾಗುತ್ತಿದೆ. ಇನ್ನು 2024ರ ಜನವರಿಯಲ್ಲಿ ಯುವನಿಧಿ ಯೋಜನೆಯೂ ಜಾರಿಗೆ ಬರಲಿದೆ ಎಂದು ಹೇಳಿದರು.

click me!