
ಕಲಬುರಗಿ(ಆ.06): ದೇಶ ಉಳಿಯಬೇಕಾದರೆ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಗೃಹಜ್ಯೋತಿ’ ಯೋಜನೆಗೆ ಚಾಲನೆ ನೀಡುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಬ್ಬ ವ್ಯಕ್ತಿಗಾಗಿ ‘ಇಂಡಿಯಾ’ ಕೂಟ ಅಧಿಕಾರಕ್ಕೆ ಬರಬೇಕು ಎಂದು ನಾವು ಹೇಳುತ್ತಿಲ್ಲ. ಬದಲಾಗಿ ಬಡವರು, ದೀನ ದಲಿತರು, ಶೋಷಿತರು, ಕಾರ್ಮಿಕರು... ಹೀಗೆ ಸಮಾಜದ ಎಲ್ಲರ ಒಳಿತಿಗಾಗಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಪ್ರಬಲವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ಇಡೀ ದೇಶದ ಜನರೇ ಶ್ಲಾಘನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ ನೇತೃತ್ವದಲ್ಲಿ ಈ ಗ್ಯಾರಂಟಿಗಳು ಜಾರಿಗೆ ಬರುತ್ತಿವೆ ಎಂದು ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಶಹಬ್ಬಾಸ್ಗಿರಿ ನೀಡಿದರು.
ರಾಜ್ಯ ಸರ್ಕಾರವನ್ನು ಜನ ಕಿತ್ತೆಸೆಯಲಿದ್ದಾರೆ: ಗೋವಿಂದ ಕಾರಜೋಳ
ಪ್ರಧಾನಿ ಮೋದಿಯವರು ಸರ್ಕಾರಿ ಸಮಾರಂಭದಲ್ಲಿ ಕರ್ನಾಟಕ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಗ್ಯಾರಂಟಿಗಳು ಜಾರಿಯಾಗುವುದಿಲ್ಲ. ಇವುಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳುತ್ತಾರೆ. ಆದರೆ, ರಾಜ್ಯದಲ್ಲಿ ಎಲ್ಲವನ್ನೂ ಜಾರಿಗೆ ತರಲಾಗುತ್ತಿದೆ. ಪ್ರಧಾನಿ ಮೋದಿ ಅವರು ತಮ್ಮ ಬಳಿ ಇರುವ ಇಂಟೆಲಿಜೆನ್ಸ್ ಮೂಲಕ ವರದಿ ತರಿಸಿಕೊಂಡು ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿರುವ ಬಗ್ಗೆ ತಿಳಿದುಕೊಳ್ಳಲಿ ಎಂದರು.
ಕಲಬುರಗಿಗೆ ಬರುವ ಮುನ್ನ ಹಿಮಾಚಲ ಸಿಎಂ ಭೇಟಿಯಾಗಿದ್ದರು. 5 ಗ್ಯಾರಂಟಿ ಯೋಜನೆಗಳನ್ನು ಹೇಗೆ ಜಾರಿಗೆ ತರುತ್ತೀರಿ ಎಂದು ಕೇಳಿದ್ದರು. ಮನಸ್ಸಿದ್ದರೆ ಮಾರ್ಗ, ಬಡವರ ಪರ ಕೆಲಸ ಮಾಡುವ ಇಚ್ಛೆ ಇದ್ದರೆ ಇಂತಹ ಅನೇಕ ಗ್ಯಾರಂಟಿಗಳನ್ನು ಜಾರಿಗೆ ತರಬಹುದು ಎನ್ನಲು ಕರ್ನಾಟಕದಲ್ಲಿನ ನಮ್ಮ ಸರ್ಕಾರದ ಸಾಧನೆಯೇ ಕನ್ನಡಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.