'2 ಕ್ಷೇತ್ರಗಳಲ್ಲಿ ಹಣ ಹಂಚಿಕೆ : ಬಿಜೆಪಿ ಮತ್ತು ಜೆಡಿಎಸ್‌ ಒಳ ಒಪ್ಪಂದ'

By Kannadaprabha NewsFirst Published Oct 26, 2021, 6:32 AM IST
Highlights
  •  ಹಾನಗಲ್‌ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದ ಸಮಯದಲ್ಲಿ ಬಿಜೆಪಿ ಹಣ ಹಂಚುತ್ತಿದೆ
  • ಹಣ ಹಂಚುವ ಬಿಜೆಪಿಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ

 ಬೆಂಗಳೂರು (ಅ.26):  ಹಾನಗಲ್‌ (hanagal) ಮತ್ತು ಸಿಂದಗಿ (sindagi) ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ (By Election) ಪ್ರಚಾರದ ಸಮಯದಲ್ಲಿ ಬಿಜೆಪಿ (BJP)) ಹಣ ಹಂಚುತ್ತಿದೆ. ಹಣ ಹಂಚುವ ಬಿಜೆಪಿಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ (Randeep singh surjewala) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ (Congress) ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ನಡೆಯುತ್ತಿರುವ ಹಾನಗಲ್‌ ಮತ್ತು ಸಿಂದಗಿಗೆ ಸಂಬಂಧಿಸಿದಂತೆ ಬಿಜೆಪಿಯ ಬಳಿ ಯಾವುದೇ ಅಜೆಂಡಾ ಇಲ್ಲ. ಎರಡೂ ಕ್ಷೇತ್ರದಲ್ಲಿ ಬಿಜೆಪಿ ಹಣ ಹಂಚುತ್ತಿದ್ದು, ಭ್ರಷ್ಟಸರ್ಕಾರಕ್ಕೆ ಮತದಾರರು ತಕ್ಕ ಉತ್ತರ ಕೊಡಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜನ ಬದಲಾವಣೆ ಬಯಸಿದ್ದು ಕಾಂಗ್ರೆಸ್‌ ಜಯ ಗಳಿಸಿ ಇತಿಹಾಸ ಸೃಷ್ಟಿಸಲಿದೆ ಎಂದು ಹೇಳಿದರು.

'ಬಿಜೆಪಿ ಕಲ್ಯಾಣ ಕರ್ನಾಟಕದ ವಿರೋಧಿ, 371 ಅಡಿಯಲ್ಲಿ ನೇಮಕಾತಿಯೂ ಸಹ ಮಾಡ್ತಿಲ್ಲ'

ಪರದೆಯ ಹಿಂದೆ ಒಪ್ಪಂದ:  ಬಿಜೆಪಿ (BJP) ಮತ್ತು ಜೆಡಿಎಸ್‌ (JDS) ಒಳ ಒಪ್ಪಂದ ಮಾಡಿಕೊಂಡಿವೆಯೇ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಪರದೆಯ ಹಿಂದೆ ಯಾರು ಯಾರ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಬೆಂಬಲಕ್ಕೆ ಯಾವ ಪಕ್ಷವಿದೆ ಎಂದು ರಾಜ್ಯದ ಜನತೆ ಅರಿತಿದ್ದು, ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜೆಡಿಎಸ್‌ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.

ಉಗ್ರಪ್ಪ ಪ್ರಕರಣ, ಬಿಜೆಪಿ ಕುತಂತ್ರ:  ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ವಿರುದ್ಧ ಪಿಸುಮಾತಿನ ಆರೋಪಕ್ಕೆ ತುತ್ತಾಗಿರುವ ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ (VS Ugrappa) ಅವರಿಗೆ ಶಿಸ್ತು ಸಮಿತಿ ಕ್ಲೀನ್‌ಚಿಟ್‌ ನೀಡಿದೆಯಂತೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಇದು ಬಿಜೆಪಿಯ ಷಡ್ಯಂತ್ರದ ಒಂದು ಭಾಗವಾಗಿದೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಮಾಡಿರುವ ಒಳಸಂಚಿದು. ಅನಗತ್ಯ ವಿಚಾರಗಳನ್ನು ಹಬ್ಬಿಸುತ್ತಾ ಎಲ್ಲರನ್ನೂ ಮೂರ್ಖರನ್ನಾಗಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್‌, ಡೀಸೆಲ್, ಅಡುಗೆ ಎಣ್ಣೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಆದರೆ ಈ ವಿಷಯಗಳನ್ನು ಬಿಟ್ಟು ಬೇರೆಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮತದಾರರು ಇದನ್ನೆಲ್ಲಾ ಗಮನಿಸುತ್ತಿದ್ದು, ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

click me!