
ರಾಮನಗರ (ಆ.10): ದ ಗ್ರೇಟ್ ಡಿ.ಕೆ.ಶಿವಕುಮಾರ್(The Great DK Shivakumar) ಅವರು ದೆಹಲಿಯಲ್ಲಿರುವ ಕಾಂಗ್ರೆಸ್ ಅಧಿನಾಯಕರಿಗೆ ಮಂತ್ಲಿ ಕೊಡುವುದಾಗಿ ಅಗ್ರಿಮೆಂಟ್ ಮಾಡಿಕೊಂಡು ಬಂದಿದ್ದಾರೆ. ಅಲ್ಲಿಗೆ ಹಣ ಕೊಡಲು ಬಿಡದಿ ಟೌನ್ಶಿಪ್ ಯೋಜನೆ(Bidadi Township) ಮಾಡುತ್ತಿದ್ದಾರೆ. ಈ ಪಾದಯಾತ್ರೆಯೇ ಕಾಂಗ್ರೆಸ್ ಸರ್ಕಾರಕ್ಕೆ ಮರಣ ಶಾಸನವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಬೈರಮಂಗಲ ವೃತ್ತದಲ್ಲಿ ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಪಾದಯಾತ್ರೆಗೆ ಚಾಲನೆ ನೀಡಿದ ಅವರು, ಮುಖ್ಯಮಂತ್ರಿ ಸ್ಥಾನ ನೀಡಿದ್ದಕ್ಕಾಗಿ ಡಿ.ಕೆ.ಶಿವಕುಮಾರ್ ಪ್ರತಿ ತಿಂಗಳು ಹಣ ಕೊಡುವ ಅಗ್ರಿಮೆಂಟ್ ಮಾಡಿಕೊಂಡು ಬಂದಿದ್ದಾರೆ ಎಂದು ಟೀಕಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬೈರಮಂಗಲದಿಂದ ಕೈಗೊಂಡಿರುವ ಬಿಡದಿ ಟೌನ್ಶಿಪ್ ವಿರೋಧಿ ಪಾದಯಾತ್ರೆ ರೈತರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ದಿಕ್ಸೂಚಿ ಜತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮರಣಶಾಸನವೂ ಆಗಲಿದೆ. ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಈ ಪಾದಯಾತ್ರೆ ಮೂಲಕ ರೈತರು ಅಡಿಪಾಯ ಹಾಕಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಟೌನ್ಶಿಪ್ ಯೋಜನೆ ವಿಷಯದಲ್ಲಿ ಅತಿ ಕಾಳಜಿ ವಹಿಸುತ್ತಿದ್ದಾರೆ. ಯಾರಿಗೋ ಲಾಭ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ. ಇದುವರೆಗೂ ಒಂದು ಎಕರೆಗೆ ₹2 ಕೋಟಿ ಭೂ ಪರಿಹಾರ ಕೊಡುವುದಾಗಿ ಹೇಳುತ್ತಿದ್ದವರು ಇವತ್ತು ಬೆಳಗ್ಗೆ ವೀಡಿಯೋ ಮಾಡಿ ಒಂದು ಎಕರೆಗೆ ₹3 ಕೋಟಿ ಕೊಡುವುದಾಗಿ ಹೇಳಿದ್ದಾರೆ. ಇದಕ್ಕೆ ನೀವು (ರೈತರು) ಮರುಳಾಗಬೇಡಿ. ಈ ಮುಖ್ಯಮಂತ್ರಿ ನಿಮಗೆ ಮೋಸ ಮಾಡುತ್ತಿದ್ದಾರೆ ಎಂದು ರೈತರನ್ನು ಎಚ್ಚರಿಸಿದರು.
