
ಬೆಂಗಳೂರು (ಫೆ.25): ರಾಜ್ಯದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದನ್ನು ಬಿಜೆಪಿಯವರಿಗೆ ನೋಡಿಕೊಂಡು ಸಹಿಸಿಕೊಳ್ಳಲಾಗುತ್ತಿಲ್ಲ. ಹೇಗಾದರೂ ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಉದ್ದೇಶ ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಡವರಿಗೆ ಹಣ ಕೊಡುವುದು ಬಿಜೆಪಿಯವರಿಗೆ ಮನಸ್ಸಿಲ್ಲ ಎಂದರೆ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಯವರು ಬಡವರ ಪರ ಇಲ್ಲ. ಪ್ರತಿಭಟನೆ ಮೂಲಕ ಸಾರ್ವಜನಿಕವಾಗಿ ಅದನ್ನು ಹೇಳಲು ಹೊರಟಿದ್ದಾರೆ. ಇದೆಲ್ಲವನ್ನು ಜನ ಗಮನಿಸುತ್ತಾರೆ. ದಲಿತರು ಮೀಸಲಿಟ್ಟ ಹಣವನ್ನು ದಲಿತರಿಗೆ ನೀಡುತ್ತಿದ್ದೇವೆ. ಸರ್ಕಾರದಲ್ಲಿ ಇಂಥಹ ಯೋಜನೆಗಳನ್ನು ಮಾಡಿದಾಗ ಯೋಚಿಸಿಯೇ ತೀರ್ಮಾನ ಕೈಗೊಂಡಿರುತ್ತೇವೆ. ಒಂದಷ್ಟು ಬದಲಾವಣೆಗಳಾದರೆ ಹಣ ಬಳಸಿರುತ್ತಾರೆ. ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಕೊಳ್ಳೆ ಹೊಡೆಯಲಾಗಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಯಾಕೆ ನೀಡಬಾರದು ಎಂದು ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತುಮಕುರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಲಹೆ ನೀಡಿದರು. ವಿಪಕ್ಷದವರು ಸಲಹೆ ನೀಡಿದರೆ ಚರ್ಚೆ ಮಾಡುವುದಾಗಿ ಈ ವೇಳೆ ಹೇಳಿದ್ದೇನೆ. ಸ್ವಯಂಪ್ರೇರಿತವಾಗಿ ಅನೇಕ ಜನ ಗ್ಯಾರಂಟಿ ಯೋಜನೆಗಳನ್ನು ಬಿಡುತ್ತಿದ್ದಾರೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು ಸೇರಿದಂತೆ ಬಹಳಷ್ಟು ಜನ ಬಿಟ್ಟಿದ್ದಾರೆ. ಅದನ್ನು ಮುಂದುವರಿದು ಬಡವರಿಗಾಗಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಗತ್ಯತೆಯ ಬಗ್ಗೆ ಚರ್ಚೆ ಮಾಡಬೇಕು. ನಂತರ ಏನೆಂಬುದು ಗೊತ್ತಾಗಲಿದೆ. ಸಾಧಕ-ಬಾಧಕಗಳನ್ನು ಚರ್ಚಿಸಬೇಕು. ಚುನಾವಣೆ ಸಂದರ್ಭದಲ್ಲಿ ಬರೀ ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಎಂದು ಹೇಳಿರಲಿಲ್ಲ. ಚರ್ಚೆ ಮಾಡಿದ ಮೇಲೆ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: 'ಕ್ಷೇತ್ರದ ಜನರಿಗೆ ಸ್ಪಂದಿಸಲು ಆಗುತ್ತಿಲ್ಲ', ಪದತ್ಯಾಗದ ಬಗ್ಗೆ ಪರಮೇಶ್ವರ್ ಅಚ್ಚರಿಯ ಹೇಳಿಕೆ!
ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಡವರಿಗಾಗಿ ಯೋಜನೆಗಳನ್ನು ನೀಡಿದ್ದರಿಂದ ಹೊರೆಯಾಗಿದೆ? ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತದೆ ಎಂಬುದು ಗೊತ್ತಿತ್ತು. ಬಡವರಿಗಾಗಿ ಕೊಡುವ ಕಾರ್ಯಕ್ರಮಗಳಿಂದ ಹೊರೆಯಾಗಲೇಬೇಕು. ಈ ವಿಚಾರ ಗೊತ್ತಿದ್ದೆ ಮಾಡಿದ್ದೇವೆ. ಬೆಳಗಾವಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ವಲಯ ಐಜಿಪಿ, ಎಸ್ಪಿಯವರಿಗೆ ಸೂಚಿಸಿದ್ದೇನೆ. ಬಸ್ ನಿರ್ವಾಹಕನ ಮೇಲೆ ಯಾತಕ್ಕಾಗಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಪರಿಶೀಲಿಸಿ ವರದಿ ನೀಡುವಂತೆ ಹೇಳಿದ್ದೇನೆ ಎಂದರು.
ಇಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮಾಡಲು ಅವಕಾಶ ನೀಡಲಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸಬೇಕು. ಒಂದುವೇಳೆ ಗಲಾಟೆ ಮಾಡಿದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂಬುದನ್ನು ಹೇಳಿದ್ದೇವೆ. ಮಹಾರಾಷ್ಟ್ರ ಸರ್ಕಾರದ ಬಸ್ಗಳು ಬರುತ್ತಿಲ್ಲ. ಕರ್ನಾಟಕದ ಬಸ್ಗಳು ಹೋಗುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಎರಡು ರಾಜ್ಯಗಳ ಬಸ್ ಸಂಚಾರ ನಿಲ್ಲಿಸಲಾಗಿದೆ. ವಾತಾವರಣ ತಿಳಿಯಾದ ಮೇಲೆ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ದಲಿತರ ಹಣ ಗ್ಯಾರಂಟಿಗೆ ಬಳಕೆ: ದಿನೇಶ್ ಗುಂಡೂರಾವ್ ಸಮರ್ಥನೆ
ಉದಯಗಿರಿ ಗಲಾಟೆಗೆ ಸಂಬಂಧಿಸಿಂತೆ ನಾವು ಬಿಜೆಪಿಯವರ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡಿಲ್ಲ. ಬೇರೆಬೇರೆ ರೀತಿಯ ಬೆಳವಣಿಗೆಗಳಾಗಬಾರದು ಎಂಬ ಕಾರಣಕ್ಕೆ ಎರಡು ಕಡೆಯವರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಿರಲಿಲ್ಲ. ಕೋರ್ಟ್ಗೆ ಹೋಗಿದ್ದರು. ಕೋರ್ಟ್ ಆದೇಶದ ಮೇಲೆ ಮೈದಾನದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಘಟನೆಯಲ್ಲಿ ರಾಜಕಾರಣ ಮಾಡಬೇಡಿ ಎಂದು ಹೇಳಿದ್ದೇನೆ. ಜೊತೆಗೆ, ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಯವರು ಹೇಳಿದ್ದಾರೆ. ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತಾರೆ ಎಂದು ತಿಳಿಸಿದರು.
ಮುಂದಿನ ಚುನಾವಣೆ ನನ್ನ ನಾಯಕತ್ವದಲ್ಲಿ ನಡೆಯಲಿದೆ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪರಮೇಶ್ವರ ಅವರು ಮಾಧ್ಯಮದವರನ್ನು ಪ್ರಶ್ನಿಸಿದರು. ಅದೆಲ್ಲ ಹೈಕಮಾಂಡ್ಗೆ ಬಿಡುವಂತದ್ದು. ಹೈಕಮಾಂಡ್ ಮತ್ತು ಅಧ್ಯಕ್ಷರ ಮಧ್ಯೆ ನಾವು ಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.