ಬಿಜೆಪಿ ಪಾದಯಾತ್ರೆಗೆ ತಿರುಗೇಟು ನೀಡಲು ಕೈ ಬಿಗ್ ಪ್ಲಾನ್! ಈ ಒಂದು ಕಾರ್ಯಕ್ರಮಕ್ಕೆ ಇಡೀ ಸಚಿವ ಸಂಪುಟವೇ ಬಳ್ಳಾರಿಗೆ?

Ravi Janekal   | Kannada Prabha
Published : Sep 04, 2026, 12:19 PM IST
Ballari Politics

ಸಾರಾಂಶ

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ, ಕಾಂಗ್ರೆಸ್ ಈ ಕಾರ್ಯಕ್ರಮವನ್ನು ಬೃಹತ್ ಶಕ್ತಿ ಪ್ರದರ್ಶನವನ್ನಾಗಿ ಮಾಡಲು ಸಜ್ಜಾಗಿದೆ.

ಮಂಜುನಾಥ ಕೆ.ಎಂ. ಬಳ್ಳಾರಿ

ಬಳ್ಳಾರಿ (ಸೆ.4): ಬಳ್ಳಾರಿ ನಗರದ ಎಸ್ಪಿ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿಸಿದ್ದು, ಇದನ್ನು ಅದ್ಧೂರಿ ಕಾರ್ಯಕ್ರಮವನ್ನಾಗಿ ರೂಪಿಸುವ ಮೂಲಕ ಬಿಜೆಪಿಯ ಪಾದಯಾತ್ರೆಗೆ ರಾಜಕೀಯವಾಗಿ ತಿರುಗೇಟು ನೀಡಲು ಕಾಂಗ್ರೆಸ್‌ ಸಜ್ಜಾಗಿದೆ.

ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಧೋರಣೆ ಖಂಡಿಸಿ ಬಿಜೆಪಿ ರಾಯಚೂರಿನಿಂದ ಬಳ್ಳಾರಿಯವರೆಗೆ ನಡೆಸುತ್ತಿರುವ ಪಾದಯಾತ್ರೆ ಸೆ. 10ರಂದು ಬಳ್ಳಾರಿಗೆ ತಲುಪಲಿರುವ ಹಿನ್ನೆಲೆಯಲ್ಲಿ ಪುತ್ಥಳಿ ಅನಾವರಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಗಣಿನಾಡಿನ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಾಲ್ಮೀಕಿ ನಿಗಮ ಹಗರಣದಿಂದ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಸಂಘರ್ಷ

ವಾಲ್ಮೀಕಿ ನಿಗಮದ ಹಗರಣ ಬೆಳಕಿಗೆ ಬಂದ ಬಳಿಕ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಉಭಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ, ವಾಕ್ಸಮರ ನಡೆಸುತ್ತಿದ್ದು, ಮಾಜಿ ಸಚಿವ ಹಾಗೂ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜಕೀಯ ಜಿದ್ದಾಜಿದ್ದು ಮತ್ತಷ್ಟು ಹೆಚ್ಚಾಗಿದೆ.

ಇದೀಗ ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಬೃಹತ್‌ ಪ್ರಮಾಣದಲ್ಲಿ ಆಯೋಜಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಸುಮಾರು 50 ಸಾವಿರ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ನಡೆಸುವ ಉದ್ದೇಶ ಹೊಂದಿದ್ದು, ಕಾರ್ಯಕ್ರಮದ ದಿನಾಂಕ ಶೀಘ್ರದಲ್ಲೇ ಅಂತಿಮಗೊಳಿಸಲಾಗುತ್ತಿದೆ.

ಸಚಿವ ಸಂಪುಟವೇ ಬಳ್ಳಾರಿಗೆ ಆಗಮಿಸುವ ಸಾಧ್ಯತೆ!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಇಡೀ ಸಚಿವ ಸಂಪುಟವೇ ಬಳ್ಳಾರಿಗೆ ಆಗಮಿಸುವ ಸಾಧ್ಯತೆ ಇದ್ದು, ಕಾರ್ಯಕ್ರಮವನ್ನು ಪಕ್ಷದ ಶಕ್ತಿ ಪ್ರದರ್ಶನದ ವೇದಿಕೆಯಾಗುವುದು ನಿಚ್ಚಳವಾಗಿದೆ.

