
ರಾಮಮೂರ್ತಿ ನವಲಿ
ಗಂಗಾವತಿ (ಡಿ.26) : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಘೋಷಣೆಯಿಂದಾಗಿ ಬಿಜೆಪಿ ಆಕಾಂಕ್ಷಿಗಳು ನಿರಾಳರಾಗಿದ್ದರೆ, ಕಾಂಗ್ರೆಸ್ ಆಕಾಂಕ್ಷಿಗಳು ನಾನಾ ಲೆಕ್ಕಾಚಾರದಲ್ಲಿದ್ದಾರೆ. ಕಳೆದ 15 ದಿನಗಳಿಂದ ಗಂಗಾವತಿ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದ ಜನಾರ್ದನ ರೆಡ್ಡಿ ಅವರು ಇದೀಗ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಗಂಗಾವತಿ ನಗರದಲ್ಲಿ ಹೊಸ ಮನೆ ಖರೀದಿಸಿದ್ದಲ್ಲದೆ ಬಿಜೆಪಿ ಮತ್ತು ಕಾಂಗ್ರೆಸ್ ಮತದಾರರನ್ನು ಸೆಳೆಯುವ ತಂತ್ರಗಾರಿಕೆಗೆ ರೆಡ್ಡಿ ಮುಂದಾಗಿದ್ದಾರೆ. ಇದಕ್ಕೆ ಸಾಕ್ಷಿಯಂತೆ ಬಿಜೆಪಿ ಕಾರ್ಯಕರ್ತರ ನಿವಾಸಗಳಿಗೆ ತೆರಳಿ ಕುಶಲೋಪರಿ ವಿಚಾರಿಸಿದರೆ, ಕಾಂಗ್ರೆಸ್ ಮತ ಸೆಳೆಯುವುದಕ್ಕೆ ಮಸೀದಿ, ದರ್ಗಾಗಳಿಗೆ ತೆರಳಿ ಅನುದಾನದ ಭರವಸೆ ನೀಡಿದ್ದಾರೆ.
ಕ್ಷೇತ್ರದಲ್ಲೇ ಸ್ಪರ್ಧೆ ಖಚಿತ:
ಗಂಗಾವತಿಯಿಂದ ರೆಡ್ಡಿ ಸ್ಪರ್ಧಿಸಲು ಮುಂದಾಗಿದ್ದಾರೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ರೆಡ್ಡಿ ನಿರ್ಧರಿಸಿದ್ದಾರೆ. ಇದರಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ನಿರಾಳರಾಗಿದ್ದಾರೆ. ಬಿಜೆಪಿಯಿಂದ ಶಾಸಕ ಪರಣ್ಣ ಮುನವಳ್ಳಿ, ಪಕ್ಷದ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಸೇರಿದಂತೆ ಕೆಲವರ ಹೆಸರು ಕೇಳಿ ಬರುತ್ತಿತ್ತು.
ಲೆಕ್ಕಾಚಾರದಲ್ಲಿ ಕಾಂಗ್ರೆಸ್:
ಈಗಾಗಲೇ ಕಾಂಗ್ರೆಸ್ನಲ್ಲಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಲು ಮೂವರು ಆಕಾಂಕ್ಷಿಗಳಿಂದ ಅರ್ಜಿ ಪಡೆದಿದ್ದಾರೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ಸಾರಿ ಹೆಸರು ಘೋಷಣೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಕಣಕ್ಕೆ ಇಳಿಯುತ್ತಿರುವುದು ಬಹುತೇಕ ಖಚಿತವಾಗಿದ್ದರಿಂದ ಕಾಂಗ್ರೆಸ್ ಲೆಕ್ಕಾಚಾರದಲ್ಲಿದೆ.
ರೆಡ್ಡಿ ಸ್ಪರ್ಧೆಯಿಂದ ತೊಂದರೆಯಿಲ್ಲ; ಗೆಲುವು ನನ್ನದೇ ಎಂದ ಶಾಸಕ ಪರಣ್ಣ
ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ. 2023ಕ್ಕೆ ನಡೆಯುವ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಚುನಾವಣೆಗೆ ಸ್ಪರ್ಧಿಸಬಹುದು. ಇನ್ನೊಬ್ಬರು ಸ್ಪರ್ಧಿಸುವ ವಿಚಾರಕ್ಕೆ ನಾನೇಕೆ ಮಾತನಾಡಬೇಕು?
ಪರಣ್ಣ ಮುನವಳ್ಳಿ, ಶಾಸಕರು, ಗಂಗಾವತಿ
ಗಂಗಾವತಿ ಕ್ಷೇತ್ರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪರ್ಧಿಸುವುದರಿಂದ ಬಿಜೆಪಿಗೆ ನಷ್ಟ. ಇದರಿಂದ ಕಾಂಗ್ರೆಸ್ಗೆ ಅಡ್ಡಿಯಾಗುವುದಿಲ್ಲ. ರಾಜ್ಯದಲ್ಲಿ ಸಹ ರೆಡ್ಡಿ ಪಕ್ಕ$ಸ್ಪರ್ಧಿಸುವುದರಿಂದ ರಾಜ್ಯದ ಬಿಜೆಪಿಗೆ ಧಕ್ಕೆಯಾಗುತ್ತಿದೆ. ನನಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಖಚಿತವಾಗಿದೆ. ನಾನು ಜಯ ಸಾಧಿಸುತ್ತೇನೆ.
ಎಚ್.ಆರ್. ಶ್ರೀನಾಥ, ವಿಧಾನಪರಿಷತ್ ಮಾಜಿ ಸದಸ್ಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.