
ಬಾಗಲಕೋಟೆ(ಏ.05): ಡಾ.ನಂಜುಂಡಪ್ಪ ವರದಿ ಅನ್ವಯ ಅತಿ ಹಿಂದುಳಿದ ತಾಲೂಕೆಂಬ ಹಣೆಪಟ್ಟಿಕಟ್ಟಿಕೊಂಡಿದ್ದ ಬೀಳಗಿ ತಾಲೂಕು ಮತ್ತು ಮತಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ತೊಟ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಈ ಬಾರಿ ಕ್ಷೇತ್ರದ ಜನರು ಅಭಿವೃದ್ಧಿಗೆ ಮತ ನೀಡಿ, ಬಿಜೆಪಿಯನ್ನು ಗೆಲ್ಲಿಸುವ ವಿಶ್ವಾಸವಿದೆ ಸಚಿವ ಮುರುಗೇಶ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.
ಬೀಳಗಿ ಕ್ರಾಸ್ನ ಬಿಜೆಪಿ ಕಚೇರಿಯಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳ ಹಲವಾರು ಮುಖಂಡರು, ಮಹಿಳೆಯರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಬಹುತೇಕ ಗ್ರಾಮಗಳು ಮುಳುಗಡೆಯಾಗಿದ್ದು, ಅವುಗಳ ಪುನರ್ ನಿರ್ಮಾಣ ಕಾರ್ಯ ನಡೆದಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ಟಿಕೆಟ್ಗೆ ಭಾರೀ ಡಿಮ್ಯಾಂಡ್: ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಕಸರತ್ತು..!
ಬೀಳಗಿ ಕ್ಷೇತ್ರದ ಬಾದಾಮಿ ತಾಲೂಕಿನ ಬರಡು ಭೂಮಿಗೆ ನೀರಾವರಿ ಕಲ್ಪಿಸಲು ಕೆರೂರ ಏತ ನೀರಾವರಿ, ಕಾಡರಕೊಪ್ಪ ಏತ ನೀರಾವರಿ ಯೋಜನೆ ಮಂಜೂರಾಗಿವೆ. ಈ ಯೋಜನೆಗಳು ಪೂರ್ಣಗೊಂಡಲ್ಲಿ, ರೈತರ ಬದುಕು ಹಸನಾಗಲಿದೆ ಎಂದರು.
ಚಿಕ್ಕಸಂಗಮದಲ್ಲಿ ಸುಂದರ ಉದ್ಯಾನವನ, ಹೆರಕಲ್ ಬ್ಯಾರೇಜ್ ಎತ್ತರಿಸುವುದು, ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ತುಂಬಿಸುವುದು ನಮ್ಮ ಮಹತ್ವದ ಯೋಜನೆಗಳು. ಜನೋಪಯೋಗಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟವೂ ಸುಧಾರಣೆಯಾಗಲಿದೆ ಎಂದು ತಿಳಿಸಿದರು.
ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿಗೆ:
ಬೀಳಗಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಸಚಿವ ಮುರುಗೇಶ ನಿರಾಣಿ ಅವರ ಸಾಮಾಜಿಕ ಕಾರ್ಯಗಳನ್ನು ಮೆಚ್ಚಿ ಕ್ಷೇತ್ರದ ವಿವಿಧ ಗ್ರಾಮಗಳ ನೂರಾರು ಜನ ಮುಖಂಡರು, ಮಹಿಳೆಯರು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡರು. ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ, ಮಲ್ಲಪ್ಪ ಶಂಭೋಜಿ, ರಮೇಶ ಮೋರಟಗಿ, ಮಲ್ಲಿಕಾರ್ಜುನ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.