ಬಿಜೆಪಿ ಅಧಿಕಾರಕ್ಕೆ ಬಂದಾಕ್ಷಣ ಬಿಡದಿ ಟೌನ್ ಶಿಪ್ ಯೋಜನೆ ರದ್ದು: ಆರ್.ಅಶೋಕ್

Published : Sep 17, 2025, 11:42 AM IST
R Ashok

ಸಾರಾಂಶ

ಜನರಿಗೆ ಕೂಪನ್ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಮನೆ ಹಾಳು ಕಾಂಗ್ರೆಸ್ ಸರ್ಕಾರ ಇನ್ನು ಎರಡು ವರ್ಷಗಳಷ್ಟೇ ಇರಲಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ರಾಮನಗರ (ಸೆ.17): ಜನರಿಗೆ ಕೂಪನ್ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಮನೆ ಹಾಳು ಕಾಂಗ್ರೆಸ್ ಸರ್ಕಾರ ಇನ್ನು ಎರಡು ವರ್ಷಗಳಷ್ಟೇ ಇರಲಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ತಾಲೂಕಿನ ಬಿಡದಿ ಹೋಬಳಿ ಬೈರಮಂಗಲ ವೃತ್ತದಲ್ಲಿ ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಚಳವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಕೂಪನ್ ಕೊಟ್ಟ ರೈತರನ್ನು ಕೂಪಕ್ಕೆ ತಳ್ಳುತ್ತಿದೆ.

