
ಹಾವೇರಿ (ಮಾ.07): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದೆ. ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ. ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್, 1.32 ಲಕ್ಷ ಕೋಟಿ ರು. ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರು. ಹೊಸ ತೆರಿಗೆ ಹಾಕಿ, 22 ಸಾವಿರ ಕೋಟಿ ರು. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್. ಇದರಿಂದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು 10ರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ. 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ಉದಾಹರಣೆಗೆ ನೀರಾವರಿಗೆ ಕೇವಲ 22 ಸಾವಿರ ಕೋಟಿ ರು. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರು. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ. ಇವರು ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಒಳ ಮೀಸಲಾತಿ ಗೊಂದಲ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಸಚಿವರ ನಡುವೆ ಗೊಂದಲ ಇದೆ, ಹೀಗಾಗಿ ದಲಿತ ಸಮಾಜಕ್ಕೆ ಅನ್ಯಾಯ ನಡೆಯುತ್ತಿದೆ. ಒಳ ಮೀಸಲಾತಿ ಕಾನೂನು ಮಾಡಿರುವುದೇ ಸರ್ಕಾರ. ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು ರಾಜ್ಯಪಾಲರ ಒಪ್ಪಿಗೆ ಪಡೆದಿದ್ದಾರೆ. ಮೀಸಲಾತಿ ಪ್ರಮಾಣವನ್ನು ಶೇ.17 ಪರ್ಸೆಂಟ್ ಮಾಡಿ ಈಗ ಅದನ್ನು ಕೊಡುವುದಿಲ್ಲ ಅಂದರೆ ಹೇಗೆ? ಈ ಬಗ್ಗೆ ಅಡ್ವೊಕೇಟ್ ಜನರಲ್ ಅವರೇ ಅಫಿಡವಿಟ್ ಸಲ್ಲಿಸಿದ್ದಾರೆ. ಕೋರ್ಟ್ ಯಾವುದೇ ಡೈರೆಕ್ಷನ್ ಕೊಟ್ಟಿಲ್ಲ, ಆ ಕುಂಟು ನೆಪದಲ್ಲಿ ದಲಿತ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ದಲಿತ ಸಮಾಜ ಉಗ್ರವಾಗಿ ವಿರೋಧ ಮಾಡುತ್ತಿದೆ. ಕೂಡಲೇ ಸರ್ಕಾರ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಬಿಜೆಪಿ ಕೂಡ ತೀವ್ರ ಹೋರಾಟ ಮಾಡಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.