
ಬೆಂಗಳೂರು (ಮಾ.22): ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಅಂತಿಮ ಘಟ್ಟ ತಲುಪುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಚಾರಕ್ಕೆ ರೂಪುರೇಷೆ ಸಿದ್ಧಪಡಿಸಿದ್ದು, ‘ಜನಶಕ್ತಿ’ ಹೆಸರಿನಲ್ಲಿ ತಿಂಗಳಾಂತ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ರಾಜ್ಯಾದ್ಯಂತ 30 ದಿನಗಳ ಕಾಲ ನಡೆಯಲಿರುವ ‘ಜನಶಕ್ತಿ’ ಪ್ರಚಾರಕ್ಕೆ ಮಾ.28 ಅಥವಾ 29 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೀದರ್ನ ಬಸವ ಕಲ್ಯಾಣದಿಂದ ಚಾಲನೆ ನೀಡಲಿದ್ದಾರೆ.
ಈ ವೇಳೆ ಪ್ರಿಯಾಂಕ ಗಾಂಧಿ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರನ್ನೂ ಒಗ್ಗೂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸವಣ್ಣನ ನಾಡು ಬಸವಕಲ್ಯಾಣದಿಂದ ಆರಂಭಿಸಿ ರಾಷ್ಟ್ರಕವಿ ಕುವೆಂಪು ಅವರ ಶಿವಮೊಗ್ಗದಲ್ಲಿ ಪ್ರಚಾರ ಕಾರ್ಯಕ್ರಮ ಮುಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ.
ಮೊದಲ ದಿನ ಬಸವಣ್ಣನ ನಾಡಿನಿಂದ ಪ್ರಚಾರ ಆರಂಭಿಸಲಾಗುತ್ತದೆ. ತನ್ಮೂಲಕ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಲಾಭವನ್ನು ಪಡೆಯಲು ತಂತ್ರ ರೂಪಿಸಲಾಗಿದೆ. ಜತೆಗೆ ಕಳೆದ ವಿಧಾನಸಭೆಯಲ್ಲಿ ಕೈ ಹಿಡಿದಿದ್ದ ಲಿಂಗಾಯತ ಮತ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವುದು ಸಹ ಕಾಂಗ್ರೆಸ್ ಉದ್ದೇಶ ಎನ್ನಲಾಗಿದೆ.
ಕಾಂಗ್ರೆಸ್ ಸರ್ಕಾರದ ಆರ್ಥಿಕ ಸ್ಥಿತಿ ಅಯೋಮಯ: ಮಾಜಿ ಸಿಎಂ ಬೊಮ್ಮಾಯಿ
ಸಿಎಂ-ಡಿಸಿಎಂ ಜಂಟಿ, ಪ್ರತ್ಯೇಕ ಪ್ರಚಾರ: 2ನೇ ದಿನ ಕೋಲಾರದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕವಾಗಿ ಪ್ರಚಾರ ನಡೆಸಲು ತಯಾರಿ ನಡೆಸಲಾಗಿದೆ. ಅಗತ್ಯವಿರುವ ಕಡೆ ಒಗ್ಗಟ್ಟಾಗಿ ಪ್ರಚಾರ ನಡೆಸಲಿದದು, ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪ್ರಮುಖ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಸರ್ಕಾರ ಸಾಧನೆಗಳು, ಕೇಂದ್ರ ಸರ್ಕಾರ ವೈಫಲ್ಯಗಳು ಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ಗೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಲು ಕಾಂಗ್ರೆಸ್ ರೂಪುರೇಷೆ ಸಿದ್ಧಪಡಿಸುತ್ತಿದೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.