ಮುಂದಿನ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನೂರು ಪರ್ಸೆಂಟ್ ಗ್ಯಾರಂಟಿ. ಅಲ್ಲಿವರೆಗೆ ಸರ್ವೆ ಕಾರ್ಯ ಹಾಗೂ ಭೂ ಸ್ವಾಧೀನ ಆಗದಂತೆ ರೈತರು ನೋಡಿಕೊಳ್ಳಬೇಕು ಎಂದರು. ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ನಮ್ಮ ತೆರಿಗೆ - ನಮ್ಮ ಹಕ್ಕು ಎಂದು ಹೋರಾಟ ಮಾಡುತ್ತಾರೆ. ಇಲ್ಲಿ ನಮ್ಮ ಭೂಮಿ - ನಮ್ಮ ಹಕ್ಕು ಎಂದ ಹೋರಾಟ ಮಾಡುತ್ತಿರುವ ರೈತರಿಗೆ ಅವರ ಭೂಮಿಯನ್ನು ಅವರಿಗೆ ಬಿಟ್ಟು ಕೊಡಿ.ರೈತರ ಎಷ್ಟೋ ಹೋರಾಟಗಳು ಯಶಸ್ಸು ಕಂಡಿವೆ. ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯದಿದ್ದರೆ ದೇವನಹಳ್ಳಿ ಮಾದರಿಯಲ್ಲಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಬುರುಡೆ ಬಿಡುತ್ತಿರುವ ಕೈ ನಾಯಕರು : ಗ್ರೇಟರ್ ಬೆಂಗಳೂರು ಹೆಸರಲ್ಲಿ ಹಳ್ಳ ತೋಡಿದರು. ರಾಮನ ಹೆಸರು ತೆಗೆದು ಬೆಂಗಳೂರು ಮಾಡಿದರು. ಇದರಿಂದ ಜನರ ಬದುಕೇನು ಬದಲಾವಣೆ ಆಗಿಲ್ಲ. 2006ರ ಬಿಡದಿ ಟೌನ್ ಶಿಪ್ ಯೋಜನೆಗೆ ಅಸ್ತಿತ್ವವೇ ಇಲ್ಲ. ಆ ಹೆಸರಿನಲ್ಲಿ ಭೂಮಿ ಕಬಳಿಸಲು ಮುಂದಾಗಿದ್ದಾರೆ. ಧರ್ಮಸ್ಥಳದಲ್ಲಿ ಬುರುಡೆ ಬಿಟ್ಟಂತೆ ಇಲ್ಲಿಯೂ ಬುರುಡೆ ಬಿಡುತ್ತಿದ್ದಾರೆ ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ 8 ಲಕ್ಷ ಪ್ಲಾಟ್ ಗಳು, ಲಕ್ಷಾಂತರ ನಿವೇಶನಗಳು ಖಾಲಿ ಇವೆ. ಕೆಎಚ್ ಬಿ ಅವರು ನಿರ್ಮಿಸಿರುವ ಶೇ.80ರಷ್ಟು ನಿವೇಶನಗಳು ಖಾಲಿಯಿದ್ದು, ಯಾರು ಸಹ ಮನೆ ಕಟ್ಟಿಲ್ಲ. ಅಲ್ಲಿರುವ ಹೊಸ ಬಡಾವಣೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಹೀಗಿದ್ದಾಗ ಫಲವತ್ತಾದ ಭೂಮಿಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಿ ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಒಂದೆಡೆ ಸರ್ಕಾರ ವಿಧಾನಸೌಧದ ಮುಂದೆ ನಿಂತು ಹಸಿರು ಉಳಿಸಿ ಪರಿಸರ ಬೆಳೆಸಿ ಎಂದು ಘೋಷಣೆ ಮಾಡುತ್ತದೆ. ಮತ್ತೊಂದೆಡೆ ಟೌನ್ ಶಿಪ್ ಹೆಸರಿನಲ್ಲಿ ಮರ ಗಿಡಗಳನ್ನು ಕಡಿಯಲು ಮುಂದಾಗಿದೆ. ದೇವನಹಳ್ಳಿಯಲ್ಲೂ ಸಹ ನಿಮ್ಮಂತೆ ಹೋರಾಟ ನಡೆಸಿ ಯಶಸ್ಸು ಕಂಡಿದ್ದಾರೆ. ನೀವುಗಳು ನಿಮ್ಮ ಹೋರಾಟ ಮುಂದುವರೆಸಿ, ನಿಮ್ಮ ಬದುಕು, ಜೀವನ ಉಳಿಸಿಕೊಳ್ಳಲು ನಾವು ಬೆಂಬಲ ನೀಡುವ ಜೊತೆಗೆ ಸದನದಲ್ಲಿ ಪ್ರಸ್ತಾಪಿಸುತ್ತೇನೆ ಭರವಸೆ ನೀಡಿದರು. ರಾಜ್ಯ ಸರ್ಕಾರ ಬೆಂಗಳೂರು ಸುತ್ತಮುತ್ತ ಆನೇಕಲ್ ಯಶವಂತಪುರ ಭಾಗದಲ್ಲಿಯೂ ಸುಮಾರು 60 ಸಾವಿರ ಎಕರೆ ರೈತರ ಭೂಮಿಯನ್ನು ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಪೂರ್ವಿಕರ ಜಮೀನನ್ನು ಉಳಿಸಿಕೊಳ್ಳುವ ಸವಾಲು ಮುಂದಿದೆ. ಗ್ರಾಮಕ್ಕೆ ಬರುವ ಭೂ ಸ್ವಾಧೀನ ಸಂಬಂಧ ಯಾವುದೇ ಅಧಿಕಾರಿಗಳನ್ನು ಗ್ರಾಮಕ್ಕೆ, ಭೂಮಿಯ ಹತ್ತಿರ ಬಿಟ್ಟುಕೊಡಬೇಡಿ ಎಂದು ಅಶೋಕ್ ಕರೆನೀಡಿದರು.

ನೀರಾವರಿ ಜಮೀನು ವರ್ಗಾಯಿಸಲು ಆಗಲ್ಲ

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ಯಾವುದೇ ನೀರಾವರಿ ಜಮೀನನ್ನು ಕೈಗಾರಿಕೆ, ಮನೆ ನಿರ್ಮಾಣ ಸೇರಿದಂತೆ ಅನ್ಯ ಉದ್ದೇಶಗಳಿಗೆ ವರ್ಗಾಯಿಸಲು ಕಾನೂನಿನಲ್ಲಿ ಸಾಧ್ಯವೇ ಇಲ್ಲ. ಆದರೂ ಸರ್ಕಾರವೇ ತಪ್ಪು ಮಾಡಲು ಹೊರಟಿದೆ. ಇದೊಂದು ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದರು. ಯುಪಿಎ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ 2013ರ ಭೂ ಸ್ವಾಧೀನ ಕಾಯಿದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು. ಅದನ್ನು ಬಿಟ್ಟು ರೈತರ ಜೊತೆ ಹುಡುಗಾಟ ಆಡುತ್ತಿದೆ.