ನೈಸ್ (ಬಿಎಂಐಸಿ) ಯೋಜನೆಗೆ ಭೂಸ್ವಾಧೀನ ಮಾಡಿಕೊಂಡು 30 ವರ್ಷ ಕಳೆದರೂ ಭೂಮಿ ಕಳೆದುಕೊಂಡವರಿಗೆ ಪರಿಹಾರ ಮತ್ತು ನಿವೇಶನ ಕೊಟ್ಟಿಲ್ಲ. ಬಿಡದಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ಜಮೀನಿಗೆ ಒಂದು ಎಕರೆಗೆ 3 ಕೋಟಿ ಕೊಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಯಾವ ಆಧಾರದ ಮೇಲೆ ಹೇಳಿದ್ದಾರೆ. ಇದೇನು ಚೌಕಾಸಿ ವ್ಯಾಪಾರವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಬಿಡದಿ ಟೌನ್ಶಿಪ್ ಹಾಗೂ ನೈಸ್ ಬ್ರಹ್ಮಾಂಡ ಭ್ರಷ್ಟಾಚಾರದ ಯೋಜನೆಗಳಾಗಿವೆ. ಎರಡೂ ಯೋಜನೆಗಳು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆಯೇ. ಕಾಗೋಡು ತಿಮ್ಮಪ್ಪ ಅಧ್ಯಕ್ಷತೆಯ ಸತ್ಯ ಶೋಧನಾ ಸಮಿತಿಯಲ್ಲಿ 2ನೇ ಹೆಸರು ಡಿ.ಕೆ.ಶಿವಕುಮಾರ್ ಅವರದ್ದಾಗಿದೆ. 2 ಸಾವಿರ ಎಕರೆ ನೋಟಿಫಿಕೇಷನ್ ಆಗಿದೆಯೆಂದು ಸಮಿತಿಯಲ್ಲಿ ಹೇಳಿದ್ದರಲ್ಲ. ಆ ಭೂಮಿ ಎಲ್ಲಿ ಹೋಯಿತು ಎಂದು ಪ್ರಶ್ನೆ ಮಾಡಿದರು.
2006-07ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ, ಆ ನಂತರ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಡದಿ ಯೋಜನೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರವೇ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದೇಶಗಳಂತೆ ರಸ್ತೆ, ಬೃಹತ್ ಕಾರ್ಖಾನೆ, ಉದ್ಯೋಗ ನಿರ್ಮಿಸಿ ಯುವಕರಿಗೆ ಉದ್ಯೋಗ ಕೊಡುವ ಭರವಸೆ ನೀಡಿದ್ದಾರೆ. ಇದನ್ನು ನಂಬಬೇಕೇ. ಹೀಗೆ ಹೇಳುತ್ತಿರುವ ಇವರು ಕನಕಪುರದಲ್ಲಿ ದಲಿತರ ಭೂಮಿಯನ್ನು ಲೂಟಿ ಹೊಡೆದಿದ್ದಾರೆ ಎಂದು ಎಚ್ಡಿಕೆ ಆರೋಪ ಮಾಡಿದರು.
ಬಿಡದಿ ಟೌನ್ಶಿಪ್ ಭಾಗದಲ್ಲಿ 6 ಲಕ್ಷ ಲೀಟರ್ ಹಾಲು ಉತ್ಪಾದಿಸಲಾಗುತ್ತಿದೆ. ಜೊತೆಗೆ ರೇಷ್ಮೆ, ಮಾವು, ಅಡಿಕೆ, ತೆಂಗು ಎಲ್ಲವೂ ಇದೆ. ಇಂತಹ ಭೂಮಿಯನ್ನು ಅವರೇ ನೀಡಿದ್ದ ಸತ್ಯಶೋಧನಾ ಸಮಿತಿ ವರದಿಗೆ ವಿರುದ್ಧವಾಗಿ ಟೌನ್ಶಿಪ್ ಮಾಡಲು ಹೊರಟಿದ್ದಾರೆ. ದಲ್ಲಾಳಿಗಳು ಮಾತ್ರ ಜಮೀನು ಕೊಡುತ್ತಿದ್ದಾರೆ. ಪಿತ್ರಾರ್ಜಿತ ಆಸ್ತಿ ಹಾಗೂ ಭೂಮಿಯನ್ನೇ ನಂಬಿ ಬದುಕುತ್ತಿರುವ ರೈತರು ಹೋರಾಟ ಮಾಡುತ್ತಿದ್ದಾರೆ. ಅವರ ಪರವಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೋರಾಟ ನಡೆಸುತ್ತಿವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.