ಬ್ಯಾನರ್‌ ಗಲಾಟೆ ಕಹಿ ನೆನಪು:

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ಸಂಬಂಧಿಸಿದಂತೆ ಬ್ಯಾನರ್‌ ಅಳವಡಿಸುವ ವಿಚಾರದಲ್ಲಿ 2026ರ ಜನವರಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಜಿಲ್ಲೆಯಲ್ಲಿ ರಾಜಕೀಯ ಬಿಸಿ ಹೆಚ್ಚಿಸಿತ್ತು. ಘಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ ಎಂಬಾತ ಖಾಸಗಿ ಭದ್ರತಾ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿದ್ದ. ಘಟನೆ ಬಳಿಕ ಶಾಸಕ ನಾರಾ ಭರತ್‌ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಗ್ರಹಿಸಿದ್ದರು. ಪ್ರಕರಣ ಸಂಬಂಧ ಉಭಯ ಪಕ್ಷಗಳ ನಾಯಕರ ನಡುವೆ ತೀವ್ರ ವಾಕ್ಸಮರವೂ ನಡೆದಿತ್ತು.

ಬ್ಯಾನರ್‌ ಗಲಾಟೆಗೆ ಸಂಬಂಧಿಸಿದಂತೆ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದು, ಗನ್‌ಮ್ಯಾನ್‌ಗಳಾದ ಗುರುಚರಣ್‌ ಸಿಂಗ್‌, ಬಲ್ಜಿತ್‌ ಸಿಂಗ್‌ ಹಾಗೂ ಮಹೇಂದ್ರ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ 10 ಮತ್ತು ಬಿಜೆಪಿಯ 11 ಕಾರ್ಯಕರ್ತರು ಸೇರಿ ಒಟ್ಟು 26 ಮಂದಿಯನ್ನು ಬಂಧಿಸಲಾಗಿತ್ತು.

ಬಳಿಕ ನ್ಯಾಯಾಲಯ 25 ಜನ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಬ್ಯಾನರ್ ಗಲಾಟೆ, ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ, ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜಿನಾಮೆ ಈ ಎಲ್ಲ ರಾಜಕೀಯ ಬೆಳವಣಿಗೆಯಿಂದ ಬಳ್ಳಾರಿ ಜಿಲ್ಲೆ ರಾಜ್ಯಮಟ್ಟದಲ್ಲಿ ಹೆಚ್ಚು ಸದ್ದು ಮಾಡಿತ್ತು. ಏತನ್ಮಧ್ಯೆ ಪ್ರತಿಪಕ್ಷ ಬಿಜೆಪಿ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಸದನದಲ್ಲಿ ಹೋರಾಟ ನಡೆಸಿದ ಫಲಿತ ಎಂಬಂತೆ ಸಚಿವ ಸ್ಥಾನಕ್ಕೆ ಶಾಸಕ ಬಿ. ನಾಗೇಂದ್ರ ರಾಜಿನಾಮೆಗೆ ನೀಡಿದ್ದು, ಇದು ಸರ್ಕಾರಕ್ಕೂ ಒಂದಷ್ಟು ಮುಜುಗರ ತಂದಂತಾಗಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಇದೀಗ ಬಳ್ಳಾರಿ ರಾಜಕೀಯದ ಮುಂದಿನ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗುವ ಲಕ್ಷಣಗಳಿವೆ.

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ಬೃಹತ್ ಕಾರ್ಯಕ್ರಮ ಆಯೋಜಿಸುತ್ತೇವೆ. 50 ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಅರ್ಥಪೂರ್ಣ ಸಮಾರಂಭ ಹಮ್ಮಿಕೊಳ್ಳಲಾಗುವುದು. ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

BJP Padayatra Karatagi: ಬಿಜೆಪಿ ಪಾದಯಾತ್ರೆಗೆ ಭರ್ಜರಿ ಸ್ವಾಗತ; ಇಂದು ಕಾರಗಿಯಲ್ಲಿ ನಡೆಯುವ ಕಾರ್ಯಕ್ರಮಗಳೇನು?
ಇಸ್ಲಾಂ ಪರ ಹೇಳಿಕೆ ನೀಡಿದ ರಾಯರೆಡ್ಡಿಗೆ ಅಪ್ಪ, ಅಜ್ಜನ ಧರ್ಮನಿಷ್ಠೆ ನೆನಪಿಸಿದ ಹಾಲಪ್ಪ ಆಚಾರ್!