ನಾವೆಲ್ಲರೂ ಯಾವುದೇ ಸ್ವಾರ್ಥವಿಲ್ಲದೆ ಜನರೊಟ್ಟಿಗಿದ್ದು ನ್ಯಾಯ ಕೊಡಿಸಲು ಬಂದಿದ್ದೇವೆ. ಎಲ್ಲಿವರೆಗೆ ಸರ್ಕಾರ ಮಣಿಯುವುದಿಲ್ಲವೊ ಅಲ್ಲಿವರೆಗೆ ಹೋರಾಟ ಮುಂದುವರೆಯಲಿದೆ ಎಂದರು. ನಿಮ್ಮ ಕೈಕಾಲು ಹಿಡಿದು ಕಾರಣಕ್ಕೆ ನೀವುಗಳು ಹಾಕಿದ ವೋಟಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಜನರ ಕಷ್ಟಗಳನ್ನು ಕೇಳಬೇಕಾದ ಸರ್ಕಾರವೇ ರೈತರ ಭೂಮಿ ಕಬಳಿಸಿ ಜನ ವಿರೋಧಿಯಾಗಿ ನಡೆದು ಕೊಳ್ಳುತ್ತಿದೆ. ಜನರ ಸೇವೆ ಮಾಡಲು ಅಧಿಕಾರಕ್ಕೆ ಬಂದವರು ಶೇವಿಂಗ್ ಮಾಡುತ್ತಿದ್ದಾರೆ ಎಂದು ಅಶ್ವತ್ಥ ನಾರಾಯಣ ಸರ್ಕಾರದ ಕಾಲೆಳೆದರು.

ಬೈರಮಂಗಲ ಆಸ್ಪತ್ರೆ ಬಳಿಯಿಂದ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಪ್ರಸಾದ್ ಗೌಡ ಅವರನ್ನು ಹಸಿರು ಶಾಲು ಹಾಕಿ, ಅಲಂಕರಿಸಿದ ಎತ್ತಿನ ಬಂಡಿ ಯಲ್ಲಿ ಶ್ರೀ ಆಂಜನೇಯಸ್ವಾಮಿ ದೇವಾಲಯದವರೆಗೆ ಮೆರವಣಿಗೆ ನಡೆಸಿ ರೈತರು ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಕೆಎಸ್ ಐಸಿ ಮಾಜಿ ಅಧ್ಯಕ್ಷ ಗೌತಮ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ರೈತ ಹೋರಾಟಗಾರರಾದ ರಾಮಣ್ಣ, ಪ್ರಕಾಶ್, ನಾಗರಾಜು, ಸೀನಣ್ಣ, ಕೃಷ್ಣಪ್ಪ, ಶೇಷಪ್ಪ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ರೈತರನ್ನು ಒಕ್ಕಲೆಬ್ಬಿಸುವುದು ಭೂ ತಾಯಿಗೆ ಮಾಡುವ ಅನ್ಯಾಯ. ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ಕೊಟ್ಟರು. ಆದರೆ, ಯೋಜನೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಕೈ ಬಿಟ್ಟರು. ಹಾಗಾಗಿ ರಾಜ್ಯ ಸರ್ಕಾರವೂ ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈ ಬಿಡಬೇಕು. ಇಲ್ಲದಿದ್ದರೆ ವಿಧಾನಸಭೆ ಒಳಗೆ ಮತ್ತು ಹೊರಗೆ ಹೋರಾಟ ನಡೆಯಲಿದೆ. ಜನ ಶಕ್ತಿ ಮುಂದೆ ಯಾವ ಶಕ್ತಿ ಯೂ ಇಲ್ಲ.
- ಡಾ.ಸಿ.ಎನ್.ಮಂಜುನಾಥ್ , ಸಂಸದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಟಿಕೆಟ್ ಕಗ್ಗಂಟಿನ ಫೈಟ್‌ನಲ್ಲಿ ಮೆತ್ತಗಾದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ!
ಕಮಲ ಪಾಳೆಯಕ್ಕೆ ಎಂಟ್ರಿಯಾಗ್ತಾರಾ ದಳಪತಿ..? ಮೊದಲ ಯತ್ನದಲ್ಲೇ ಗೆದ್ದು DCM ಆಗ್ತಾರಾ ವಿಜಯ್..?