
ಬೆಳಗಾವಿ(ಜ.31): ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೈತರ ಸಬಲೀಕರಣಕ್ಕೆ ಹಲವಾರು ಯೋಜನೆ ಜಾರಿಗೊಳಿಸಿದ್ದು, ದೇಶದ ಕೋಟ್ಯಂತರ ರೈತರು ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಬಿಜೆಪಿ ರೈತ ಪರವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಹೇಳಿದರು.
ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರ ಕಲ್ಯಾಣ ಯೋಜನೆಗಳ ಮಾಹಿತಿಯನ್ನು ತಳಮಟ್ಟದ ರೈತರಿಗೆ ತಲುಪಿಸುವಂತೆ ಮನವಿ ಮಾಡಿದರು. ಗ್ರಾಮ, ಪಾರಂಪರಿಕ ಸಾವಯವ ಕೃಷಿ ಹಾಗೂ ರೈತರಿಗಾಗಿ ಇರುವ ಯೋಜನೆಗಳನ್ನು ತಳಮಟ್ಟದ ರೈತರಿಗೆ ಮಾಹಿತಿ ನೀಡಬೇಕು. ಈ ಮೂರು ಸೂತ್ರಗಳನ್ನು ಪಕ್ಷದ ರೈತಮೋರ್ಚಾ ಕಾರ್ಯಕರ್ತರು ಮೈಗೂಡಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
CD WAR: ಮಹಾನಾಯಕ ಎಲ್ಲಿ ಹೋಗಿ ಪ್ಯಾಂಟ್, ಲುಂಗಿ ಬಿಚ್ತಾರೆ ಗೊತ್ತಿದೆ: ಲಖನ್ ಜಾರಕಿಹೊಳಿ ಆರೋಪ
ಇದೇ ವೇಳೆ ವಿವಿಧ ರಾಜ್ಯಗಳ ರೈತ ಪ್ರತಿನಿಧಿಗಳು ತಮ್ಮ ಸಮಸ್ಯೆಗಳನ್ನು ಬಿ.ಎಲ್.ಸಂತೋಷ ಅವರ ಮುಂದೆ ಮಂಡಿಸಿ, ವಿವಿಧ ಬೇಡಿಕೆ ಈಡೇರಿಸುವಂತೆ ಪಕ್ಷದ ವರಿಷ್ಠರ ಗಮನ ಸೆಳೆಯುವಂತೆ ಮನವಿ ಮಾಡಿದರು.
ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರಾಜಕುಮಾರ ಚಹಾರ್ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಈ ವರ್ಷ ನಾಲ್ಕು ವರ್ಷಗಳನ್ನು ಪೂರೈಸಲಿದೆ. ಇದೇ ಸಂದರ್ಭದಲ್ಲಿ ಫೆ.24ರಂದು ದೇಶಾದ್ಯಂತ ಎಲ್ಲ ಜಿಲ್ಲಾ ಮಟ್ಟದಲ್ಲಿ ಬೃಹತ್ ರೈತ ಸಮಾವೇಶ ಹಮ್ಮಿಕೊಳ್ಳಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾಗಿರುವ ಸಾಂಪ್ರದಾಯಿಕ ಕೃಷಿ ಅಭಿಯಾನವನ್ನು ನಿರಂತರವಾಗಿ ಅನುಷ್ಠಾನ ಮಾಡಲಾಗುವುದು ಹಾಗೂ ಕಿಸಾನ್ ಮೋರ್ಚಾವನ್ನು ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲದೆ ನಗರ ಪ್ರದೇಶದಲ್ಲೂ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ರಮೇಶ್ ಜಾರಕಿಹೊಳಿಗೆ ಸುಳ್ಳು ಹೇಳುವ ಚಟವಿದೆ: ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ
ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ನಾನಾ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇಂಧನ ಯೋಜನೆಯಡಿ ಸಬ್ಸಿಡಿ ದರದಲ್ಲಿ ಡೀಸೆಲ್ ಮಾರಾಟ ಮಾಡಲಾಗುವುದು. ಈ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದರು.
ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಸ್ವಾಗತಿಸಿದರು. ಕರ್ನಾಟಕ ಕಿಸಾನ್ ಮೋರ್ಚಾದ ಉಸ್ತುವಾರಿ ಹಾಗೂ ಬಿಜೆಪಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎನ್.ರವಿಕುಮಾರ್, ಶಾಸಕ ಅನಿಲ್ ಬೆನಕೆ, ರಾಜ್ಯವಕ್ತಾರ ಎಂ.ಬಿ.ಜಿರಲಿ, ಮಾಜಿ ಶಾಸಕ ಸಂಜಯ ಪಾಟೀಲ, ಜಗದೀಶ ಮೆಟಗುಡ್ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.