Assembly election: ಜೆಡಿಎಸ್‌ ಅಭ್ಯರ್ಥಿ ತಿಪ್ಪೇಸ್ವಾಮಿಗೆ ಅದ್ಧೂರಿ ಸ್ವಾಗತ

By Kannadaprabha NewsFirst Published Dec 23, 2022, 7:49 AM IST
Highlights

ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಮೊದಲ ಬಾರಿಗೆ ಹೊಸದುರ್ಗಕ್ಕೆ ಆಗಮಿಸಿದ್ದ ಎಂ. ತಿಪ್ಪೇಸ್ವಾಮಿ ಅವರನ್ನು ಪಕ್ಷದ ಕಾರ್ಯಕರ್ತರು ಗುರುವಾರ ಅದ್ಧೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.

ಹೊಸದುರ್ಗ (ಡಿ.23) : ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಮೊದಲ ಬಾರಿಗೆ ಹೊಸದುರ್ಗಕ್ಕೆ ಆಗಮಿಸಿದ್ದ ಎಂ. ತಿಪ್ಪೇಸ್ವಾಮಿ ಅವರನ್ನು ಪಕ್ಷದ ಕಾರ್ಯಕರ್ತರು ಗುರುವಾರ ಅದ್ಧೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.

ಪಟ್ಟಣದ ಟಿಬಿ ವೃತ್ತದಲ್ಲಿ ತಾಲೂಕಿನ ನಾನಾ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು, ಅಭಿಮಾನಿಗಳು ಎಚ್‌.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿ ಎಂ. ತಿಪ್ಪೇಸ್ವಾಮಿ ಅವರಿಗೆ ಜೈಕಾರ ಹಾಕಿದರು.

Assembly election: 2023 ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಜೆಡಿಎಸ್‌ ಅಭ್ಯರ್ಥಿ ಎಂ. ತಿಪ್ಪೇಸ್ವಾಮಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಎಚ್‌.ಡಿ. ಕುಮಾರಸ್ವಾಮಿ ಅವರು ನನ್ನನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಎರಡು ತಿಂಗಳಿಂದ ಪಕ್ಷ ಸಂಘಟನೆ ಮಾಡಿರುವೆ ಆದರೂ ಇವತ್ತಿನಿಂದ ಚುರುಕಾಗಿ ಸಂಘಟನೆ ಮಾಡುತ್ತೇನೆ. ತಾಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಬಡ ಕುಟುಂಬದ ಹಿನ್ನೆಲೆಯಲ್ಲಿ ಬಂದ ನಾನು ಇಂದು ಉದ್ಯಮಿಯಾಗಿ 2 ಸಾವಿರ ಜನರಿಗೆ ಉದ್ಯೋಗ ನೀಡಿರುವೆ. ಈ ಹಿನ್ನೆಲೆಯಲ್ಲಿ ತಾಲೂಕಿನ ನಿರುದ್ಯೋಗಿ ಜನರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತನಾಗುತ್ತೇನೆ ಎಂದರು.

ತೆಂಗು ತಾಲೂಕಿನ ಪ್ರಮುಖ ಬೆಳೆ. ಕೊಬ್ಬರಿ ಮತ್ತು ಅಡಕೆಗೆ ಸೂಕ್ತವಾದ ಬೆಂಬಲ ಬೆಲೆ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರೈತ ಪರ ಆಡಳಿತ ನೀಡಿದ್ದಾರೆ. ನಾನು ಸಹ ರೈತರ ಪರವಾಗಿ ಇರುತ್ತೇನೆ. ಈ ತಾಲೂಕಿನ ಜನರ ಖುಣ ತೀರಿಸುವ ಕೆಲಸ ಮಾಡುತ್ತೇನೆ. ತಾಲೂಕಿನ ಜನ ನನಗೆ ಆಶೀರ್ವಾದಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರಿಗೆ ಸಾಲದಿಂದ ಮುಕ್ತಿ: ಸಿ.ಎಂ.ಇಬ್ರಾಹಿಂ

ತಾಲೂಕು ಜೆಡಿಎಸ್‌ ಅಧ್ಯಕ್ಷ ಜಿ. ಗಣೇಶ ಮೂರ್ತಿ ಮಾತನಾಡಿ, ಎರಡು ರಾಷ್ಟ್ರೀಯ ಪಕ್ಷಗಳ ಧೋರಣೆಯಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ತಾಲೂಕಿನ 15 ಸಾವಿರ ರೈತ ಕುಟುಂಬಗಳ ಸಾಲಮನ್ನಾ ಮಾಡಿದ್ದಾರೆ. ಆ ರೈತ ಕುಟುಂಬಗಳನ್ನು ನೇರವಾಗಿ ಭೇಟಿ ಮಾಡಿ ಜೆಡಿಎಸ್‌ಗೆ ಮತ ನೀಡುವಂತೆ ಮನವಿ ಮಾಡಲಿದ್ದೇವೆ. ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಅರಿತು ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಅಭ್ಯರ್ಥಿ ಎಂ.ತಿಪ್ಪೇಸ್ವಾಮಿ ಅವರಿಗೆ ತಾಲೂಕಿನ ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಸಾಥ್‌ ನೀಡಲಿದ್ದೇವೆ. ಈ ಬಾರಿ ಹೊಸದುರ್ಗದಲ್ಲಿ ಜೆಡಿಎಸ್‌ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್‌ ಜಿಲ್ಲಾಧ್ಯಕ್ಷ ಯಶೋಧರ, ಬಾ. ಮೈಲಾರಪ್ಪ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

click me!